Stampede | ಆರ್‌ಸಿಬಿ ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ನಾನೇ; ಒಪ್ಪಿಕೊಂಡ ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಈ ಮೊದಲು ನಾನು ರಾಜ್ಯಪಾಲರನ್ನು ಆಹ್ವಾನಿಸಿಲ್ಲ ಎಂದಿದ್ದರು.;

Update: 2025-06-11 13:01 GMT

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಸಿದ್ದರಾಮಯ್ಯ

 ಆರ್‌ಸಿಬಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರಿಗೆ ಆಹ್ವಾನ ನೀಡಿದ್ದವರು ಯಾರು ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಟೀಕೆಗೆ ಗುರಿಯಾಗಿತ್ತು. ಘಟನೆಗೆ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದ್ದವು. 

ವಿಜಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರೂ ಭಾಗವಹಿಸಿದ್ದರು. ಅವರ ಬಳಿಯೂ ರಾಜೀನಾಮೆ ಕೇಳಿ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ನಾಯಕರು ತಿರುಗೇಟು ನೀಡಿದ್ದರು. ಆ ಬಳಿಕ ರಾಜ್ಯಪಾಲರನ್ನು ಕಾರ್ಯಕ್ರಮಕ್ಕೆ ಆಯೋಜಿಸಿದ್ದವರು ಯಾರು ಎಂಬ ಪ್ರಶ್ನೆ ಎದುರಾಗಿತ್ತು. 

ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಯಾರು ಎಂಬ ಪ್ರಶ್ನೆ ಎದುರಾಗಿದ್ದ ವೇಳೆ ತಾವಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಬುಧವಾರ ಉಲ್ಟಾ ಹೊಡೆದಿರುವ ಅವರು ತಾವೇ ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಎಂದು ಒಪ್ಪಿಕೊಂಡಿದ್ದಾರೆ.

"ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಚಾರವಾಗಿರುವುದು ತಪ್ಪು. ನನ್ನ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ದೂರವಾಣಿ ಮುಖಾಂತರ ಮಾತನಾಡಿಸಿದ್ದರು. ನಾನು ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ ನೀವು ಬನ್ನಿ ಎಂದು ರಾಜ್ಯಪಾಲರಿಗೆ ಹೇಳಿದ್ದೆ." ಎಂದು ಸ್ಪಷ್ಟಪಡಿಸಿದ್ದಾರೆ. 

ಬುಧವಾರ (ಜೂ. 4) ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್‌ಸಿಬಿ ವತಿಯಿಂದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂದು ಬೆಳಿಗ್ಗೆ 11.29ಕ್ಕೆ ಕೆಎಸ್‌ಸಿಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿದ್ದರು. ಆದ್ದರಿಂದ ಒಪ್ಪಿಗೆ ನೀಡಿದ್ದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಏನಾಗಿತ್ತು ?

ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ ಆಟಗಾರರನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನಿಸಲು ನಿರ್ಧರಿಸಲಾಗಿತ್ತು. ವೇದಿಕೆ ಮೇಲೆ ಆಟಗಾರರು ಸೇರಿದಂತೆ 30 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ, ವೇದಿಕೆ ಮೇಲೆ ಸಚಿವರು ಹಾಗೂ ಅಧಿಕಾರಿಗಳ ಕುಟುಂಬ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಸನ್ಮಾನ ಕಾರ್ಯಕ್ರಮ ಮಾಡುವಾಗ ಗೊಂದಲ ಉಂಟಾಗಿ ಯಾರು, ಯಾರಿಗೆ ಸನ್ಮಾನ ಮಾಡುತ್ತಿದ್ದಾರೆ ಎಂಬುದೇ ತಿಳಿಯದಾಗಿತ್ತು. ಸನ್ಮಾನ ಕಾರ್ಯಕ್ರಮವು ಕೇವಲ 20 ನಿಮಿಷದಲ್ಲಿ ಪೂರ್ಣಗೊಂಡಿತ್ತು.

ಹೊಸ ಜಿಲ್ಲೆ ರಚನೆ, ಚರ್ಚಿಸಿ ತೀರ್ಮಾನ

ಬೆಳಗಾವಿಯನ್ನು ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚಿಸುವ ಸಂಬಂಧ ಬೇಡಿಕೆ ಬಂದಿದೆ.  ಇದಕ್ಕೆ ಸಂಬಂಧಿಸಿದಂತೆ ಆ ಭಾಗದ ಶಾಸಕರು, ಸಚಿವರು ಮತ್ತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾವಿಗೆ ಬೆಂಬಲ ಬೆಲೆ, ಸಂಪುಟದಲ್ಲಿ ಚರ್ಚೆ

ಮಾವಿನ ಬೆಲೆ ಕುಸಿದಿದ್ದು, ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಒಂದು ಕೆ.ಜಿ ತೋತಾಪುರಿ ಮಾವಿಗೆ ನಾಲ್ಕು ರೂ. ನೀಡಲಾಗುತ್ತಿದೆ. ನಮ್ಮಲ್ಲಿ ಬೆಂಬಲ ಬೆಲೆ ಕೊಡಬೇಕು ಎಂದು ಸಚಿವ ಎಂ.ಸಿ.ಸುಧಾಕರ್ ಬೇಡಿಕೆ ಇಟ್ಟಿದ್ದು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಗಳನ್ನು ಜಿಲ್ಲಾಧಿಕಾರಿ ಮೂಲಕ ಈಗಾಗಲೇ ಪಾವತಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ. ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಅದನ್ನು ಮುಂದೂಡಿದ್ದೇವೆ ಎಂದು ಹೇಳಿದ್ದಾರೆ.

Tags:    

Similar News