Cabinet Reshuffle: Karnataka MLAs Lobby in Delhi for Ministerial Berths
x

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ

ಸಂಪುಟ ಪುನಾರಚನೆ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಶಾಸಕರ ಲಾಬಿ

ಹಲವು ಹಿರಿಯ ಹಾಗೂ ಕಿರಿಯ ಶಾಸಕರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಅರ್ಹತೆ ಮತ್ತು ಪಕ್ಷಕ್ಕೆ ನೀಡಿರುವ ಕೊಡುಗೆಗಳನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸುತ್ತಿದ್ದಾರೆ.


Click the Play button to hear this message in audio format

ರಾಜ್ಯ ಸಚಿವ ಸಂಪುಟ ಪುನಾರಚನೆಯ ಸುದ್ದಿ ಕಾವು ಪಡೆದುಕೊಳ್ಳುತ್ತಿದ್ದಂತೆ, ಆಡಳಿತ ಪಕ್ಷದ ಹಲವು ಶಾಸಕರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ದೆಹಲಿಯತ್ತ ದೌಡಾಯಿಸಿದ್ದಾರೆ. ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಆಕಾಂಕ್ಷೆಯೊಂದಿಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಡ ಹೇರುವ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯ ಚರ್ಚೆಗಳು ಮುನ್ನೆಲೆಗೆ ಬರುತ್ತಿದ್ದಂತೆ, ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಹಲವು ಹಿರಿಯ ಹಾಗೂ ಕಿರಿಯ ಶಾಸಕರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಅರ್ಹತೆ ಮತ್ತು ಪಕ್ಷಕ್ಕೆ ನೀಡಿರುವ ಕೊಡುಗೆಗಳನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸುತ್ತಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಿಂದ ನೇರವಾಗಿ ಖಾಸಗಿ ಹೋಟೆಲ್‌ಗಳಿಗೆ ತೆರಳುತ್ತಿರುವ ಶಾಸಕರು, ಅಲ್ಲಿಂದಲೇ ತಮ್ಮ ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.

ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ರಾಜ್ಯ ಉಸ್ತುವಾರಿ ನಾಯಕರ ಭೇಟಿಗೆ ಶಾಸಕರು ಸಮಯ ಕೋರಿದ್ದಾರೆ. ತಮ್ಮದೇ ಆದ ಸಂಪರ್ಕ ಜಾಲವನ್ನು ಬಳಸಿಕೊಂಡು, ಪ್ರಭಾವಿ ವ್ಯಕ್ತಿಗಳ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ಕಸರತ್ತಿನಲ್ಲಿ ನಿರತರಾಗಿದ್ದಾರೆ. ಮುಂಬರುವ ಸಂಪುಟ ಪುನಾರಚನೆಯಲ್ಲಿ ತಮಗೆ ಅವಕಾಶ ನೀಡಬೇಕು, ಪ್ರಾದೇಶಿಕತೆ, ಹಿರಿತನ ಹಾಗೂ ಜಾತಿ ಸಮೀಕರಣವನ್ನು ಪರಿಗಣಿಸಬೇಕು ಎಂದು ಮನವಿ ಮಾಡುತ್ತಿದ್ದಾರೆ.

ಬೆಂಬಲಿಗರೊಂದಿಗೆ ದೆಹಲಿ ದೌಡು

ಕೆಲವು ಶಾಸಕರು ತಮ್ಮ ಬೆಂಬಲಿಗರೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಶಕ್ತಿ ಪ್ರದರ್ಶನದ ಮೂಲಕವಾದರೂ ಸಚಿವ ಸ್ಥಾನ ಪಡೆಯಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ಈ ಬೆಳವಣಿಗೆಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಹೈಕಮಾಂಡ್ ನಾಯಕರು ಯಾರಿಗೆ ಮಣೆ ಹಾಕಲಿದ್ದಾರೆ ಮತ್ತು ಯಾರನ್ನು ಕೈಬಿಡಲಿದ್ದಾರೆ ಎಂಬ ಚರ್ಚೆಗಳು ಜೋರಾಗಿವೆ.

Read More
Next Story