Cabinet meeting: Entry restriction to Nandi hill station, district administration orders
x

ಚಿಕ್ಕಬಳ್ಳಾಪುರದ ನಂದಿ ಗಿರಿಧಾಮ

Cabinet Meeting ರೈತರ ಆಕ್ರೋಶಕ್ಕೆ ಬೆದರಿದ ಸರ್ಕಾರ ; ನಂದಿಬೆಟ್ಟದ ವಿಶೇಷ ಸಚಿವ ಸಂಪುಟ ಸಭೆ ದಿಢೀರ್ ರದ್ದು

ಬಯಲು ಸೀಮೆ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದಶಕಗಳಿಂದ ಇದ್ದ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಪುಟ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿತ್ತು


ನಾಳೆ(ಜೂ.19) ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ರಾಜ್ಯ ಸರ್ಕಾರ ದಿಢೀರ್ ರದ್ದು ಮಾಡಿದೆ.

ರೈತರ ಪ್ರತಿಭಟನೆ ಹಾಗೂ ಶಾಸಕರ ಅನುದಾನದ ಬೇಡಿಕೆ ಮುಂದಿಟ್ಟ ಹಿನ್ನೆಲೆಯಲ್ಲಿ ನಂದಿ ಬೆಟ್ಟದ ಮೇಲೆ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು ಮಾಡಿದ್ದು, ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಣೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಸ್ವಾಧೀನ ಕೈಬಿಡುವಂತೆ ರೈತರ ಪ್ರತಿಭಟನೆ ನಡೆಸುತ್ತಿದ್ದು, ಸಂಪುಟ ಸಭೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರಣ ಕೊನೆ ಕ್ಷಣದಲ್ಲಿ ಸ್ಥಳ ಬದಲಾವಣೆ ಮಾಡಲಾಗಿದೆ. ನಂದಿ ಬೆಟ್ಟದ ಮೇಲೆ ಆಯೋಜಿಸಲು ಉದ್ದೇಶಿಸಿದ್ದ ಸಂಪುಟ ಸಭೆಯ ಅಜೆಂಡಾದಲ್ಲಿ ಸ್ಥಳೀಯವಾಗಿ ಎರಡು ವಿಷಯಗಳ ಚರ್ಚೆಯನ್ನು ಮಾತ್ರ ತೆಗೆದುಕೊಳ್ಳಲಾಗಿತ್ತು.

ಅಲ್ಲದೇ ಬಯಲು ಸೀಮೆ ಜಿಲ್ಲೆಗಳಿಗೆ ಯಾವುದೇ ವಿಶೇಷ ಯೋಜನೆ ಘೋಷಿಸುವ ಪ್ರಸ್ತಾಪ ಅಜೆಂಡಾದಲ್ಲಿ ಇಟ್ಟಿರಲಿಲ್ಲ. ಈ ಬಗ್ಗೆ ಬಯಲು ಸೀಮೆ ಜಿಲ್ಲೆಗಳ ಜನರಿಂದ ಸಂಪುಟ ಸಭೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸಂಪುಟ ಸಭೆ ರದ್ದು ಮಾಡಲಾಗಿದೆ.

ಬಯಲು ಸೀಮೆ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದಶಕಗಳಿಂದ ಇದ್ದ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಪುಟ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿತ್ತು.

ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 18 ವರ್ಷಗಳು ಉರುಳಿದರೂ ಯಾವುದೇ ಬದಲಾವಣೆ ಕಂಡಿಲ್ಲ. ಅವಳಿ ಜಿಲ್ಲೆಗಳಲ್ಲಿ ಘಟಾನುಘಟಿ ರಾಜಕಾರಣಿಗಳಿದ್ದರೂ ಅಭಿವೃದ್ಧಿ ಮಾತ್ರ ಕಣ್ಣಿಗೆ ಗೋಚರಿಸುತ್ತಿಲ್ಲ. ಇಷ್ಟೆಲ್ಲಾ ಸಮಸ್ಯೆಗಳನ್ನೇ ಹೊದ್ದು ಮಲಗಿರುವ ಬಯಲು ಸೀಮೆ ಜಿಲ್ಲೆಯ ಜನರಲ್ಲಿ ವಿಶೇಷ ಸಂಪುಟ ಸಭೆ ಬೆಟ್ಟದಷ್ಟು ನಿರೀಕ್ಷೆಗಳನ್ನು ತುಂಬಿದೆ. ಸಂಪುಟ ಸಭೆಯಲ್ಲಿ ಈ ಜಿಲ್ಲೆಗಳಿಗೆ ಏನೆಲ್ಲಾ ಕಾರ್ಯಕ್ರಮ, ಯೋಜನೆ ಘೋಷಣೆಯಾಗಲಿವೆ ಎಂಬ ಕುತೂಹಲ ಜನರಲ್ಲಿತ್ತು.

ಬಯಲು ಸೀಮೆ ಜಿಲ್ಲೆಗಳ ಸಮಸ್ಯೆಗಳೇನು?

ಬಯಲು ಸೀಮೆ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗಿದ್ದು, ನೀರಾವರಿ ಕನಸು ಅನಿಶ್ಚಿತವಾಗಿದೆ. ಕೆ.ಸಿ.ವ್ಯಾಲಿ ಹಾಗೂ ಎಚ್‌.ಎನ್‌. ವ್ಯಾಲಿ ಯೋಜನೆ ಮೂಲಕ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು ಪೂರೈಸುತ್ತಿದ್ದರೂ ಮತ್ತಷ್ಟು ಸಮಸ್ಯೆ ತಂದೊಡ್ಡಿದೆ.

ಎರಡು ಹಂತದ ಶುದ್ದೀಕರಣವಾದರೂ ಕಲುಷಿತ ನೀರು ಕೆರೆಗಳಿಗೆ ಸೇರುತ್ತಿದ್ದು, ಅಂತರ್ಜಲವನ್ನು ಕಲುಷಿತಗೊಳಿಸುತ್ತಿದೆ. ಮೂರನೇ ಹಂತದ ಶುದ್ದೀಕರಣ ನಡೆಸುವಂತೆ ರೈತರು ಒತ್ತಾಯಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಈ ವಿಷಯ ಕುರಿತಂತೆಯೂ ಸಂಪುಟದಲ್ಲಿ ಚರ್ಚಿಸಬೇಕು ಎಂಬ ಆಗ್ರಹ ರೈತ ಸಮುದಾಯದಿಂದ ಕೇಳಿ ಬಂದಿತ್ತು. ಅಲ್ಲದೇ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಸಭೆ ರದ್ದುಗೊಳಿಸಲಾಗಿದೆ ಎನ್ನಲಾಗಿದೆ.

ಸಂಪುಟ ಸಭೆ ನಡೆಯುವ ದಿನ ರೈತರು ಹೋರಾಟಕ್ಕೆ ಸಜ್ಜಾಗಿದ್ದರು. ಅಲ್ಲದೇ ಸ್ಥಳೀಯ ಸಮಸ್ಯೆಗಳ ಚರ್ಚೆಗೆ ಮಾತ್ರ ಸಂಪುಟ ಸಭೆ ಮೀಸಲಿಡಬೇಕು ಎಂದು ಒತ್ತಾಯಿಸಿದ್ದರು. ಇಲ್ಲವಾದರೆ ಸಂಪುಟ ಸಭೆ ನಡೆಸುವುದೇ ಬೇಡ ಎಂದು ಹೇಳಿದ್ದರು.

Read More
Next Story