Honeytrap case: MLA Munirathna in trouble, court rejects B report submitted by CID
x

ಶಾಸಕ ಮುನಿರತ್ನ ಹಾಗೂ ಲಗ್ಗೆರೆ ನಾರಾಯಣಸ್ವಾಮಿ

ಹನಿಟ್ರ್ಯಾಪ್‌ ಪ್ರಕರಣ: ಶಾಸಕ ಮುನಿರತ್ನಗೆ ಸಂಕಷ್ಟ, ಸಿಐಡಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ

ದೂರುದಾರರ ಪರ ವಕೀಲರ ವಾದವನ್ನು ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಸಿಐಡಿ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಮಾನ್ಯ ಮಾಡಲು ನಿರಾಕರಿಸಿದರು.


Click the Play button to hear this message in audio format

ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಅವರನ್ನು ಹನಿಟ್ರ್ಯಾಪ್‌ ಮೂಲಕ ಸಿಲುಕಿಸಿ ತೇಜೋವಧೆ ಮಾಡಲು ಯತ್ನಿಸಿದ ಗಂಭೀರ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ತನಿಖಾಧಿಕಾರಿಗಳು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಸಿಐಡಿ ಪೊಲೀಸರು ಸಲ್ಲಿಸಿದ್ದ ವರದಿಯನ್ನು ಪ್ರಶ್ನಿಸಿ ದೂರುದಾರ ಲಗ್ಗೆರೆ ನಾರಾಯಣಸ್ವಾಮಿ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯನ್ನು ಎತ್ತಿಹಿಡಿದಿರುವ 'ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್ ಅವರು, ಪ್ರಕರಣದ ಮುಂದಿನ ತನಿಖೆಗೆ ಆದೇಶಿಸಿದ್ದಾರೆ.

ವಕೀಲರ ವಾದ ಮನ್ನಿಸಿದ ನ್ಯಾಯಾಲಯ

ವಿಚಾರಣೆಯ ವೇಳೆ ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರು, ಲಗ್ಗೆರೆ ನಾರಾಯಣ ಸ್ವಾಮಿ ಮತ್ತು ಅವರ ಪತ್ನಿಯ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ವಿಡಿಯೋ ಚಿತ್ರೀಕರಿಸಿ ನೀಡಿದರೆ 50 ಲಕ್ಷ ರೂಪಾಯಿ ನೀಡುವುದಾಗಿ ಶಾಸಕ ಮುನಿರತ್ನ ಅವರು ಖಾಸಗಿ ಸುದ್ದಿವಾಹಿನಿಯೊಂದರ (ಪವರ್ ಟಿವಿ) ನಿರ್ದೇಶಕ ಹಾಗೂ ವರದಿಗಾರನಿಗೆ ಆಮಿಷವೊಡ್ಡಿದ್ದರು ಎಂದು ವಿವರಿಸಿದರು. ಈ ಕುರಿತಾದ ಸಂಭಾಷಣೆಯ ಆಡಿಯೋ ದಾಖಲೆಯನ್ನು ಸಂಗ್ರಹಿಸಿ ಸಾಕ್ಷ್ಯವಾಗಿ ಒದಗಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇಷ್ಟೆಲ್ಲಾ ಸಾಕ್ಷ್ಯಾಧಾರಗಳಿದ್ದರೂ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಬದಲಿಗೆ 'ಬಿ' ರಿಪೋರ್ಟ್‌ ಸಲ್ಲಿಸಿದ್ದಾರೆ, ದೂರಿಗೆ ಸಂಬಂಧಿಸಿದ ಸಾಕ್ಷಿಗಳ ಹೇಳಿಕೆ ನಂಬಲು ಅರ್ಹವಿಲ್ಲ ಎಂದು ತೀರ್ಮಾನಿಸಿರುವುದು ಪೊಲೀಸರ ವ್ಯಾಪ್ತಿ ಮೀರಿದ ದೋಷಪೂರಿತ ಕ್ರಮವಾಗಿದೆ ಎಂದು ವಾದಿಸಿದರು. ಹೀಗಾಗಿ, ಬಿ ರಿಪೋರ್ಟ್‌ ತಿರಸ್ಕರಿಸಬೇಕು ಎಂದು ಅವರು ಬಲವಾಗಿ ವಾದ ಮಂಡಿಸಿದರು.

ಮುಂದುವರೆದ ತನಿಖೆಗೆ ಕೋರ್ಟ್ ಆದೇಶ

ದೂರುದಾರರ ಪರ ವಕೀಲರ ವಾದವನ್ನು ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಸಿಐಡಿ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಮಾನ್ಯ ಮಾಡಲು ನಿರಾಕರಿಸಿದರು. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆಯನ್ನು ಕೈಗೊಳ್ಳುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಿದ್ದು, ವಿಚಾರಣೆಯನ್ನು ಇದೇ ತಿಂಗಳ 30ನೇ ತಾರೀಖಿಗೆ ಮುಂದೂಡಿದ್ದಾರೆ. ಈ ಮಹತ್ವದ ಬೆಳವಣಿಗೆಯು ಶಾಸಕ ಮುನಿರತ್ನ ಅವರ ತೊಂದರೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಪ್ರಕರಣದ ಹಿನ್ನೆಲೆ ಮತ್ತು ಆರೋಪಗಳೇನು?

ತಮ್ಮ ಹಾಗೂ ಬಿಬಿಎಂಪಿ ಮಾಜಿ ಸದಸ್ಯೆಯಾಗಿರುವ ತಮ್ಮ ಪತ್ನಿ ಮಂಜುಳಾ ಎನ್.ಸ್ವಾಮಿ ಅವರ ರಾಜಕೀಯ ಏಳಿಗೆಯನ್ನು ಸಹಿಸದೆ, ತೇಜೋವಧೆ ಮಾಡಲು ಶಾಸಕ ಮುನಿರತ್ನ ಅವರು ಹನಿಟ್ರ್ಯಾಪ್‌ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಲಗ್ಗೆರೆ ನಾರಾಯಣಸ್ವಾಮಿ ಅವರು ನಂದಿನಿ ಲೇಔಟ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ, ಪತ್ನಿಯ ಕೊಲೆಗೂ ಷಡ್ಯಂತ್ರ ರೂಪಿಸಿ, ಸುಪಾರಿ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ದೂರಿನ ಆಧಾರದ ಮೇಲೆ ನಂದಿನಿ ಲೇಔಟ್ ಪೊಲೀಸರು ಐಪಿಸಿ ಸೆಕ್ಷನ್ 354ಸಿ, 109, 110, 354, 115, 116 ಮತ್ತು 118ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು, ಇದರ ವಿರುದ್ಧ ನಾರಾಯಣಸ್ವಾಮಿ ಅವರು ಕೋರ್ಟ್ ಮೆಟ್ಟಿಲೇರಿದ್ದರು.

Read More
Next Story