ಕಾಂಗ್ರೆಸ್‌ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಬಿ.ಆರ್‌.ಪಾಟೀಲ್‌ ಹೇಳಿಕೆಯೇ ಸಾಕ್ಷಿ: ಎಚ್‌ಡಿಕೆ ಕಿಡಿ
x

ಕಾಂಗ್ರೆಸ್‌ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಬಿ.ಆರ್‌.ಪಾಟೀಲ್‌ ಹೇಳಿಕೆಯೇ ಸಾಕ್ಷಿ: ಎಚ್‌ಡಿಕೆ ಕಿಡಿ

ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್‌ ಹಾವಳಿ ಮತ್ತು ಭ್ರಷ್ಟಾಚಾರ ಮಿತಿ ಮೀರಿದೆ. ಆಡಿಯೋ ವೈರಲ್‌ನಲ್ಲಿರುವುದು ಸತ್ಯ ಎಂದು ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಕರ್ನಾಟಕ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ನೀಡಿರುವ ಹೇಳಿಕೆಯ ವಿಡಿಯೋ ವೈರಲ್‌ ಆಗಿರುವುದು ರಾಜ್ಯದಲ್ಲಿ ಇದೀಗ ಭಾರೀ ಸದ್ದು ಮಾಡುತ್ತಿದೆ. ಪ್ರತಿಪಕ್ಷಗಳಿಗೆ ಬಿ.ಆರ್‌.ಪಾಟೀಲ್‌ ಹೇಳಿಕೆಯು ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಲು ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ.

ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಹ ಬಿ.ಆರ್‌.ಪಾಟೀಲ್‌ ಹೇಳಿಕೆಯೇ ಕಾಂಗ್ರೆಸ್‌ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್‌ ಹಾವಳಿ ಮತ್ತು ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯವಾಗಿಲ್ಲ. ನಿವೇಶನ ಹಂಚಿಕೆ ಮಾತ್ರವಲ್ಲ ಎಲ್ಲ ವಿಚಾರದಲ್ಲಿಯೂ ಕಮಿಷನ್‌ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕಂದಾಯ ಸಚಿವ ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂಬುದಾಗಿ ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಸಚಿವರಿಗೆ ಗೊತ್ತಿದೆ. ಕೃಷ್ಣಬೈರೇಗೌಡ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂಬುದನ್ನು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ? ಎಂದು ಟೀಕಿಸಿದ್ದಾರೆ.

ಬಿ.ಆರ್.ಪಾಟೀಲ್ ಹೇಳಿರುವುದರಲ್ಲಿ ಸತ್ಯ ಇದೆ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ಅವರು ಕಿಡಿಕಾರಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಆಕ್ರೋಶ:

ಇದೇ ವೇಳೆ 2028ಕ್ಕೆ ಜೆಡಿಎಸ್ -ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೋಡ್ತೀನಿ ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮನುಷ್ಯತ್ವದ ದಾರಿದ್ಯ್ರ ಇದ್ದು, ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ. ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ. ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯವನ್ನು ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ. ದಾರಿದ್ರ್ಯ ಇರುವುದು ಅವರಿಗೆ, ಮನುಷ್ಯತ್ವದ ದಾರಿದ್ರ್ಯ ಇದೆ ಎಂದು ಕಿಡಿಕಾರಿದ್ದಾರೆ.

ಜನರಿಂದ ಕೊಳ್ಳೆ ಹೊಡೆದ ಆ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕಾ? ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ. ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ. ಆ ವ್ಯಕ್ತಿಯ ಪಾಪದ ಹಣ, ಲೂಟಿ ಹೊಡೆದಿರುವ ಹಣದಿಂದ ಬಟ್ಟೆ ತರಿಸಿಕೊಳ್ಳಬೇಕಾ? ಎಂದು ವಾಗ್ದಾಳಿ ನಡೆಸಿದರು.

ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ:

ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮಾಡುತ್ತಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ. ಅದು 40 ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿ. ಅಲ್ಲಿ ಯಾವುದೇ ರೀತಿಯ ಒತ್ತುವರಿಯಾಗಿಲ್ಲ. ಸರ್ಕಾರ ರಾಜಕೀಯ ದ್ವೇಷ ಮಾಡಿಕೊಂಡು ಹೊರಟಿದೆ. ಅದು ಕಾನೂನು ವ್ಯಾಪ್ತಿಯಲ್ಲಿ ನ್ಯಾಯಾಲಯದಲ್ಲಿ ತೀರ್ಮಾನವಾಗುತ್ತದೆ ಎಂದರು.

Read More
Next Story