Cabinet meeting: ನಂದಿ ಗಿರಿಧಾಮದಲ್ಲಿ ಜುಲೈ 2ಕ್ಕೆ ಸಚಿವ ಸಂಪುಟ ಸಭೆ, ಸರ್ಕಾರ ನಿರ್ಧಾರ

ಕೋಲಾರ ಜಿಲ್ಲೆಯಲ್ಲಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಣೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಸ್ವಾಧೀನ ಕೈಬಿಡುವಂತೆ ರೈತರ ಪ್ರತಿಭಟನೆ ನಡೆಸುತ್ತಿದ್ದರಿಂದ ಕೊನೆ ಕ್ಷಣದಲ್ಲಿ ಸಂಪುಟ ಸಭೆ ಸ್ಥಳ ಬದಲಾವಣೆ ಮಾಡಲಾಗಿತ್ತು.;

Update: 2025-06-20 10:54 GMT

ಚಿಕ್ಕಬಳ್ಳಾಪುರದಲ್ಲಿನ ನಂದಿ ಗಿರಿಧಾಮ 

ಜೂನ್‌ 19 ರಂದು ನಂದಿ ಗಿರಿಧಾಮದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ದಿಢೀರ್‌ ರದ್ದಾಗಿ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಮತ್ತೊಮ್ಮೆ ಜುಲೈ 2ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ.

ಬಯಲು ಸೀಮೆಯ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಜ್ವಲಂತ ಸಮಸ್ಯೆಗಳಾದ ಕುಡಿಯುವ ನೀರಿನ ಯೋಜನೆ, ಮಾವು ಬೆಳೆಗೆ ಬೆಂಬಲ ಬೆಲೆ ಘೋಷಣೆ, ಕೋಲಾರಕ್ಕೆ ಮೆಡಿಕಲ್‌ ಕಾಲೇಜು ಮಂಜೂರು ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು 4,000 ಕೋಟಿ ರೂ. ಅನುದಾನ ನೀಡಬೇಕು ಎಂದು ಇಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.

ಕೋಲಾರ ಜಿಲ್ಲೆಯಲ್ಲಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಣೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಸ್ವಾಧೀನ ಕೈಬಿಡುವಂತೆ ರೈತರ ಪ್ರತಿಭಟನೆ ನಡೆಸುತ್ತಿದ್ದು, ಸಂಪುಟ ಸಭೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರಣ ಕೊನೆ ಕ್ಷಣದಲ್ಲಿ ಸ್ಥಳ ಬದಲಾವಣೆ ಮಾಡಲಾಗಿತ್ತು. ಸಂಪುಟ ಸಭೆಯ ಅಜೆಂಡಾದಲ್ಲಿ ಸ್ಥಳೀಯವಾಗಿ ಎರಡು ವಿಷಯಗಳ ಚರ್ಚೆಯನ್ನು ಮಾತ್ರ ತೆಗೆದುಕೊಳ್ಳಲಾಗಿತ್ತು. ಅಲ್ಲದೇ ಬಯಲು ಸೀಮೆ ಜಿಲ್ಲೆಗಳಿಗೆ ಯಾವುದೇ ವಿಶೇಷ ಯೋಜನೆ ಘೋಷಿಸುವ ಪ್ರಸ್ತಾಪ ಅಜೆಂಡಾದಲ್ಲಿ ಇಟ್ಟಿರಲಿಲ್ಲ. ಈ ಬಗ್ಗೆ ಬಯಲು ಸೀಮೆಯ ರೈತರು ಹಾಗೂ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಮಾವಿಗೆ ಬೆಂಬಲ ಬೆಲೆ ಘೋಷಿಸಬಹುದೇ ?

ಆಂಧ್ರ ಪ್ರದೇಶ ಮಾದರಿಯಲ್ಲಿ ಮಾವಿಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಕಳೆದ ಕೆಲವು ದಿನಗಳಿಂದ ಕೋಲಾರ ಹಾಗೂ ಶ್ರೀನಿವಾಸಪುರದಲ್ಲಿ ಮಾವು ಬೆಳೆಗಾರರು ತೀವ್ರ ಹೋರಾಟ ನಡೆಸುತ್ತಿದ್ದಾರೆ. ಜೂ. 19ರಂದು ನಂದಿ ಗಿರಿಧಾಮದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಬೆಂಬಲ ಬೆಲೆ ಘೋಷಿಸುತ್ತದೆ ಎಂದು ರೈತರು ಭಾರಿ ನಿರೀಕ್ಷೆಯಲ್ಲಿದ್ದರು. ಆದರೆ ಸಚಿವ ಸಂಪುಟ ಸಭೆ ಬೆಂಗಳೂರಿಗೆ ಸ್ಥಳಾಂತರಗೊಂಡಿತ್ತು. ಗುರುವಾರ ನಡೆದ (ಜೂ.19) ಸಂಪುಟ ಸಭೆಯಲ್ಲಿ ಮಾವಿಗೆ ಬೆಂಬಲ ಬೆಲೆ ಘೋಷಿಸಿರಲಿಲ್ಲ.  ಹೀಗಾಗಿ ರೈತರು ಬೇಸರಗೊಂಡಿದ್ದರು. 

ಬಯಲು ಸೀಮೆ ಜಿಲ್ಲೆಗಳ ಸಮಸ್ಯೆಗಳೇನು?

ಬಯಲು ಸೀಮೆ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಿದ್ದು, ನೀರಾವರಿ ಕನಸು ಅನಿಶ್ಚಿತವಾಗಿದೆ. ಕೆ.ಸಿ. ವ್ಯಾಲಿ ಹಾಗೂ ಎಚ್‌.ಎನ್‌. ವ್ಯಾಲಿ ಯೋಜನೆ ಮೂಲಕ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು ಪೂರೈಸುತ್ತಿದ್ದರೂ ಮತ್ತಷ್ಟು ಸಮಸ್ಯೆ ತಂದೊಡ್ಡಿದೆ.

ಎರಡು ಹಂತದ ಶುದ್ದೀಕರಣವಾದರೂ ಕಲುಷಿತ ನೀರು ಕೆರೆಗಳಿಗೆ ಸೇರುತ್ತಿದ್ದು, ಅಂತರ್ಜಲವನ್ನು ಕಲುಷಿತಗೊಳಿಸುತ್ತಿದೆ. ಮೂರನೇ ಹಂತದ ಶುದ್ದೀಕರಣ ನಡೆಸುವಂತೆ ರೈತರು ಒತ್ತಾಯಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಈ ವಿಷಯ ಕುರಿತಂತೆಯೂ ಸಂಪುಟದಲ್ಲಿ ಚರ್ಚಿಸಬೇಕು ಎಂಬ ಆಗ್ರಹ ರೈತ ಸಮುದಾಯದಿಂದ ಕೇಳಿ ಬಂದಿತ್ತು. ಅಲ್ಲದೇ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ರದ್ದುಗೊಳಿಸಲಾಗಿತ್ತು ಎನ್ನಲಾಗಿದೆ. 

Tags:    

Similar News