
ಬಿಜೆಪಿ ಶಾಸಕರ ಅಮಾನತು | ಸ್ಪೀಕರ್ ಆದೇಶ ರದ್ದತಿ ಕೋರಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ
ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಆರು ತಿಂಗಳ ಕಾಲ ಅಮಾನತು ಮಾಡಿರುವ ಆದೇಶ ರದ್ದು ಮಾಡುವಂತೆ ಕೋರಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರ ಅಮಾನತು ನಿರ್ಧಾರವನ್ನು ರದ್ದು ಮಾಡುವಂತೆ ಕೋರಿ ಬಿಜೆಪಿ ನಿಯೋಗ ಸೋಮವಾರ ರಾಜ್ಯಪಾಲರಿಗೆ ದೂರು ನೀಡಿದೆ.
ಬಜೆಟ್ ಅಧಿವೇಶನದ ಕೊನೆಯ ದಿನ ಹನಿಟ್ರ್ಯಾಪ್ ಪ್ರಕರಣ ಹಾಗೂ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುವ ವಿಚಾರದ ಮೇಲಿನ ಚರ್ಚೆ ಗದ್ದಲ ಸೃಷ್ಟಿಸಿತ್ತು. ಬಿಜೆಪಿ ಶಾಸಕರು ಸಭಾಧ್ಯಕ್ಷರ ಪೀಠದ ಎದುರು ಜಮಾಯಿಸಿ, ಹಾಳೆಗಳನ್ನು ಸ್ಫೀಕರ್ ಮೇಲೆ ಎಸೆದಿದ್ದರು. ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಆರು ತಿಂಗಳ ಕಾಲ ಅಮಾನತು ಮಾಡಿದ್ದರು.
ಶಾಸಕರ ಅಮಾನತು ನಿರ್ಧಾರ ಹಿಂಪಡೆಯುವಂತೆ ಬಿಜೆಪಿ ನಾಯಕರು ವಿಧಾನಸಭಾಧ್ಯಕ್ಷರನ್ನು ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸ್ಪೀಕರ್ ಯು.ಟಿ.ಖಾದರ್ ಅವರು, ಶಾಸಕರ ಅಮಾನತು ಸದನದ ನಿರ್ಧಾರ. ನನ್ನೊಬ್ಬನ ನಿರ್ಧಾರವಲ್ಲ ಎಂದು ಹೇಳಿದ್ದರು. ಇದರಿಂದ ಅಸಮಾಧಾನಗೊಂಡ ಬಿಜೆಪಿ ನಾಯಕರು ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಿ ಶಾಸಕರ ಅಮಾನತು ನಿರ್ಧಾರ ರದ್ಧುಪಡಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಪ್ರಜಾಪ್ರಭುತ್ವ ವಿರೋಧಿ ನಡೆಯಿಂದ ರಾಜ್ಯ ಸರ್ಕಾರ ಹಿಂದಡಿ ಇಡಬೇಕು. ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ದೂರಿನಲ್ಲಿ ಏನಿದೆ?
ಮಾ.21ರಂದು ವಿಧಾನಸಭೆಯ 18 ಬಿಜೆಪಿ ಸದಸ್ಯರನ್ನು 6 ತಿಂಗಳವರೆಗೆ ಅಮಾನತು ಮಾಡಿರುವ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಮಾಡಬೇಕು. ಅಂದು ನಡೆದ ಅಧಿವೇಶನದ ಕಲಾಪದಲ್ಲಿ ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ4ರಷ್ಟು ಮೀಸಲಾತಿಗೆ ಸಂಬಂಧಿಸಿದ ಸೂಕ್ಷ್ಮ ವಿಷಯಗಳ ಚರ್ಚೆಯು ವಾಗ್ವಾದಕ್ಕೆ ಕಾರಣವಾಗಿತ್ತು. ಪ್ರತಿಪಕ್ಷಗಳ ಸದಸ್ಯರಾಗಿ ನಾವು ಸಭಾಧ್ಯಕ್ಷರ ಪೀಠದ ಬಳಿ ಪ್ರತಿಭಟನೆ ನಡೆಸಿದ್ದೆವು. ಆದರೆ, ಸ್ಪೀಕರ್ ಯು.ಟಿ.ಖಾದರ್ ಹಾಗೂ ಆಡಳಿತ ಪಕ್ಷ ನಮ್ಮ ಪ್ರತಿಭಟನೆಯನ್ನು ತಪ್ಪಾಗಿ ಗ್ರಹಿಸಿವೆ. ನಮ್ಮ ಪ್ರತಿಭಟನೆಯಿಂದ ಸದನದ ಘನತೆಗೆ ಯಾವುದೇ ಚ್ಯುತಿಯಾಗಿಲ್ಲ. ಆದರೂ, ಪಕ್ಷದ 18 ಶಾಸಕರನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 348ರ ಅಡಿ ಅಮಾನತುಗೊಳಿಸಲಾಗಿದೆ ಎಂದು ಪತ್ರದಲ್ಲಿ ದೂರಿದೆ.
ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಶಾಸಕರ ಅಮಾನತು ಆದೇಶ ರದ್ದುಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಈಗಾಗಲೇ ಮುಖ್ಯಮಂತ್ರಿ, ಸ್ಪೀಕರ್ ಅವರೊಂದಿಗೆ ನಾನು ಹಾಗೂ ವಿಜಯೇಂದ್ರ ಮಾತನಾಡಿದ್ದೇವೆ. ರಾಜ್ಯಪಾಲರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಅಭಿಪ್ರಾಯ ವ್ಯಕ್ತಪಡಿಸಲು ಎಲ್ಲರಿಗೂ ಅವಕಾಶವಿದೆ
ಬಿಜೆಪಿಯ18 ಶಾಸಕರ ಅಮಾನತು ಪ್ರಶ್ನಿಸಿ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅನಿಸಿಕೆ ವ್ಯಕ್ತಪಡಿಸುವುದಕ್ಕೆ ಎಲ್ಲರಿಗೂ ಅವಕಾಶ ಇದೆ. ಎಲ್ಲವೂ ಸಮಯ ಮತ್ತು ನಿಯಮದ ಅನುಗುಣವಾಗಿ ನಡೆಯುತ್ತದೆ ಎಂದು ತಿಳಿಸಿದ್ದಾರೆ.
ಭಾನುವಾರ ಮಂಗಳೂರಿನಲ್ಲಿ ಈ ಕುರಿತು ಮಾತನಾಡಿದ್ದ ಯು.ಟಿ.ಖಾದರ್ ಅವರು, ಶಾಸಕರ ಅಮಾನತು ನನ್ನೊಬ್ಬನ ನಿರ್ಧಾರವಲ್ಲ. ಸದನದ ನಿರ್ಧಾರ. ಅಮಾನತಾದವರಿಗೆ ತಪ್ಪಿನ ಅರಿವಾಗಬೇಕು. ಮುಂದೆ ಉತ್ತಮ ನಾಯಕರಾಗಿ ಬೆಳೆಯುವುದಕ್ಕೆ ಶಾಸಕರಿಗೆ ಕೊಟ್ಟಿರುವ ಸವಾಲು ಎಂದು ವ್ಯಾಖ್ಯಾನಿಸಿದ್ದರು.