
ಶೇ.50 ರಷ್ಟು ಸುಟ್ಟ ಗಾಯಗಳೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಗೀತಾ, ಸಾವು ಬದುಕಿನ ನಡುವೆ ಹೋರಾಟ ನಡೆಸಿ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮಗಳ ಕೊಡದಿದ್ದಕ್ಕೆ ತಾಯಿಗೆ ಬೆಂಕಿ ಹಚ್ಚಿದ್ದ ವ್ಯಕ್ತಿ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು
ಮಗಳನ್ನು ಮದುವೆ ಮಾಡಿಕೊಡಲು ಒಪ್ಪದಿದ್ದಕ್ಕೆ ಗೀತಾ ಎಂಬುವವರ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮಗಳನ್ನು ಮದುವೆ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಘಟನೆಯಲ್ಲಿ ಗಾಯಾಳು ಮಹಿಳೆ ಗೀತಾ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ನಗರದ ಬಸವೇಶ್ವರನಗರದ ಭೋವಿ ಕಾಲೊನಿಯಲ್ಲಿ ಈ ಘಟನೆ ನಡೆದಿದೆ. ಮೃತ ಗೀತಾ ಅವರು ಅದೇ ಪ್ರದೇಶದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದರು. ಇಲ್ಲಿಯೇ ಟೀ ಸ್ಟಾಲ್ ಇಟ್ಟುಕೊಂಡಿದ್ದ ಮುತ್ತು ಪರಿಚಯವಾಗಿದ್ದ. ಈ ವೇಳೆ ಗೀತಾ ಅವರ ಮಗಳನ್ನು ಮುತ್ತು ಪ್ರೀತಿಸುತ್ತಿದ್ದ. ಮೂವರೂ ಒಂದೇ ಮನೆಯಲ್ಲಿ ವಾಸವಿದ್ದರು.
ಕೆಲ ದಿನಗಳ ನಂತರ ಆರೋಪಿಯು ಗೀತಾ ಅವರ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸಲು ಆರಂಭಿಸಿದ್ದ. ಇದಕ್ಕೆ ತಾಯಿ ಗೀತಾ ಸಮ್ಮತಿಸಿರಲಿಲ್ಲ. ಮಗಳ ಭವಿಷ್ಯದ ದೃಷ್ಟಿಯಿಂದ ಮದುವೆ ಪ್ರಸ್ತಾಪ ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಮುತ್ತು ಹೇಗಾದರೂ ಮಾಡಿ ಸೇಡು ತೀರಿಸಿಕೊಳ್ಳಲು ಹೊಂಚು ಹಾಕಿದ್ದ. ಡಿ.24ರಂದು ಮಧ್ಯರಾತ್ರಿ ಗೀತಾ ನಿದ್ದೆಯಲ್ಲಿದ್ದಾಗ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಶೇ 50ಕ್ಕಿಂತ ಹೆಚ್ಚು ಸುಟ್ಟ ಗಾಯಗಳಿಂದ ನರಳುತ್ತಿದ್ದ ಗೀತಾ ಅವರನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿದ್ದ ಗೀತಾ ಅವರು ಮಂಗಳವಾರ ರಾತ್ರಿ ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಘಟನೆ ನಡೆದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ಮುತ್ತು ಎಂಬಾತನನ್ನು ಬಸವೇಶ್ವರನಗರ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.

