ಮಂಗಳೂರು ಕಾಲೇಜಿನ ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬೆಂಗಳೂರಿನಲ್ಲಿ ಮೂವರ ಬಂಧನ
x

ಸಾಂದರ್ಭಿಕ ಚಿತ್ರ

ಮಂಗಳೂರು ಕಾಲೇಜಿನ ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬೆಂಗಳೂರಿನಲ್ಲಿ ಮೂವರ ಬಂಧನ

ಬಂಧಿತರನ್ನು ಭೌತವಿಜ್ಞಾನ ಉಪನ್ಯಾಸಕ ನರೇಂದ್ರ, ಜೀವವಿಜ್ಞಾನ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.


ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ‌ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜಿನ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬನನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಭೌತ ವಿಜ್ಞಾನ ಉಪನ್ಯಾಸಕ ನರೇಂದ್ರ, ಜೀವವಿಜ್ಞಾನ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಭೌತವಿಜ್ಞಾನ ಉಪನ್ಯಾಸಕ ನರೇಂದ್ರ ಅವರು ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ. ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ಈ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಉಪನ್ಯಾಸಕ ನರೇಂದ್ರ ಈ ದುಷ್ಕೃತ್ಯ ಎಸಗಿದ ಬಳಿಕ ಜೀವವಿಜ್ಞಾನ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ.

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿ ಆತನೂ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ.

ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೋಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More
Next Story