Illegal Mining Case | ಜನಾರ್ದನಾ ರೆಡ್ಡಿ ಶಾಸಕತ್ವ ಅನರ್ಹತೆ ಆದೇಶಕ್ಕೆ ತಡೆ
ತೆಲಂಗಾಣ ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮೇ 6 ರಂದು ತಾವೇ ಹೊರಡಿಸಿದ್ದ ಶಾಸಕ ಸ್ಥಾನದ ಅನರ್ಹ ಆದೇಶಕ್ಕೆ ತಡೆ ನೀಡಿದ್ದಾರೆ.;
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದ ಆದೇಶಕ್ಕೆ ಕರ್ನಾಟಕ ವಿಧಾನಸಭಾ ಸಚಿವಾಲಯ ತಡೆ ನೀಡಿದೆ.
ಸಿಬಿಐ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿ ನೀಡಿದ್ದ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ಜೂ.11ರಂದು ತಡೆ ನೀಡಿ ಗಾಲಿ ಜನಾರ್ದನಾ ರೆಡ್ಡಿಗೆ ಜಾಮೀನು ಮಂಜೂರು ಮಾಡಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ.
ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಮೇ 6 ರಂದು ತಾವೇ ಹೊರಡಿಸಿದ್ದ ಶಾಸಕತ್ವ ಅನರ್ಹ ಆದೇಶಕ್ಕೆ ಜೂ.18 ರಂದು ತಡೆ ನೀಡಿದ್ದಾರೆ. ನ್ಯಾಯಾಲಯದ ಮುಂದಿನ ಆದೇಶದವರೆಗೆ ಅನರ್ಹ ಆದೇಶಕ್ಕೆ ತಡೆ ಇರಲಿದೆ.
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣದಲ್ಲಿ ಮೇ 6 ರಂದು ಹೈದರಾಬಾದ್ ಸಿಬಿಐ ಕೋರ್ಟ್ ಗಾಲಿ ಜನಾರ್ದನಾ ರೆಡ್ಡಿ ತಪ್ಪಿತಸ್ಥ ಎಂದು ಸಾಬೀತಾದ ಕಾರಣ ನ್ಯಾಯಾಲಯವು 7 ವರ್ಷ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಗಾಲಿ ಜನಾರ್ದನ ರೆಡ್ಡಿಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.
ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ರೆಡ್ಡಿಗೆ ಜಾಮೀನು ಮಂಜೂರು ಮಾಡಿತ್ತು. ಸದ್ಯ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು, ಜನಾರ್ದನಾ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು.