ಡಿಸಿಎಂ ಮಳೆ ಹಾನಿ ಪರಿಶೀಲನೆ ; ಪ್ರವಾಹ ವೀಕ್ಷಣೆಗೋ, ಒತ್ತುವರಿದಾರರ ರಕ್ಷಣೆಗೋ ಎಂದು ಕುಟುಕಿದ ಕೇಂದ್ರ ಸಚಿವ ಎಚ್ಡಿಕೆ
ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ 'ಭಾರೀ ಆಸಾಮಿ'ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ ಎಂದರು.;
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಹೋಗಿದ್ದು ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ಒತ್ತುವರಿದಾರರ ರಕ್ಷಣೆಗೋ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮೇ 29 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಳೆ ಹಾನಿ ಪರಿಶೀಲನೆಗಾಗಿ ಮಾನ್ಯತಾ ಟೆಕ್ ಪಾರ್ಕ್ಗೆ ಭೇಟಿ ನೀಡಿದ್ದರು. ಇದಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದರಿಂದ ರಾಜಕಾಲುವೆ ಪುನೀತವಾಗಿದೆ. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ 'ಭಾರೀ ಆಸಾಮಿ'ಯೊಬ್ಬರ ಕಟ್ಟಡ ಕಣ್ಣಿಗೆ ಕಾಣಲಿಲ್ಲವೆ?, ರಾಜಾರೋಷವಾಗಿ ರಾಜಕಾಲುವೆ ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರ ಎತ್ತಲಿಲ್ಲ, ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ. ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು, ತಾಕತ್ತು ನಿಮಗೆ ಇದೆಯಾ ಡಿ.ಕೆ. ಶಿವಕುಮಾರ್ ಅವರೇ?, ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ?, ಒಂದು ವೇಳೆ ನೀಡಿದ್ದರೆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕುಳಿತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ. ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ. ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.