ಬೆಂಗಳೂರಿನಲ್ಲಿ 4 ಸಾವಿರ ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು
ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸೂಚನೆ ಮೇರೆಗೆ ಕಾಡುಗೋಡಿಯ ಪ್ಲಾಂಟೇಷನ್ನ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸೋಮವಾರ(ಜೂ.23) ಬೆಳಿಗ್ಗೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಒತ್ತುವರಿ ತೆರವು ಮಾಡಿದ್ದಾರೆ.;
ಅರಣ್ಯ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವುಗೊಳಿಸಿದರು.
ಬೆಂಗಳೂರಿನ ಹೊರವಲಯದ ಕಾಡುಗೋಡಿ ಪ್ಲಾಂಟೇಷನ್ನ ಸುಮಾರು 4,000 ಕೋಟಿ ರೂ. ಮೌಲ್ಯದ 120 ಎಕರೆ ಅರಣ್ಯ ಭೂಮಿಯನ್ನು ಅಧಿಕಾರಿಗಳು ತೆರವುಗೊಳಿಸಿ ವಶಕ್ಕೆ ಪಡೆದಿದ್ದಾರೆ.
ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ನ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸೋಮವಾರ(ಜೂ.23) ಬೆಳಿಗ್ಗೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಒತ್ತುವರಿ ತೆರವು ಮಾಡಿ, ಗಡಿ ಗುರುತಿಸಿ ಬೇಲಿ ಹಾಕಿ, ಸ್ಥಳೀಯ ಪ್ರಭೇದದ ಸಸಿಗಳನ್ನು ನೆಟ್ಟಿದ್ದಾರೆ. ವಶಪಡಿಸಿಕೊಂಡಿರುವ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 4,000 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಕಾಡುಗೋಡಿ ಅರಣ್ಯ ಪ್ರದೇಶ ಕುರಿತಂತೆ ಇತ್ತೀಚೆಗೆ ಸಭೆ ನಡೆಸಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ, ಬೆಂಗಳೂರು ವ್ಯಾಪಕವಾಗಿ ಬೆಳೆಯುತ್ತಿದ್ದು, ದಿನದಿಂದ ದಿನಕ್ಕೆ ಹಸಿರು ಹೊದಿಕೆ ಕ್ಷೀಣಿಸುತ್ತಿದೆ. ಹೀಗಾಗಿ ಅರಣ್ಯಗಳನ್ನು ಸಂರಕ್ಷಣೆ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದರು.
ಬೆಂಗಳೂರಿನಲ್ಲಿ ಒಟ್ಟು 248 ಎಕರೆ ಅರಣ್ಯ ಒತ್ತುವರಿ ತೆರವು
ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಳೆದ 2 ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 128 ಎಕರೆ ಅರಣ್ಯ ಭೂಮಿ ಒತ್ತವರಿ ತೆರವುಗೊಳಿಸಲಾಗಿತ್ತು. ಕಾಡುಗೋಡಿ ಪ್ಲಾಂಟೇಷನ್ನ 120 ಎಕರೆ ಸೇರಿದರೆ, ಒಟ್ಟು 248 ಎಕರೆ ಆಗಲಿದ್ದು ಇದರ ಮಾರುಕಟ್ಟೆ ಮೌಲ್ಯ 8,000 ಸಾವಿರ ಕೋಟಿ ರೂ. ಗೂ ಅಧಿಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.