ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
x

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು


ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ ಮೂಲದ ತಾಯಿ ಸುಕನ್ಯಾ (48) ಮಕ್ಕಳಾದ ನಿಖಿತ್ (28) ಹಾಗೂ ನಿಶಿತ್ (28) ಸಾವಿಗೆ ಶರಣಾದವರು.

ಜೆ.ಪಿ.ನಗರದ 3ನೇ ಹಂತದ ಆರನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ಈ ದುರ್ಘಟನೆ ನಡೆದಿದೆ. ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ ಬೆಂಗಳೂರಿನ ಜೆ.ಪಿ ನಗರದಲ್ಲಿ ವಾಸವಾಗಿದ್ದರು. ಮಂಗಳವಾರ (ಮಾರ್ಚ್ 19) ಸುಕನ್ಯಾ ಅವರ ಪತಿ ಇಲ್ಲದ ಸಮಯದಲ್ಲಿ ಬ್ಯಾಂಕ್ ಸಿಬ್ಬಂದಿ ಸಾಲ ವಾಪಾಸ್ ಕೇಳಿ ಮನೆ ಬಳಿಗೆ ಬಂದಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಸುಕನ್ಯಾ, ನಿಖಿತ್ ಹಾಗೂ ನಿಶಿತ್ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೂವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಸಂಬಂಧಿಕರು ಹಾಗೂ ಸ್ಥಳೀಯರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಅಲ್ಲದೇ ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ಸಿಬ್ಬಂದಿ ಮತ್ತು ಸೋಕೋ ತಂಡ(ಸೀನ್ ಆಫ್ ಕ್ರೈಂ ಆಫೀಸರ್ಸ್) ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More
Next Story