
Bangalore Stampede | ಕಾಲ್ತುಳಿತ ದುರಂತ; ಮುಖ್ಯ ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ
ಕಾರ್ಯಕ್ರಮದ ಆಯೋಜನೆ, ನಿರ್ವಹಣೆ ವಿಚಾರದಲ್ಲಿ ಸಂಪೂರ್ಣ ವಿಫಲರಾದ ಕಾರಣ ನೀಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ದೀರ್ಘ ರಜೆಯ ಮೇಲೆ ಕಳುಹಿಸಿಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ʼದ ಫೆಡರಲ್ ಕರ್ನಾಟಕʼಕ್ಕೆ ತಿಳಿಸಿವೆ.
ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಘಟನೆಗೆ ಹೊಣೆಯಾಗಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ಬೆನ್ನಲ್ಲೇ ಕಾರ್ಯಾಂಗದ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.
ಕಾರ್ಯಕ್ರಮದ ಆಯೋಜನೆ, ನಿರ್ವಹಣೆ ವಿಚಾರದಲ್ಲಿ ಸಂಪೂರ್ಣ ವಿಫಲರಾದ ಕಾರಣ ನೀಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ದೀರ್ಘ ರಜೆಯ ಮೇಲೆ ಕಳುಹಿಸಿಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳು ʼದ ಫೆಡರಲ್ ಕರ್ನಾಟಕʼಕ್ಕೆ ತಿಳಿಸಿವೆ.
ಆರ್ಸಿಬಿ ವಿಜಯೋತ್ಸವದ ನಿರ್ವಹಣೆಯಲ್ಲಾದ ಲೋಪಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೇ ಕಾರಣ ಎಂದು ಹಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಕಾಲ್ತುಳಿತದ ಬಳಿಕ ನಡೆದ ಘಟನಾವಳಿಗಳು ಕೂಡ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದ್ದವು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ಸಿಬಿ ಕಾರ್ಯಕ್ರಮ ಆಯೋಜನೆಗೆ ವಿಧಾನಸೌಧದ ಡಿಸಿಪಿ ಅವರು ಭದ್ರತೆಯ ಕಾರಣ ಕೊಟ್ಟು ಅನುಮತಿ ನೀಡಿರಲಿಲ್ಲ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪತ್ರ ಬರೆದಿದ್ದರು. ಆದಾಗ್ಯೂ, ಕಾರ್ಯಕ್ರಮಕ್ಕೆ ಡಿಪಿಎಆರ್ ಅನುಮತಿ ನೀಡಿತ್ತು.
ವಿಧಾನಸೌಧದ ಡಿಸಿಪಿ ಕರಿಬಸನಗೌಡ ಅವರು ಡಿಪಿಎಆರ್ ಕಾರ್ಯದರ್ಶಿಗೆ ಬರೆದಿದ್ದ ಪತ್ರವು ಮಾಧ್ಯಮಗಳಿಗೆ ಸೋರಿಕೆಯಾದ ಬಳಿಕ ಸರ್ಕಾರದ್ದೇ ಲೋಪ ಎಂದು ಆರೋಪಿಸಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಪೊಲೀಸ್ ಅನುಮತಿ ನಿರಾಕರಣೆ ಬಳಿಕವೂ ಕಾರ್ಯಕ್ರಮ ಆಯೋಜಿಸಿದ್ದ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.
ಡಿಸಿಪಿ ಕರಿಬಸನಗೌಡ ಅವರು ಡಿಪಿಎಆರ್ ಕಾರ್ಯದರ್ಶಿಗೆ ಬರೆದಿದ್ದ ಪತ್ರದ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಸರಿಯಾದ ಮಾಹಿತಿ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವರು ಸಲಹೆ ನೀಡಿದ್ದರು ಎಂದು ಮೂಲಗಳು ಖಚಿತಪಡಿಸಿವೆ.
ಗೋವಿಂದರಾಜು ಮಾತಿಗೆ ಸಿಎಸ್ ಮಣೆ
ಸಿಎಂ ಆಪ್ತ ಕಾರ್ಯದರ್ಶಿಯಾಗಿದ್ದ ಗೋವಿಂದರಾಜು ಅವರ ಮಾತನ್ನೇ ಮುಖ್ಯ ಕಾರ್ಯದರ್ಶಿ ಹೆಚ್ಚಾಗಿ ಕೇಳುತ್ತಿದ್ದರು. ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲೂ ಗೋವಿಂದರಾಜು ಅವರ ಮಾತನ್ನು ಕೇಳಿದ್ದರಿಂದ ದುರಂತಕ್ಕೆ ಕಾರಣವಾಯಿತು. ಹಾಗಾಗಿ ಮುಖ್ಯ ಕಾರ್ಯದರ್ಶಿ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಸಚಿವರು ಒತ್ತಾಯಿಸಿದ್ದರು.
ಸಚಿವರ ಒತ್ತಡಕ್ಕೆ ಮಣಿದ ಹಾಗೂ ಸರ್ಕಾರವನ್ನು ಇಕ್ಕಟ್ಟಿನಿಂದ ಪಾರು ಮಾಡುವ ಸಲುವಾಗಿ ಶಾಲಿನಿ ರಜನೀಶ್ ಅವರನ್ನು ದೀರ್ಘ ರಜೆ ಮೇಲೆ ಕಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಜೊತೆಗೆ ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆಯೂ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿರುವುದಕ್ಕೆ ಪ್ರತಿಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈಗ ಮುಖ್ಯ ಕಾರ್ಯದರ್ಶಿ ವಿರುದ್ಧವೂ ಕ್ರಮ ಜರುಗಿಸಿದರೆ ಮುಂದಾಗುವ ಆಗು ಹೋಗುಗಳ ಬಗ್ಗೆ ಚರ್ಚೆ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕಾಲ್ತುಳಿತದ ಮಾಹಿತಿ ನೀಡಿರಲಿಲ್ಲ
ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಮುಖ್ಯಸ್ಥರಾಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕಾಲ್ತುಳಿತ ಸಂಭವಿಸಿದ್ದ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಡವಾಗಿ ಮಾಹಿತಿ ಮುಟ್ಟಿಸಿದ್ದರು. ಕಾರ್ಯಕ್ರಮಕ್ಕೆ ಅನುಮತಿ, ಎರಡು ಕಡೆ ಆಯೋಜನೆ ಕುರಿತಂತೆ ಸರಿಯಾದ ಮಾಹಿತಿಯನ್ನು ಶಾಲಿನಿ ರಜನೀಶ್ ನೀಡಿರಲಿಲ್ಲ ಎನ್ನಲಾಗಿದೆ. ಹಾಗಾಗಿ ಅವರ ವಿರುದ್ಧವೂ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.