ಕರಾವಳಿ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ
ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು, ಉಡುಪಿ ಜಿಲ್ಲಾದ್ಯಂತ ಎಲ್ಲಾ ಮಾದರಿ ಶಾಲೆ, ಅಂಗನವಾಡಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.;
ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿದ್ದು ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಆರೆಂಜ್ ಅಲರ್ಟ್ ಘೋಷಣೆ
ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಶಿವಮೊಗ್ಗ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳಿಗೆ ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಉಡುಪಿ ಜಿಲ್ಲಾದ್ಯಂತ ಎಲ್ಲಾ ಮಾದರಿ ಶಾಲೆ, ಅಂಗನವಾಡಿಗೆ ರಜೆ ನೀಡಿದ್ದು, ದಕ್ಷಿಣ ಕನ್ನಡದಲ್ಲಿ 5 ತಾಲೂಕುಗಳು ಹಾಗೂ ಶಿವಮೊಗ್ಗದಲ್ಲಿ ಸಾಗರ ಹಾಗೂ ಹೊಸನಗರ ತಾಲೂಕುಗಳಿಗೆ ರಜೆ ನೀಡಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹೆದ್ದಾರಿಯಲ್ಲಿ ಗುಡ್ಡ ಕುಸಿತ
ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೊಲ್ಲಾಪುರದಿಂದ ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ರ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ರಸ್ತೆಗೆ ಅಡ್ಡಲಾಗಿ 40 ಅಡಿ ಎತ್ತರದಿಂದ ರಸ್ತೆಗೆ ಅಡ್ಡಲಾಗಿ ಮಣ್ಣು, ಮರ, ಬಂಡೆಗಳು ಬೀದ್ದಿವೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ವಾಹನ ಸಂಚಾರವನ್ನು ನಿಷೇಧಿಸಿದ್ದು ಬಿದರಗೋಡು, ಆಗುಂಬೆ, ಉಡುಪಿ ಮಾರ್ಗದಲ್ಲಿ ವಾಹನಗಳು ಸಂಚರಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಆದರೆ, ಬದಲಿ ಮಾರ್ಗಗಳು ತೀರಾ ಕಿರಿದಾಗಿದ್ದು, ಭಾರೀ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.
ಪಣಂಬೂರಿನಲ್ಲಿ ಹೆಚ್ಚು ಮಳೆ
ಭಾನುವಾರ(ಜೂ.16) ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಪಣಂಬೂರಿನಲ್ಲಿ 21 ಸೆಂ.ಮೀ, ಮಂಗಳೂರು 17, ಕೊಟ್ಟಿಗೆಹಾರ 15, ಬಂಟ್ವಾಳ 14, ಬೆಳ್ತಂಗಡಿ, ಮೂಡುಬಿದಿರೆ ಹಾಗೂ ಭಾಗಮಂಡಲದಲ್ಲಿ ತಲಾ 13, ಉಪ್ಪಿನಂಗಡಿ, ಮಾಣಿ, ಮಂಕಿಯಲ್ಲಿ ತಲಾ 11, ಕದ್ರಾ, ಧರ್ಮಸ್ಥಳದಲ್ಲಿ ತಲಾ 9. ಉಡುಪಿ, ಕಾರ್ಕಳದಲ್ಲಿ 8, ಪುತ್ತೂರು, ಲೋಂಡಾ, ಆಗುಂಬೆಯಲ್ಲಿ ತಲಾ 7, ಗೆರುಸೊಪ್ಪ, ಮುಲ್ಕಿ ತಲಾ 6, ಕುಂದಾಪುರ, ಕಾರವಾರ, ಹೊನ್ನಾವರ, ಶೃಂಗೇರಿಯಲ್ಲಿ ತಲಾ 5, ನಾಪೋಕ್ಲು, ಸೋಮವಾರಪೇಟೆ, ಗೋಕರ್ಣ ಹಾಗೂ ಖಾನಾಪುರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.