
Bengaluru Stampede| ಚಿನ್ನಸ್ವಾಮಿ ಕಾಲ್ತುಳಿತ: ನೈತಿಕ ಹೊಣೆ ಹೊತ್ತು ಕೆಎಸ್ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಶಂಕರ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಖಜಾಂಚಿ ಜೈರಾಮ್ ಸಹ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಐಪಿಎಲ್ ಟ್ರೋಫಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಹೊಣೆ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಕಾರ್ಯದರ್ಶಿ ಎ. ಶಂಕರ್ ಮತ್ತು ಖಜಾಂಚಿ ಇ.ಎಸ್. ಜೈರಾಮ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ದುರ್ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದರು.
ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ, "ತಮ್ಮ ಪಾತ್ರ ಬಹಳ ಸೀಮಿತವಾಗಿದ್ದರೂ ದುರಂತಕ್ಕೆ ತಾವು ನೈತಿಕ ಹೊಣೆಗಾರಿಕೆ ಹೊಂದಿದ್ದೇವೆ" ಎಂದು ಶಂಕರ್ ಮತ್ತು ಜೈರಾಮ್ ತಿಳಿಸಿದ್ದಾರೆ. ನೈತಿಕ ಜವಾಬ್ದಾರಿಯಿಂದ ತಾವು ಶುಕ್ರವಾರ ರಾತ್ರಿ ಕೆಎಸ್ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ಪತ್ರವನ್ನು ಜೂನ್ 6ರಂದು ಕೆಎಸ್ಸಿಎ ಅಧ್ಯಕ್ಷರಿಗೆ ಬರೆಯಲಾಗಿದೆ.
ಈ ಘಟನೆ ರಾಜ್ಯಾದ್ಯಂತ ದೊಡ್ಡ ಕೋಲಾಹಲ ಸೃಷ್ಟಿಸಿತ್ತು. ಘಟನೆಯ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿತ್ತು. ಅಲ್ಲದೆ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡಳಿತ ಮಂಡಳಿಯ ನಾಲ್ವರು ಅಧಿಕಾರಿಗಳನ್ನು ಶುಕ್ರವಾರ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ಇದರ ಬೆನ್ನಲ್ಲೇ, ಸರ್ಕಾರದ ಕ್ರಮಗಳ ವಿರುದ್ಧ ಕೆಎಸ್ಸಿಎ ಹೈಕೋರ್ಟ್ಗೆ ರಿಟ್ ಅರ್ಜಿಯನ್ನು ಸಲ್ಲಿಸಿತ್ತು. ಸರ್ಕಾರ ಕೆಎಸ್ಸಿಎ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.
ಪ್ರಸ್ತುತ, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಶುಕ್ರವಾರ ತಡರಾತ್ರಿ, ಸಿಐಡಿ ಅಧಿಕಾರಿಗಳು ಕೇಸ್ ಫೈಲ್ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಾದ ನಾಲ್ವರು ತಮ್ಮ ಹೇಳಿಕೆಗಳನ್ನು ನೀಡಿದ್ದು, ಮಹಜರು ವೇಳೆ ಏನೆಲ್ಲಾ ಪರಿಶೀಲನೆ ಮಾಡಲಾಗಿತ್ತು ಎಂಬುದನ್ನು ಗಮನಿಸಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಗಳು ಕಲೆ ಹಾಕಿದ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯನ್ನೂ ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.