ಆಂತರಿಕ ಸಮಸ್ಯೆ ಮರೆಮಾಚಲು ಬಿಜೆಪಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್ ವ್ಯಂಗ್ಯ
x
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌

ಆಂತರಿಕ ಸಮಸ್ಯೆ ಮರೆಮಾಚಲು ಬಿಜೆಪಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು, ಮರೆಮಾಚಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ.


"ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಬಿಜೆಪಿಯ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು "ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?" ಎಂದು ಕುಟುಕಿದರು.

ತುಂಗಭದ್ರಾ ತುಂಬಿದ ತಕ್ಷಣ ಬಾಗಿನ ಅರ್ಪಣೆ

ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ. ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು. ಆಗ ನಾವೇನು ಮಾತನಾಡಲಿಲ್ಲ. ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಟೀಕೆಗಳು ಸಾಯುತ್ತವೆ. ಅದಕ್ಕೆ ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ ಎಂದು ಹೇಳಿದರು.

ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷತಾ ವರದಿಯನ್ನು ನೀಡಲಿದ್ದಾರೆ. ಆಲಮಟ್ಟಿ ತುಂಬಿ ತುಳುಕುತ್ತಿದೆ. ಮಂಡ್ಯ ಸೇರಿದಂತೆ ಇತರೆ ಗ್ರಾಮಾಂತರ ಭಾಗಗಳಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಉತ್ತಮ ಮಳೆಯಾಗಿ ತುಂಬುವ ನಿರೀಕ್ಷೆ ಇದೆ ಎಂದು ಹೇಳಿದರು.

Read More
Next Story