ಬಡವರ ಅನ್ನ ಕಿತ್ತುಕೊಳ್ಳುತ್ತಿದೆ ಬಿಜೆಪಿ ಸಂಚು ಮಾಡಿದೆ: ಸಚಿವ ಬೈರತಿ ಸುರೇಶ್‌ ಆಕ್ರೋಶ
x

ಬಡವರ ಅನ್ನ ಕಿತ್ತುಕೊಳ್ಳುತ್ತಿದೆ ಬಿಜೆಪಿ ಸಂಚು ಮಾಡಿದೆ: ಸಚಿವ ಬೈರತಿ ಸುರೇಶ್‌ ಆಕ್ರೋಶ

ಕೇಂದ್ರ ಸರ್ಕಾರದ ಬಿಬಿಜಿ ರಾಮ್‌ಜಿ ಹೊಸ ಮಸೂದೆಯು ಕೇವಲ ಹೆಸರನ್ನು ಬದಲಿಸುವುದಲ್ಲದೆ, ಯೋಜನೆಯ ಆಶಯವನ್ನೇ ಬುಡಮೇಲು ಮಾಡುತ್ತಿದೆ. ಹಿಂದಿನಂತೆ ಮನರೆಗಾ ಹೆಸರಿನಲ್ಲಿಯೇ ಯೋಜನೆ ಮುಂದುವರಿಯಬೇಕು


ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೆಗಾ) ಯೋಜನೆಯ ಸ್ವರೂಪವನ್ನೇ ಮಾರ್ಪಾಡು ಮಾಡುವ ಮೂಲಕ ಗ್ರಾಮೀಣ ಬಡವರ ಅನ್ನ ಕಿತ್ತುಕೊಳ್ಳಲು ಸಂಚು ರೂಪಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತೀವ್ರವಾಗಿ ಕಿಡಿ ಕಾರಿದ್ದಾರೆ.

ಕೋಲಾರದಲ್ಲಿ ಅವರು, ಕೇಂದ್ರ ಸರ್ಕಾರದ ಹೊಸ ಮಸೂದೆಯು ಕೇವಲ ಹೆಸರನ್ನು ಬದಲಿಸುವುದಲ್ಲದೆ, ಯೋಜನೆಯ ಆಶಯವನ್ನೇ ಬುಡಮೇಲು ಮಾಡುತ್ತಿದೆ. ಹಿಂದಿನಂತೆ ಮನರೆಗಾ ಹೆಸರಿನಲ್ಲಿಯೇ ಯೋಜನೆ ಮುಂದುವರಿಯಬೇಕು. ಅಲ್ಲಿವರೆಗೆ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಹೋರಾಟ ಮಾಡಲಿದೆ ಗ್ರಾಮೀಣ ಪ್ರದೇಶದ ಕೋಟ್ಯಂತರ ಬಡವರಿಗಾಗಿ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ವೇಳೆ ಮನರೆಗಾ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಕೂಲಿಕಾರರು, ರೈತರು, ಪರಿಶಿಷ್ಟ ವರ್ಗದವರು, ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದರು. ಕಾಂಗ್ರೆಸ್ ಸರ್ಕಾರ ಈ ವರ್ಗದ ಜನರಿಗೆ ಕೇಳಿ ಪಡೆದುಕೊಳ್ಳುವ ಹಕ್ಕನ್ನು ನೀಡಿತ್ತು. ಆದರೆ, ಬಿಜೆಪಿ ಸರ್ಕಾರ ಈ ಹಕ್ಕನ್ನು ಕಸಿದುಕೊಳ್ಳಲು ಹೊರಟಿದೆ ಎಂದು ಕಿಡಿ ಕಾರಿದರು.

ಕಳೆದ ಡಿಸೆಂಬರ್ 17 ರಂದು ಕೇಂದ್ರ ಸರ್ಕಾರ ಕೇವಲ 8 ಗಂಟೆಗಳ ಕಾಲ ಚರ್ಚೆ ನಡೆಸಿ, ಪ್ರತಿಪಕ್ಷಗಳ ಯಾವುದೇ ಅಭಿಪ್ರಾಯಕ್ಕೂ ಬೆಲೆ ಕೊಡದೆ ಸದನವನ್ನು ಬುಲ್ಡೋಜ್ ಮಾಡಿ ಈ ಮಸೂದೆಯನ್ನು ಅಂಗೀಕರಿಸಿದೆ. ಈ ಮೂಲಕ ದೇಶದ 12.16 ಕೋಟಿ ಕಾರ್ಮಿಕರ ಬದುಕಿಗೆ ಕೊಳ್ಳಿ ಇಡಲಾಗಿದೆ. ಇವರಲ್ಲಿ ಶೇ. 53 ಕ್ಕೂ ಹೆಚ್ಚು ಮಹಿಳೆಯರು ಮತ್ತು ಶೇ. 28 ರಷ್ಟು ದಲಿತ ಹಾಗೂ ಹಿಂದುಳಿದ ವರ್ಗದವರಿದ್ದಾರೆ. ನಮ್ಮ ರಾಜ್ಯವೊಂದರಲ್ಲೇ 71.18 ಲಕ್ಷ ಕಾರ್ಮಿಕರು ಈ ಯೋಜನೆಯನ್ನು ನಂಬಿಕೊಂಡಿದ್ದು, ಕೇಂದ್ರದ ನಿರ್ಧಾರದಿಂದ ಅವರೆಲ್ಲರೂ ಬೀದಿಗೆ ಬೀಳಲಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಯೋಜನೆಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೆಸರನ್ನು ತೆಗೆದುಹಾಕುವ ಮೂಲಕ ಅವರ ಗ್ರಾಮೀಣ ಆರ್ಥಿಕತೆಯ ಕನಸಿಗೆ ತಿಲಾಂಜಲಿ ನೀಡಲಾಗುತ್ತಿದೆ. ಮನರೆಗಾದಲ್ಲಿ ಗ್ರಾಮ ಪಂಚಾಯಿತಿಗೆ ಯೋಜನೆ ಆಯ್ಕೆ ಮಾಡುವ ಅಧಿಕಾರವಿತ್ತು. ಆದರೆ, ಈಗ ಆ ಅಧಿಕಾರವನ್ನು ಕಿತ್ತುಕೊಂಡು ಕೇಂದ್ರ ಸರ್ಕಾರ ಆಯ್ಕೆ ಮಾಡಿದ ಗ್ರಾಮಕ್ಕೆ ಮಾತ್ರ ಅನುದಾನ ಲಭ್ಯವಾಗಲಿದೆ. ವರ್ಷವಿಡೀ ನೂರು ದಿನಗಳ ಉದ್ಯೋಗದ ಅವಕಾಶವನ್ನು ತೆಗೆದುಹಾಕಿ ಕೃಷಿ ಚಟುವಟಿಕೆ ಸಂದರ್ಭದಲ್ಲಿ 60 ದಿನಗಳ ಕಾಲ ಉದ್ಯೋಗ ಇಲ್ಲದಂತೆ ಮಾಡಲಾಗಿದೆ. ಹೀಗಾಗಿ ಕೂಲಿ ಕಾರ್ಮಿಕರು ಅತ್ಯಂತ ಕಡಿಮೆ ಕೂಲಿಗೆ ಬೇರೆ ಕಡೆ ಉದ್ಯೋಗಕ್ಕೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸರ್ಕಾರ ತಂದಿದೆ. ಈ ಮೂಲಕ ಕೂಲಿ ಖಾತರಿಯನ್ನು ಕಿತ್ತುಕೊಂಡು ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನರೇಗಾ ವೇತನವನ್ನು ಕೇಂದ್ರ ಸರ್ಕಾರವೇ ಭರಿಸುತ್ತಿತ್ತು. ಆದರೆ, ಈಗ ಶೇಕಡಾ 60 ರಷ್ಟನ್ನು ಕೇಂದ್ರ ನೀಡಲಿದ್ದು, ಉಳಿದ ಶೇಕಡ 40 ರಷ್ಟನ್ನು ರಾಜ್ಯ ಸರ್ಕಾರಗಳೇ ಭರಿಸಬೇಕಿದೆ. ಇದರಿಂದ ರಾಜ್ಯಗಳಿಗೆ ಭಾರೀ ಹೊರೆ ಬೀಳುತ್ತದೆ. ಈ ಮೊದಲು ನೇರವಾಗಿ ಕೂಲಿ ಕಾರ್ಮಿಕರ ಖಾತೆಗೆ ಮನರೇಗಾ ಕೂಲಿ ಪಾವತಿಯಾಗುತ್ತಿತ್ತು. ಆದರೆ, ಈಗ ಈ ಕರಾಳ ಕಾಯ್ದೆಯಿಂದ ಕಾರ್ಮಿಕರನ್ನು ನಿಯೋಜಿಸುವ ಗುತ್ತಿಗೆದಾರರಿಗೆ ಅವಕಾಶ ಸಿಕ್ಕಿದ್ದು, ಅವರು ವೇತನ ವಿಚಾರದಲ್ಲಿ ಕಾರ್ಮಿಕರನ್ನು ಶೋಷಣೆ ಮಾಡಲಿದ್ದಾರೆ. ಕೆಲವು ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ದುರುದ್ದೇಶ ಈ ಕಾಯ್ದೆಯ ಹಿಂದಿದೆ. ಈ ಮೊದಲು ನೇರವಾಗಿ ಕೂಲಿ ಕಾರ್ಮಿಕರ ಖಾತೆಗೆ ಮನರೇಗಾ ಕೂಲಿ ಪಾವತಿಯಾಗುತ್ತಿತ್ತು. ಆದರೆ, ಈಗ ಈ ಕರಾಳ ಕಾಯ್ದೆಯಿಂದ ಕಾರ್ಮಿಕರನ್ನು ನಿಯೋಜಿಸುವ ಗುತ್ತಿಗೆದಾರರಿಗೆ ಅವಕಾಶ ಸಿಕ್ಕಿದ್ದು, ಅವರು ವೇತನ ವಿಚಾರದಲ್ಲಿ ಕಾರ್ಮಿಕರನ್ನು ಶೋಷಣೆ ಮಾಡಲಿದ್ದಾರೆ. ಕೆಲವು ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ದುರುದ್ದೇಶ ಈ ಕಾಯ್ದೆಯ ಹಿಂದಿದೆ ಎಂದು ಆರೋಪಿಸಿದರು.

ಮನರೆಗಾ ಯೋಜನೆಯು ಬಡವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ ಹಕ್ಕಾಗಿದೆ. ಈ ಹಕ್ಕನ್ನು ಬಿಜೆಪಿ ಕಸಿದುಕೊಳ್ಳಲು ಹೊರಟಿದೆ. ಕೂಡಲೇ ಈ ಕರಾಳ ಕಾಯ್ದೆಯನ್ನು ರದ್ದುಗೊಳಿಸಬೇಕು ಮತ್ತು ಕಾರ್ಮಿಕರಿಗೆ ದಿನಕ್ಕೆ ಕನಿಷ್ಠ 400 ರೂಪಾಯಿ ವೇತನ ನಿಗದಿ ಮಾಡಬೇಕು ಎಂದು ಆಗ್ರಹಿಸಿದ ಸಚಿವರು, ಹಳೆಯ ಸ್ವರೂಪದಲ್ಲಿಯೇ ಯೋಜನೆ ಮುಂದುವರಿಯುವವರೆಗೆ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

Read More
Next Story