ದ.ಕ.ದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ ಖಂಡಿಸಿ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ಸಿದ್ಧತೆ
ಜಿಲ್ಲೆಯಲ್ಲಿ ಸರಣಿ ಕೊಲೆಗಳನ್ನು ತಡೆಯಲು ಗೃಹ ಇಲಾಖೆ ವಿಫಲವಾಗಿದೆ. ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಲೇ ಇದ್ದರೂ ಸರ್ಕಾರ ಇದನ್ನು ಕಡೆಗಣಿಸುತ್ತಲೇ ಇದೆ. ಆದ್ದರಿಂದ ಸಾಮೂಹಿಕವಾಗಿ ರಾಜೀನಾಮೆ ನೀಡುವ ತೀರ್ಮಾನ ಪ್ರಕಟಿಸಲು ಸಭೆ ಕರೆಯಲಾಗಿದೆ.;
ಸಾಂದರ್ಭಿಕ ಚಿತ್ರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ರಾಜ್ಯ ಗೃಹ ಸಚಿವಾಲಯದ ವೈಫಲ್ಯ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಎಲ್ಲಾ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ಸಂಬಂಧ ಗುರುವಾರ (ಮೇ 29) ಸಭೆ ಕರೆಯಲಾಗಿದೆ.
ಜಿಲ್ಲೆಯಲ್ಲಿ ಸರಣಿ ಕೊಲೆಗಳನ್ನು ತಡೆಯಲು ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮೊಹಮದ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಆರೋಪಿಸಿದ್ದಾರೆ. ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಲೇ ಇದ್ದರೂ ಸರ್ಕಾರ ಇದನ್ನು ಕಡೆಗಣಿಸುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಬೂತ್ ಮಟ್ಟದಿಂದ ರಾಜ್ಯಮಟ್ಟದವರೆಗೆ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಮ್ ಸಮುದಾಯದ ಮುಖಂಡರು ರಾಜೀನಾಮೆ ಪ್ರಕಟಿಸಲು ಈ ಸಭೆ ಕರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳವಾರ (ಮೇ 27) ಬಂಟ್ವಾಳದ ಕೋಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಅಬ್ದುಲ್ ರಹೀಮ್ ಯಾನೆ ಇಮ್ತಿಯಾಜ್ನನ್ನು ತಲವಾರಿನಿಂದ ಹತ್ಯೆ ಮಾಡಲಾಗಿತ್ತು. ಪಿಕಪ್ ವಾಹನದಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದಾಗ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ನಡೆಸಿತ್ತು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಈ ಹತ್ಯೆಯನ್ನು ಖಂಡಿಸಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಪೊಲೀಸರು ಈಗಾಗಲೇ ಮೃತ ರಹೀಮ್ನ ಪರಿಚಯಸ್ಥರೇ ಆಗಿರುವ ದೀಪಕ್, ಸುಮೀತ್ ಸೇರಿದಂತೆ 15 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಎಲ್ಲಾ ಆಯಾಮಗಳಿಂದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆದಾಗ್ಯೂ, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ರಾಜೀನಾಮೆಗೆ ಮುಂದಾಗಿದೆ.