ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವು ಪ್ರವೇಶ ನಿರ್ಬಂಧ ಹಿಂಪಡೆಯಲು ಆಂಧ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ

ನಿರ್ಧಾರದಿಂದಾಗಿ ಗಡಿ ಭಾಗದಲ್ಲಿರುವ ಕರ್ನಾಟಕದ ತೋತಾಪುರಿ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ತೂರಿನಲ್ಲಿರುವ ಪ್ರೊಸೆಸಿಂಗ್ ಮತ್ತು ಪಲ್ಪ್ ಘಟಕಗಳಿಗೆ ಹಣ್ಣುಗಳನ್ನು ಮಾರಾಟ ಮಾಡುವುದು ಈ ರೈತರ ಪ್ರಮುಖ ಆದಾಯ ಮೂಲವಾಗಿದೆ.;

Update: 2025-06-12 05:16 GMT

ಕರ್ನಾಟಕದಿಂದ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಪ್ರವೇಶವನ್ನು ನಿರ್ಬಂಧಿಸಿರುವ ಆಂಧ್ರಪ್ರದೇಶ ಸರ್ಕಾರದ ಕ್ರಮವನ್ನು ತಕ್ಷಣವೇ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಆಂಧ್ರಪ್ರದೇಶದ ಈ ಏಕಪಕ್ಷೀಯ ನಿರ್ಧಾರದಿಂದ ಕರ್ನಾಟಕದ ಮಾವು ಬೆಳೆಗಾರರಿಗೆ ತೀವ್ರ ಹಾನಿಯಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚಿತ್ತೂರು ಜಿಲ್ಲಾಧಿಕಾರಿ ಜೂನ್ 7ರಂದು ಹೊರಡಿಸಿದ ಆದೇಶದಲ್ಲಿ, ಇತರ ರಾಜ್ಯಗಳಿಂದ ತೋತಾಪುರಿ ಮಾವಿನ ಹಣ್ಣುಗಳನ್ನು ಜಿಲ್ಲೆಗೆ ತರುವುದನ್ನು ನಿರ್ಬಂಧಿಸಲಾಗಿದೆ. ಈ ನಿರ್ಬಂಧವನ್ನು ಜಾರಿಗೊಳಿಸಲು ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಿರುವುದಾಗಿಯೂ ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ನಿರ್ಧಾರದಿಂದಾಗಿ ಗಡಿ ಭಾಗದಲ್ಲಿರುವ ಕರ್ನಾಟಕದ ತೋತಾಪುರಿ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ತೂರಿನಲ್ಲಿರುವ ಪ್ರೊಸೆಸಿಂಗ್ ಮತ್ತು ಪಲ್ಪ್ ಘಟಕಗಳಿಗೆ ಹಣ್ಣುಗಳನ್ನು ಮಾರಾಟ ಮಾಡುವುದು ಈ ರೈತರ ಪ್ರಮುಖ ಆದಾಯ ಮೂಲವಾಗಿದೆ. ಆದರೆ, ಈಗ ಜಾರಿಗೊಳಿಸಿರುವ ನಿರ್ಬಂಧದಿಂದಾಗಿ ಈ ವಾಣಿಜ್ಯ ವಹಿವಾಟು ಸಂಪೂರ್ಣವಾಗಿ ವ್ಯತ್ಯಯಗೊಂಡಿದ್ದು, ಹತ್ತಾರು ರೈತರ ಜೀವನೋಪಾಯಕ್ಕೆ ತೀವ್ರ ಧಕ್ಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಸಂವಿಧಾನಾತ್ಮಕ ಸಹಕಾರದ ತತ್ವಕ್ಕೆ ವಿರುದ್ಧವಾಗಿರುವ ಇಂತಹ ಏಕಪಕ್ಷೀಯ ನಿರ್ಧಾರಗಳು ರಾಜ್ಯಗಳ ನಡುವೆ ಅಸಮಾಧಾನ ಹಾಗೂ ಪ್ರತಿಕ್ರಿಯಾತ್ಮಕ ಕ್ರಮಗಳಿಗೆ ಕಾರಣವಾಗಬಹುದು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ರೈತರ ಹಿತದೃಷ್ಟಿಯಿಂದ ಹಾಗೂ ಕೃಷಿ ಉತ್ಪನ್ನಗಳ ಸುಗಮ ಸಾಗಣೆಗಾಗಿ ಈ ನಿರ್ಬಂಧವನ್ನು ತಕ್ಷಣವೇ ಹಿಂಪಡೆಯುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. 

Tags:    

Similar News