Karnataka Bike Taxi Ban| ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಇಂದಿನಿಂದ ನಿಷೇಧ; ಕ್ರಮಕ್ಕೆ ಮುಂದಾದ ಸಾರಿಗೆ ಇಲಾಖೆ
x

ಇಂದಿನಿಂದ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದೆ. 


Karnataka Bike Taxi Ban| ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಇಂದಿನಿಂದ ನಿಷೇಧ; ಕ್ರಮಕ್ಕೆ ಮುಂದಾದ ಸಾರಿಗೆ ಇಲಾಖೆ

ಬೈಕ್ ಟ್ಯಾಕ್ಸಿ ನಿರ್ವಾಹಕರು ಜೂನ್ 15 ರೊಳಗೆ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂಬ ಹೈಕೋರ್ಟ್ ತೀರ್ಪನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಸಾರಿಗೆ ಇಲಾಖೆ ಮುಂದಾಗಿಸಿದ್ದು, ನಿಯಮ ಉಲ್ಲಂಘಿಸುವವರ ದ್ವಿಚಕ್ರ ವಾಹನಗಳನ್ನು ಮುಟ್ಟುಗೋಲು ಹಾಕುತ್ತಿದೆ.


ಹೈಕೋರ್ಟ್‌ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ಜೂ.16 ರಿಂದ ಬೆಂಗಳೂರಿನಲ್ಲಿ ಆನ್‌ಲೈನ್‌ ಆಧರಿತ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಕ್ಕೆ ನಿರ್ಧರಿಸಿದೆ.

ಜೂನ್ 15 ರೊಳಗೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಲು ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕ್ರಮಕ್ಕೆ ಮುಂದಾಗಿದೆ. ನಿಯಮ ಉಲ್ಲಂಘಿಸಿ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ದ್ವಿಚಕ್ರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಅಲ್ಲದೇ 2 ಸಾವಿರ ರೂ.ರಿಂದ 10 ಸಾವಿರ ರೂ.ಗಳವರೆಗೆ ದಂಡ ಅಥವಾ ಮೂರು ತಿಂಗಳಿಂದ ಒಂದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಲಾಗಿದೆ.

ಸಿ.ಎಂಗೆ ಪತ್ರ ಬರೆದ ಬೈಕ್ ಟ್ಯಾಕ್ಸಿ ಚಾಲಕರು

ಕರ್ನಾಟಕದ ಬೈಕ್ ಟ್ಯಾಕ್ಸಿ ಚಾಲಕರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ. ಬೆಂಗಳೂರು ಮತ್ತು ಕರ್ನಾಟಕದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸಿ ಜೀವನ ಕಟ್ಟಿಕೊಂಡಿದ್ದಾರೆ. ಇದರಿಂದ ಅವಲಂಬಿತ ಕುಟುಂಬಗಳ ಸಂಕಷ್ಟಕ್ಕೆ ಒಳಗಾಗಿವೆ ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಯಾಣಿಕರಿಗೆ ದೊಡ್ಡ ಹಿನ್ನಡೆ

ಬೆಂಗಳೂರಿನಂತಹ ಸಂಚಾರ ದಟ್ಟಣೆಯ ನಗರದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಕೊಂಚ ಮಟ್ಟಿನ ಪರಿಹಾರ ಒದಗಿಸಿತ್ತು. ಈಗ ಅವುಗಳ ನಿರ್ಬಂಧದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದು, ದುಬಾರಿ ಶುಲ್ಕ ಭರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದು ವಿಶೇಷವಾಗಿ ಮಧ್ಯಮ ವರ್ಗ ಮತ್ತು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ‌

ಬೈಕ್‌ ಟ್ಯಾಕ್ಸಿ ಸ್ಥಗಿತಕ್ಕೆ ಸರ್ಕಾರ ಸೂಚನೆ ನೀಡಿದೆ. ಆದಾರೂ, ಕೆಲ ಸಂಸ್ಥೆಗಳು ಬೈಕ್‌ ಸೇವೆ ಮುಂದುವರಿಸಿವೆ. ಇವುಗಳಿಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಬೆಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಿ ಮೂರು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಬಿಬಿಎಂಪಿ ಎಲ್ಲಾ ವಲಯಗಳಲ್ಲಿ ಕಠಿಣ ಕ್ರಮ ಹಾಗೂ ಮೇಲ್ವಿಚಾರಣೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ʼದ ಫೆಡರಲ್‌ ಕರ್ನಾಟಕʼಕ್ಕೆ ತಿಳಿಸಿದರು.

ಹೈಕೋರ್ಟ್‌ ಆದೇಶ ಹಾಗೂ ಸರ್ಕಾರದ ಸೂಚನೆ ಉಲ್ಲಂಘಿಸಿ ಬೈಕ್‌ ಸೇವೆ ನೀಡುವವರಿಗೆ 2 ಸಾವಿರ ರೂ.ಗಳಿಂದ 10 ಸಾವಿರ ದಂಡ ವಿಧಿಸಲಾಗುವುದು. ಅಲ್ಲದೇ ಮೂರು ತಿಂಗಳಿಂದ 1 ವರ್ಷದವರೆಗೆ ಶಿಕ್ಷೆಗೆ ವಿಧಿಸಲಾಗುವುದು ಎಂದು ಹೇಳಿದರು.

ಚಾಲಕರ ಗಳಿಕೆ ಮೇಲೆ ನೇರ ಪರಿಣಾಮ

ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತದಿಂದ ಸಾವಿರಾರು ಗಿಗ್ ಕಾರ್ಮಿಕರು ನಿರುದ್ಯೋಗದ ಅಪಾಯದಲ್ಲಿದ್ದಾರೆ. ಅನೇಕ ಚಾಲಕರು ಸಾಲದ ಮೇಲೆ ಬೈಕ್‌ಗಳನ್ನು ಖರೀದಿಸಿದ್ದರು. ಈಗ ಇಎಂಐ ಪಾವತಿಗೂ ಸಂಕಷ್ಟ ಎದುರಾಗುವ ಭೀತಿ ಇದೆ. ಮುಂದಿನ ಮೂರು ತಿಂಗಳಲ್ಲಿ ಸರ್ಕಾರವು ಬೈಕ್ ಟ್ಯಾಕ್ಸಿಗಳಿಗೆ ಸ್ಪಷ್ಟ ನಿಯಮ ಮತ್ತು ಮಾರ್ಗಸೂಚಿ ರೂಪಿಸಬೇಕಾಗುತ್ತದೆ. ಆಗ ಮಾತ್ರ ಭವಿಷ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗಳನ್ನು ಮರಳಿ ಪಡೆಯುವ ಸಾಧ್ಯತೆಯಿದೆ.

ದ್ವಿಚಕ್ರ ವಾಹನವನ್ನು ಸಾರಿಗೆ ವಾಹನವಾಗಿ ಬಳಸುವ ಮೂಲಕ ಅಥವಾ ವಾಹನ ನೋಂದಣಿ ಷರತ್ತುಗಳನ್ನು ಉಲ್ಲಂಘಿಸಿರುವ ಬೈಕ್ ಟ್ಯಾಕ್ಸಿಗಳು 10ಸಾವಿರ ರೂ.ವರೆಗೆ ದಂಡ ಪಾವತಿ ಮಾಡಬೇಕಾಗುತ್ತದೆ. ಬೈಕ್ ಟ್ಯಾಕ್ಸಿ ಚಾಲಕರು ವಾಹನ ವಿಮೆ, ಮಾಲಿನ್ಯ ಮತ್ತು ನೋಂದಣಿ ನವೀಕರಣ ಉಲ್ಲಂಘನೆಗಳಿಗೆ ಸಂಬಂಧಿಸಿ ಇತರ ದಂಡಗಳನ್ನು ಕೂಡ ಪಾವತಿಸಬೇಕಾಗುತ್ತದೆ.

ಬೈಕ್‌ ಟ್ಯಾಕ್ಸಿ ಪ್ರಕರಣವೇನು?

ಸರ್ಕಾರಿ ಮೋಟಾರು ವಾಹನ ಕಾಯ್ದೆ, 1988ರ ಸೆಕ್ಷನ್ 3ರಡಿ ಮಾರ್ಗಸೂಚಿ ರೂಪಿಸುವವರೆಗೆ ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿಗಳು ಕಾರ್ಯನಿರ್ವಹಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿತ್ತು. 6 ವಾರಗಳೊಳಗೆ ರಾಜ್ಯದಲ್ಲಿರುವ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿರ್ಬಂಧಿಸುವಂತೆ ಸರ್ಕಾರಕ್ಕೆ ಜೂ.15ರ ಗಡುವು ನೀಡಿತ್ತು. ರಾಪಿಡೊ, ಓಲಾ, ಉಬರ್ ಸೇರಿ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ, ಮಾರ್ಗಸೂಚಿ ಹೊರಡಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.

ಸರ್ಕಾರ ಸೂಕ್ತ ನಿಯಮಗಳನ್ನು ಜಾರಿ ಮಾಡುವವರೆಗೆ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅಥವಾ ಬಳಸಲು ಸಾರಿಗೆ ಇಲಾಖೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಸೂಚಿಸಿತ್ತು.

ರಾಪಿಡೋ ಸೇರಿ ಹಲವು ಕಂಪನಿಗಳು ಯೆಲ್ಲೋ ಬೋರ್ಡ್‌ ಇಲ್ಲದೇ ಅಕ್ರಮವಾಗಿ ಬೈಕ್‌ ಟ್ಯಾಕ್ಸಿ ಸೇವೆ ನೀಡುತ್ತಿವೆ. ನಿಯಮಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಬೈಕ್‌ ಟ್ಯಾಕ್ಸಿ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಟೋ ಹಾಗೂ ಕ್ಯಾಬ್‌ ಚಾಲಕರು ಒತ್ತಾಯಿಸುತ್ತಿದ್ದರು. ಇದೀಗ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್‌ ತಾತ್ಕಾಲಿಕ ನಿರ್ಬಂಧ ವಿಧಿಸಿದೆ.

Read More
Next Story