ನಂದಿಗಿರಿಧಾಮದಲ್ಲಿ ಜೂನ್ 19ರಂದು ಸಚಿವ ಸಂಪುಟ ಸಭೆ: ಡಾ. ಎಂ.ಸಿ. ಸುಧಾಕರ್
x

ನಂದಿಗಿರಿಧಾಮದಲ್ಲಿ ಜೂನ್ 19ರಂದು ಸಚಿವ ಸಂಪುಟ ಸಭೆ: ಡಾ. ಎಂ.ಸಿ. ಸುಧಾಕರ್

ಸೋಮವಾರ (ಜೂನ್ 2) ಗೌರಿಬಿದನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಮಲೆಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯ ನಂತರ, ನಂದಿಗಿರಿಧಾಮದಲ್ಲೂ ಇಂತಹದ್ದೇ ಸಭೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದೆ ಎಂದರು.


ಜೂನ್ 19ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಐತಿಹಾಸಿಕ ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಈ ಸಭೆಯ ಮುಖ್ಯ ಉದ್ದೇಶ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವುದಾಗಿದೆ ಎಂದು ಅವರು ವಿವರಿಸಿದ್ದಾರೆ.

ಸೋಮವಾರ (ಜೂನ್ 2) ಗೌರಿಬಿದನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಮಲೆಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯ ನಂತರ, ನಂದಿಗಿರಿಧಾಮದಲ್ಲೂ ಇಂತಹದ್ದೇ ಸಭೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದೆ ಎಂದರು. ಇದೇ ವೇಳೆ ಸಚಿವರು, ನಂದಿಗಿರಿಧಾಮದ ಐತಿಹಾಸಿಕ ಮಹತ್ವವನ್ನು ಉಲ್ಲೇಖಿಸಿ, ಮಹಾತ್ಮ ಗಾಂಧಿಯವರು ಈ ಕ್ಷೇತ್ರಕ್ಕೆ ಎರಡು ಬಾರಿ ಭೇಟಿ ನೀಡಿದ್ದರು ಎಂಬುದನ್ನು ಸ್ಮರಿಸಿದರು.

ಮುಖ್ಯಮಂತ್ರಿಗಳು ಎರಡು ದಿನಗಳ ಹಿಂದೆ ಕರೆ ಮಾಡಿ, ಜೂನ್ 19ರಂದು ನಂದಿಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ಆಯೋಜಿಸುವ ಸಾಧ್ಯತೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ಸಚಿವ ಸುಧಾಕರ್ ತಿಳಿಸಿದರು. ಈ ಸಭೆಗೆ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಜೂನ್ 19ರಂದು ಬೇರೆ ಯಾವುದೇ ಕಾರ್ಯಕ್ರಮಗಳು ಇಲ್ಲದಿದ್ದರೆ, ಆ ದಿನಾಂಕದಂದೇ ಸಭೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಚಿವ ಸಂಪುಟ ಸಭೆಯು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಭಿವೃದ್ಧಿಗೆ ನಿರ್ಣಾಯಕವಾಗಿದೆ. ಈ ಜಿಲ್ಲೆಗಳಿಗೆ ಸಂಬಂಧಿಸಿದ ಅಗತ್ಯ ಅನುದಾನ, ಯೋಜನೆಗಳು ಮತ್ತು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಈ ಜಿಲ್ಲೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳಿದ್ದು, ಅವುಗಳಿಗೆ ಈ ಸಭೆಯಲ್ಲಿ ಒತ್ತು ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಮಲೆಮಹದೇಶ್ವರ ಬೆಟ್ಟದಲ್ಲೂ ಸಭೆ ಯಶಸ್ವಿ

ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ನಡೆದಿತ್ತು. ರಾಜ್ಯದ ಗ್ರಾಮೀಣ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಇಂತಹ ಸಭೆಗಳನ್ನು ಆಯೋಜಿಸುವ ಮೂಲಕ ಸರ್ಕಾರವು ಆಯಾ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂಬುದನ್ನು ಸಾಬೀತುಪಡಿಸಿತ್ತು. ಮಲೆಮಹದೇಶ್ವರ ಬೆಟ್ಟದ ಸಭೆಯಲ್ಲಿ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳು ಮತ್ತು ಅನುದಾನಗಳ ಕುರಿತು ಚರ್ಚೆ ನಡೆದಿತ್ತು.

Read More
Next Story