
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸಾಗಲು 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ 24 ಅಂಕಗಳು ಮತ್ತು ಆಂತರಿಕ ಮೌಲ್ಯಮಾಪನದಲ್ಲಿ 10 ಅಂಕಗಳು (ಒಟ್ಟು 34) ಅವಶ್ಯಕವಾಗಿವೆ.
ದ್ವಿತೀಯ ಪಿಯುಸಿ ಪರೀಕ್ಷೆ : 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ, ಉಚಿತ ಬಸ್ ಪ್ರಯಾಣದ ಸೌಲಭ್ಯ
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರವನ್ನು ಕೊಂಡೊಯ್ಯಲು ಮರೆಯಬೇಡಿ. ಪರೀಕ್ಷೆ ಆರಂಭವಾಗುವ ಕನಿಷ್ಠ 30 ರಿಂದ 45 ನಿಮಿಷಗಳ ಮೊದಲೇ ಪರೀಕ್ಷಾ ಕೇಂದ್ರದಲ್ಲಿರುವುದು ಉತ್ತಮ.
ಕರ್ನಾಟಕ ರಾಜ್ಯಾದ್ಯಂತ ದ್ವಿತೀಯ ಪಿಯುಸಿ (12ನೇ ತರಗತಿ) ಬೋರ್ಡ್ ಪರೀಕ್ಷೆಗಳು ಭರದಿಂದ ಸಾಗುತ್ತಿದ್ದು, 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಈ ಬಾರಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ಗಮನಾರ್ಹವಾಗಿ, ಈ ವರ್ಷ ಉತ್ತೀರ್ಣರಾಗುವ ಕನಿಷ್ಠ ಅಂಕಗಳ ಮಾನದಂಡವನ್ನು (ಪಾಸಿಂಗ್ ಮಾರ್ಕ್ಸ್) ಶೇಕಡಾ 30ಕ್ಕೆ ಇಳಿಕೆ ಮಾಡಲಾಗಿದೆ.
ಇದರಿಂದಾಗಿ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ, ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಂದು ಹಾಲ್ ಟಿಕೆಟ್ (ಪ್ರವೇಶ ಪತ್ರ) ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಒದಗಿಸಿದೆ.
ವಿದ್ಯಾರ್ಥಿಗಳೇ ಇದನ್ನು ನೆನಪಿಡಿ
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರವನ್ನು ಕೊಂಡೊಯ್ಯಲು ಮರೆಯಬೇಡಿ. ಪರೀಕ್ಷೆ ಆರಂಭವಾಗುವ ಕನಿಷ್ಠ 30 ರಿಂದ 45 ನಿಮಿಷಗಳ ಮೊದಲೇ ಪರೀಕ್ಷಾ ಕೇಂದ್ರದಲ್ಲಿರುವುದು ಉತ್ತಮ. ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ ಎಂಬುದು ನೆನಪಿರಲಿ.
ಪಾಸಾಗಲು 34 ಅಂಕಗಳು ಸಾಕು
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸಾಗಲು 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ 24 ಅಂಕಗಳು ಮತ್ತು ಆಂತರಿಕ ಮೌಲ್ಯಮಾಪನದಲ್ಲಿ 10 ಅಂಕಗಳು (ಒಟ್ಟು 34) ಅವಶ್ಯಕವಾಗಿವೆ. ಹೀಗಾಗಿ 34 ಅಂಕಗಳಿಗೆ ವಿದ್ಯಾರ್ಥಿಗಳು ತೇರ್ಗಡೆಯಾಗುವ ಅವಕಾಶವಿರುವುದು ಈ ಬಾರಿಯ ಫಲಿತಾಂಶ ಸುಧಾರಣೆಗೆ ಸಹಕಾರಿಯಾಗಲಿದೆ.
ಆನ್ಲೈನ್ ನೋಂದಣಿ
ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಇದೇ ಮೊದಲ ಬಾರಿಗೆ ಇಲಾಖೆ ಅವಕಾಶ ನೀಡಿತ್ತು. ಖಾಸಗಿ ಅಭ್ಯರ್ಥಿಗಳನ್ನು ಅವರು ಆಯ್ಕೆ ಮಾಡಿಕೊಂಡ ತಾಲ್ಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಅಥವಾ ಶಾಲೆಗಳಿಗೆ ಮಂಡಳಿಯಿಂದ ಹಂಚಿಕೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ಮೇಲೆ ನಿಗಾ ಇರಿಸಲಾಗಿದ್ದು, ಇಂತಹ ಅಕ್ರಮ ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಮಟ್ಟದಲ್ಲಿ ನೋಡಲ್ ಅಧಿಕಾರಿಯೊಬ್ಬರನ್ನು ಇಲಾಖೆ ನೇಮಿಸಿದೆ. ಇದರೊಂದಿಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲೂ ತಕ್ಷಣ ಪೊಲೀಸರಿಗೆ ದೂರು ನೀಡಲು ಸೂಚಿಸಲಾಗಿದೆ.
ಕೆಸಿಇಟಿ (KCET) 2026 ನೋಂದಣಿಗೆ ಇಂದು ಕೊನೆಯ ದಿನ
ಇಂಜಿನಿಯರಿಂಗ್, ಕೃಷಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2026ರ ನೋಂದಣಿ ಪ್ರಕ್ರಿಯೆ ಅಂತ್ಯಗೊಳ್ಳುತ್ತಿದ್ದು, ಅರ್ಜಿ ಸಲ್ಲಿಸಲು ಇಂದು (ಮಾರ್ಚ್ 02) ಕೊನೆಯ ದಿನವಾಗಿದೆ. ಈವರೆಗೆ ಅರ್ಜಿ ಸಲ್ಲಿಸದ ಆಕಾಂಕ್ಷಿ ವಿದ್ಯಾರ್ಥಿಗಳು ಇಂದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್ಸೈಟ್ ಪೋರ್ಟಲ್ ಮೂಲಕ ತಮ್ಮ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ನಿಗದಿತ ಸಮಯದ ನಂತರ ಅರ್ಜಿ ಸಲ್ಲಿಕೆಗೆ ಅವಕಾಶವಿರುವುದಿಲ್ಲ.

