ಬಿ.ಕೆ. ಹರಿಪ್ರಸಾದ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ; ಸಂಪುಟ ವಿಸ್ತರಣೆಯ ಚರ್ಚೆ?

ದಿನೇ ದಿನೇ ಸಿಎಂ ಸಿದ್ದರಾಮಯ್ಯನವರು ಶಾಸಕರ ಜತೆಗೆ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ನಡೆ ಭಾರಿ ಕುತೂಹಲ ಕೆರಳಿಸಿದೆ.;

Update: 2025-05-29 05:44 GMT

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿ.ಕೆ.ಹರಿಪ್ರಸಾದ್‌ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಈ ಭೇಟಿಯು ಕಾಂಗ್ರೆಸ್ ಪಕ್ಷದ ಒಳಗಿನ ರಾಜಕೀಯ ಬೆಳವಣಿಗೆಗಳು ಮತ್ತು ಸರ್ಕಾರದ ಮುಂದಿನ ಕಾರ್ಯತಂತ್ರದ ಭಾಗವಾಗಿದೆ ಎನ್ನಲಾಗಿದೆ. ಪ್ರಮುಖವಾಗಿ ಸಂಪುಟ ಪುನಾರಚನೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ.

ವಿಧಾನಸಭೆ ಚುನಾವಣೆಯ ನಂತರ ಸರ್ಕಾರ ರಚನೆಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿ.ಕೆ. ಹರಿಪ್ರಸಾದ್ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಉಂಟಾಗಿದ್ದವು. ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನದ ವಿರುದ್ಧ ಕೆಲವು ಟೀಕೆಗಳನ್ನು ವ್ಯಕ್ತಪಡಿಸಿದ್ದರು, ಇದರಿಂದಾಗಿ ಇಬ್ಬರ ನಡುವೆ ತಿಕ್ಕಾಟದ ವಾತಾವರಣ ಸೃಷ್ಟಿಯಾಗಿತ್ತು. ವಸತಿ ಸಚಿವ ಜಮೀರ್ ಅಹಮದ್ ಖಾನ್ ಈ ಭೇಟಿಯ ವೇಳೆ ಜತೆಗಿದ್ದರು.

ಈ ಭೇಟಿಯು ಕಾಂಗ್ರೆಸ್ ಸರ್ಕಾರದ ಸಂಪುಟ ಪುನರ್ ರಚನೆ ಮತ್ತು ಎರಡೂವರೆ ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯ ಹಿನ್ನೆಲೆಯಲ್ಲಿ ನಡೆದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಗಮನ ಸೆಳೆದಿದೆ.

2023ರಲ್ಲಿ ಹರಿಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಟೀಕೆಗಳನ್ನು ವ್ಯಕ್ತಪಡಿಸಿದ್ದಾಗ, ಎಐಸಿಸಿಯಿಂದ ಅವರಿಗೆ ಶೋಕಾಸ್ ನೋಟಿಸ್ ಜಾರಿಯಾಗಿತ್ತು. ಆದರೆ, ಈಗ ಇಬ್ಬರೂ ನಾಯಕರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಸರ್ಕಾರದ ಯಶಸ್ಸಿಗೆ ಒಗ್ಗಟ್ಟಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಮುಂದಾಗಿದ್ದಾರೆ ಎನ್ನಲಾಗಿದೆ.

Tags:    

Similar News