
ವಜಾಗೊಂಡ ವಾರ್ಡನ್ ಸುರೇಶ್ ಪಿ.ವಿ. ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಬಲ್ಲವರಿಗಷ್ಟೇ ಕೆಲಸ ನೀಡಿ: ಪುರುಷೋತ್ತಮ ಬಿಳಿಮಲೆ
ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಶಿಕ್ಷಣ ಸಂಸ್ಥೆಗಳು ಕನ್ನಡ ಭಾಷೆಗೆ ಸಲ್ಲಬೇಕಾದ ಗೌರವವನ್ನು ನೀಡಬೇಕಿದೆ. ಸರ್ಕಾರದ ಇಲಾಖೆಗಳು ಈ ನಿಟ್ಟಿನಲ್ಲಿ ಸ್ವ-ನಿಯಂತ್ರಣ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.
ಬೆಂಗಳೂರು ನಗರ ಹೊರವಲಯದ ಎಎಂಸಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಲಯದ ನಿಲಯ ಪಾಲಕರೊಬ್ಬರು ಕನ್ನಡ ಭಾಷೆಯ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿರುವುದು ಭಾಷಾ ಸಂಘರ್ಷದ ತೀವ್ರತೆ ಅಭಿವ್ಯಕ್ತಿಸುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದರು.
ಸೋಮವಾರ(ಜ.5) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡ ಭಾಷೆಯ ಬಗ್ಗೆ ಅಗೌರವ ತೋರಿದ ನಿಲಯಪಾಲಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸುವ ಕುರಿತು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ನೌಕರರ ವಜಾ ವಿಷಯ ಸ್ವಾಗತಾರ್ಹವಾದರೂ ಇಂತಹ ಪ್ರಕರಣಗಳು ಸರ್ಕಾರದ ಜವಾಬ್ದಾರಿ ನೆನಪಿಸುತ್ತವೆ ಎಂದರು.
ಎಎಂಸಿ ಕಾಲೇಜಿನಲ್ಲಿ ಜರುಗಿದ ಪ್ರಕರಣ ನಾಳೆ ಮತ್ತೊಂದು ಸಂಸ್ಥೆಯಲ್ಲಿ ಘಟಿಸದೆನ್ನುವ ಯಾವ ಭರವಸೆಯನ್ನೂ ನಾವು ಹೊಂದಿಲ್ಲ. ಕೂಡಲೇ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷೆಯನ್ನು ಬಲ್ಲ ಹಾಗೂ ಕನ್ನಡದ ಕುರಿತಂತೆ ಗೌರವ ಹೊಂದಿದ ಅಭ್ಯರ್ಥಿಗಳನ್ನು ಮಾತ್ರ ನೇಮಿಸಿಕೊಳ್ಳಬೇಕೆಂಬ ನಿರ್ದೇಶನವನ್ನು ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಶಿಕ್ಷಣ ಸಂಸ್ಥೆಗಳು ಕನ್ನಡ ಭಾಷೆಗೆ ಸಲ್ಲಬೇಕಾದ ಗೌರವ ನೀಡಬೇಕಿದೆ. ಸರ್ಕಾರದ ಇಲಾಖೆಗಳು ಈ ನಿಟ್ಟಿನಲ್ಲಿ ಸ್ವ-ನಿಯಂತ್ರಣ ವ್ಯವಸ್ಥೆ ರೂಪಿಸುವಲ್ಲಿ ಸಕಾಲಿಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

