Gross negligence by police in the Home Ministers home district: POCSO accused escapes from the police station.
x

ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಮಂಜುನಾಥ್‌ ಪರಾರಿಯಾಗಿರುವ ದೃಶ್ಯ.

ಠಾಣೆಯಿಂದಲೇ ಮರ ಹತ್ತಿ ಪೋಕ್ಸೋ ಆರೋಪಿ ಪರಾರಿ; ಗೃಹ ಸಚಿವರ ತವರು ಜಿಲ್ಲೆಯಲ್ಲೇ ಪೊಲೀಸರ ನಿರ್ಲಕ್ಷ್ಯ!

ಆರೋಪಿ ಮಂಜುನಾಥ್ ಪೊಲೀಸ್ ಠಾಣೆಯಿಂದ ಯಾವುದೇ ಭಯವಿಲ್ಲದೆ ಅತ್ಯಂತ ನಿರಾಳವಾಗಿ ಓಡಿ ಹೋಗುತ್ತಿರುವ ಸಂಪೂರ್ಣ ದೃಶ್ಯಗಳು ಠಾಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.


Click the Play button to hear this message in audio format

ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯಲ್ಲೇ ಪೊಲೀಸರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗುವ ಘಟನೆ ಬೆಳಕಿಗೆ ಬಂದಿದ್ದು, ಪೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಠಾಣೆಯಿಂದಲೇ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಸುಮಾರು ಒಂದು ವಾರದ ಹಿಂದೆ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಠಾಣೆಯಲ್ಲೇ ಇರಿಸಿದ್ದರು.

ಕೈಕೋಳ ಬಿಚ್ಚಿಕೊಂಡು ಎರಡನೇ ಮಹಡಿಯಿಂದ ಪರಾರಿ

ಗುರುವಾರ (ಜುಲೈ 3) ಮಧ್ಯರಾತ್ರಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ನಿದ್ರೆಗೆ ಜಾರಿದ್ದರೆಂದು ತಿಳಿದುಬಂದಿದೆ. ಈ ಸಂದರ್ಭ ಬಳಸಿಕೊಂಡ ಆರೋಪಿ ಮಂಜುನಾಥ್, ತನಗೆ ಹಾಕಲಾಗಿದ್ದ ಕೈಕೋಳವನ್ನು ಬಿಚ್ಚಿಕೊಂಡಿದ್ದಾನೆ. ಬಳಿಕ ಠಾಣೆಯ ಎರಡನೇ ಮಹಡಿಗೆ ತೆರಳಿ, ಅಲ್ಲಿದ್ದ ಮರದ ಕೊಂಬೆಯನ್ನು ಆಧಾರವಾಗಿ ಬಳಸಿಕೊಂಡು ಕೆಳಕ್ಕೆ ಇಳಿದು ನಸುಕಿನ ಜಾವ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಿಸಿಟಿವಿಯಲ್ಲಿ ಸೆರೆಯಾದ ಪರಾರಿಯ ದೃಶ್ಯ

ಆರೋಪಿ ಠಾಣೆಯಿಂದ ಯಾವುದೇ ಆತಂಕವಿಲ್ಲದೆ ನಿರಾಳವಾಗಿ ಹೊರಟು ಹೋಗುತ್ತಿರುವ ದೃಶ್ಯಗಳು ಠಾಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಪೊಲೀಸ್ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಪರಾರಿಯಾಗಿರುವುದು ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದೆ. ಘಟನೆಯ ಬಳಿಕ ಎಚ್ಚೆತ್ತ ಹಿರಿಯ ಅಧಿಕಾರಿಗಳು ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿದ್ದಾರೆ. ನೆರೆಯ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಗಡಿ ಪ್ರದೇಶಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

ಇದೇ ವೇಳೆ, ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿದ ಹಾಗೂ ಭದ್ರತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸದ ಅಫಜಲಪುರ ಪೊಲೀಸ್ ಠಾಣೆಯ ಸಿಬ್ಬಂದಿಯ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Read More
Next Story