ಒಂದೇ ಒಂದು ರೂಪಾಯಿ ಲಂಚ ಪಡೆಯದೇ ಗ್ರಾಮ ಆಡಳಿತಾಧಿಕಾರಿಗಳ ನೇಮಕ; ಸಿಎಂ
x

ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿದರು.

ಒಂದೇ ಒಂದು ರೂಪಾಯಿ ಲಂಚ ಪಡೆಯದೇ ಗ್ರಾಮ ಆಡಳಿತಾಧಿಕಾರಿಗಳ ನೇಮಕ; ಸಿಎಂ

ಸಾವಿರ ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ, ನಾಲ್ಕು ಸಾವಿರ ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕವನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.


ಗ್ರಾಮ ಆಡಳಿತಾಧಿಕಾರಿಗಳ ನೇಮಕವನ್ನು ಒಂದೇ ಒಂದು ರೂಪಾಯಿ ಲಂಚವಿಲ್ಲದೆ, ಮಧ್ಯವರ್ತಿಗಳ ಹಾವಳಿಯಿಲ್ಲದೆ ಮಾಡಲಾಗಿದ್ದು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಮಂದಿನ ದಿನಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆನ

ಮಂಗಳವಾರ (ಏಪ್ರಿಲ್‌ 29) ರಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಸಾವಿರ ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು ನಾಲ್ಕು ಸಾವಿರ ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಹಿಂದೆ 1994-1995 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಶಿಕ್ಷಕರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು ಎಂದರು.

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಆರು ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು ಅದರಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದು, ಒಟ್ಟು 9834 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಮಂಜೂರಾತಿ ದೊರೆತಿದೆ. ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಸಾವಿರ ಗ್ರಾಮ ಆಡಿಳಿತಾಧಿಕಾರಿಗಳು ಸೇರ್ಪಡೆಯಾಗಿದ್ದು, ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ ಎಂದು ಭರವಸೆ ನೀಡಿದರು.

ದಾಖಲೆಗಳನ್ನು ಕರಾರುವಾಕ್ಕಾಗಿಡುವುದು ಅವಶ್ಯಕ

ಕೃಷಿಕರ ಜಮೀನುಗಳ ಲೆಕ್ಕ ಇಡುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ. ಹಳ್ಳಿಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ದಾಖಲೆಗಳು ಸರಿಯಾಗಿರಬೇಕು. ಈಗ ಪ್ರತಿಯೊಂದು ವ್ಯವಸ್ಥೆಯೂ ಡಿಜಿಟಲೀಕರಣವಾಗಿದೆ. ಆನ್​​ಲೈನ್​​ನಲ್ಲಿ ದಾಖಲೆಗಳನ್ನು ಪಡೆಯುವ ವ್ಯವಸ್ಥೆ ಬಂದ ನಂತರ ನಾವು ಯಾವುದೇ ಕಾರಣಕ್ಕೂ ತಪ್ಪುಗಳಿಗೆ ಅವಕಾಶ ನೀಡಬಾರದು ಎಂದು ಸಿಎಂ ಹೇಳಿದರು.

ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ ಬಹಳ ಮಹತ್ವದ್ದು. ರೈತರಿಗೂ, ಗ್ರಾಮ ಆಡಳಿತಾಧಿಕಾರಿಗಳಿಗೆ ಹತ್ತಿರದ ಸಂಬಂಧವಿದ್ದು, ಪ್ರತಿಯೊಬ್ಬ ರೈತರ ಪರಿಚಯ ಅವರಿಗಿರುತ್ತದೆ. ಅವರ ಭೂಮಿಯ ಕುರಿತು ಮಾಹಿತಿ ಗೊತ್ತಿರುತ್ತದೆ. ಅವರ ಪರಿಚಯವಿಟ್ಟುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸುವುದು ನಿಮ್ಮ ಕೆಲಸ ಎಂದು ನೂತನ ಗ್ರಾಮ ಆಡಳಿತಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಗ್ರಾಮ ಆಡಳಿತಾಧಿಕಾರಿಗಳು ಉತ್ತಮ ನಡತೆ, ಸಂಪರ್ಕವನ್ನು ಹೊಂದಿದ್ದರೆ ರೈತರು ನಿಮ್ಮ ಮಾತನ್ನು ಕೇಳುತ್ತಾರೆ. ಒಳ್ಳೆ ರೀತಿಯ ಕೆಲಸ ಮಾಡಿಕೊಟ್ಟರೆ ನಿಮ್ಮ ಮೇಲೂ ಗೌರವವಿರುತ್ತದೆ. ಜನರ ಕೆಲಸ ದೇವರ ಕೆಲಸ ಎಂದು ನೆನೆಪಿಟ್ಟುಕೊಳ್ಳಬೇಕು. ನಾವಿರುವುದೇ ಜನರ ಸೇವೆಗಾಗಿ ಎನ್ನುವುದನ್ನು ಮರೆಯಬಾರದು. ಆರು ಲಕ್ಷ ಜನ ಸರ್ಕಾರಿ ನೌಕರರು ಅವರಿಗಾಗಿಯೇ ಇರುವುದು. ರಾಜಕಾರಣಿಗಳು ಜನರಿಂದ ಆಯ್ಕೆಯಾದರೆ, ಸರ್ಕಾರದಿಂದ ಆಯ್ಕೆಯಾದ ಸರ್ಕಾರಿ ನೌಕರರು ಜನಸೇವೆಯನ್ನು ಅವರ ಧ್ಯೇಯವಾಗಿಸಬೇಕು ಎಂದು ಸಲಹೆ ನೀಡಿದರು.

ಕಂದಾಯ ಇಲಾಖೆಯದ್ದುಅತ್ಯಂತ ಜವಾಬ್ದಾರಿಯುತ ಕೆಲಸ. ಇಲ್ಲಿ ಸುಧಾರಣೆಗಳನ್ನು ತರಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಸೂಚಿಸಲಾಗಿತ್ತು, ಅವರು ಈಗಾಗಲೇ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಅವರಿಗೆ ಇನ್ನಷ್ಟ ಸುಧಾರಣೆಗಳನ್ನು ತರುವ ಶಕ್ತಿ ಇದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಅಧಿಕಾರಿಗಳು ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಬೇಕು

ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯವಿರುವುದರಿಂದ ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಲು ಸಾಧ್ಯವಾಗುತ್ತದೆ. ರೈತರ ಮನೆಮನೆಗೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ 9834 ಹುದ್ದೆಗಳಿಗೆ ಲ್ಯಾಪಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ ನಾಲ್ಕು ಸಾವಿರ ಲ್ಯಾಪ್ ಟಾಪ್‌ಗಳನ್ನು ನೀಡಲಾಗುತ್ತಿದ್ದು, ಯಾವುದೇ ಕಾರಣಕ್ಕೆ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು. ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರಿಗೆ ಅನುಕೂಲ ಕಲ್ಪಿಸುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ ಎಂದರು.

ಭೂಮಿ ಬೀಟ್ ಕಾರ್ಯಕ್ರಮ

ಕೃಷಿ ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರ ಹಾಗೂ ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮವನ್ನು ಸರ್ಕಾರ ಜಾರಿಗೆ ತಂದಿದೆ. ಜಮೀನುಗಳ ಅತಿಕ್ರಮಣದಂತಹ ಸಮಸ್ಯೆಗಳನ್ನು ನಿವಾರಿಸಲು ಭೂಮಿ ಬೀಟ್ ಕಾರ್ಯಕ್ರಮ ಅನುಕೂಲ ಕಲ್ಪಿಸಿದೆ. ವಿದ್ಯಾರ್ಥಿದೆಸೆಯಲ್ಲಿ ವ್ಯವಸಾಯ ಕೈಗೊಂಡ ಸಂದರ್ಭದಲ್ಲಿ ಪಕ್ಕದ ರೈತ ಜಮೀನನ್ನು ಅತಿಕ್ರಮಣ ಮಾಡಿದ್ದು, ಈ ಬಗ್ಗೆ ನಡೆದ ಪಂಚಾಯತಿಯ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ರೈತರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ

ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ. ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆ ಭಾವನೆಯನ್ನು ತಳೆಯದೆ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ಶುಭಹಾರೈಸಿದರು.

ಶಾನುಭೋಗರೆಂದರೆ ಗುರುಗಳಿದ್ದಂತೆ

ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ಮಾಡುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲೂಕು ಮಂಡಳಿ ಚುನಾವಣೆಗೆ ನಿಂತಾಗ, ತಂದೆ ನಿಲ್ಲಿಸಬೇಕೋ ಬೇಡವೋ ಎಂದು ಶಾನುಭೋಗರನ್ನು ಕೇಳಿ, ನಿಲ್ಲಬಾರದು ಎಂದು ತಮ್ಮ ತಂದೆ ಹಠ ಮಾಡಿದ್ದನ್ನು, ನಂತರ ಗೆದ್ದದ್ದನ್ನು ಸಿಎಂ ಸ್ಮರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾನುಭೋಗರು ಎಷ್ಟು ಪ್ರಭಾವ ಬೀರುತ್ತಿದ್ದರು ಎಂದು ವಿವರಿಸಿದರು.

Read More
Next Story