DKS v/s HDK | ಡಿ.ಕೆ. ಶಿವʼಕುಮಾರʼಸ್ವಾಮಿ ಕಲಹ: ರಾಮನಗರ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ನಕಾರ
x

DKS v/s HDK | ಡಿ.ಕೆ. ಶಿವʼಕುಮಾರʼಸ್ವಾಮಿ ಕಲಹ: ರಾಮನಗರ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ನಕಾರ

ರಾಮನಗರದ ಹೆಸರು ಬದಲಾವಣೆ ಮಾಡುವ ಕುರಿತು‌ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದು ಡಿ.ಕೆ. ಶಿವಕುಮಾರ್‌ ಅವರಿಗೆ ಹಿನ್ನಡೆ ತಂದಿದ್ದು, ಕುಮಾರಸ್ವಾಮಿ ವಿರುದ್ಧ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ನಾಂದಿ ಹಾಡಲಿದೆ.


ರಾಮನಗರ ಜಿಲ್ಲೆಯಲ್ಲಿ ರಾಜಕೀಯ ಬದ್ಧವೈರಿಗಳಾಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಇದೀಗ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಅಖಾಡ ಸಿದ್ಧವಾಗಿದೆ.

ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಕುರಿತ ರಾಜ್ಯ ಸರ್ಕಾರದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದರ ಹಿಂದೆ ಎಚ್‌.ಡಿ.ಕುಮಾರಸ್ವಾಮಿ ಅವರ ಕೈವಾಡವಿರುವ ಮಾತುಗಳು ಕೇಳಿಬರುತ್ತಿದ್ದು, ಡಿ.ಕೆ. ಶಿವಕುಮಾರ್‌ ಅವರಿಗೆ ಹಿನ್ನಡೆ ಉಂಟು ಮಾಡಿದೆ.

ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ ಜಿಲ್ಲೆ' ಎಂದು ಮರುನಾಮಕರಣ ಮಾಡುವುದಾಗಿ ಡಿ.ಕೆ. ಶಿವಕುಮಾರ್‌ ಘೋಷಿಸಿದ್ದರು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಕಳುಹಿಸಿತ್ತು. ಆದರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರ್ಧಾರವನ್ನು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಪ್ರಬಲವಾಗಿ ವಿರೋಧಿಸಿದ್ದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾಪ ಮಾಡಿದ್ದರು. ಈ ವಿಚಾರವು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.

'ಡಿ.ಕೆ. ಶಿವಕುಮಾರ್ ಅವರ ಪ್ರಸ್ತಾಪವು ತಮ್ಮ ಬೇನಾಮಿ ಆಸ್ತಿಯನ್ನು ಸಕ್ರಮ ಮಾಡಿಕೊಳ್ಳುವ ಯೋಜನೆಯಾಗಿದೆ. ಒಂದು ವೇಳೆ ರಾಮನಗರ ಹೆಸರು ಬದಲಾಯಿಸಿದರೂ ನಾನು ಅಧಿಕಾರಕ್ಕೆ ಬಂದಾಗ ಮತ್ತೆ ಹೆಸರು ಬದಲಾವಣೆ ಮಾಡುತ್ತೇನೆ,' ಎಂದು ಕುಮಾರಸ್ವಾಮಿ ಹೇಳಿದ್ದರು.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಕಾಂಗ್ರೆಸ್‌ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕೂಡ ವಿರೋಧ ವ್ಯಕ್ತಪಡಿಸಿದ್ದರು. ಹೆಸರು ಬದಲಾವಣೆ ಸಂಚಿನ ಹಿಂದೆ ́ರಾಮ ದ್ವೇಷʼ, ́ರಿಯಲ್ ಎಸ್ಟೇಟ್ ಲಾಲಸೆʼ ಅಡಗಿರುವುದು ಸುಸ್ಪಷ್ಟ ಎಂದು ಟೀಕಿಸಿದ್ದರು.

ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದ ಡಿ.ಕೆ. ಶಿವಕುಮಾರ್‌ ಅವರು, ಕುಮಾರಸ್ವಾಮಿ ಅವರಿಗೆ ಅಭಿವೃದ್ಧಿಗಿಂತ ದ್ವೇಷದ ರಾಜಕಾರಣವೇ ಮುಖ್ಯ. ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಸಹಿಸದ ಕುಮಾರಸ್ವಾಮಿ, ಕೇಂದ್ರ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸಿ, ತಕರಾರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.

ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

ಕನಕಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಜೇಬಿಗೆ ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನು ಹತ್ತು ಪಟ್ಟು ಹೆಚ್ಚಿಸುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿʼ ಎಂದು ಹೇಳಿದ್ದರು.

ರಿಯಲ್‌ ಎಸ್ಟೇಟ್‌ ಮೌಲ್ಯ

ರಾಮನಗರ ಹೆಸರು ಬದಲಾವಣೆಯಿಂದ ರಿಯಲ್‌ ಎಸ್ಟೇಟ್‌ ಮೌಲ್ಯ ಹೆಚ್ಚಾಗುತ್ತದೆ ಎಂಬುದು ಡಿ.ಕೆ. ಶಿವಕುಮಾರ್‌ ವಾದವಾಗಿತ್ತು. "ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡುವುದರಿಂದ ಮುಂದೆ ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ಮೈಸೂರುವರೆಗೂ ಅಭಿವೃದ್ಧಿ ಸಾಧಿಸಲು, ಕೈಗಾರಿಕೆಗಳ ಸ್ಥಾಪನೆಗೆ ಆಹ್ವಾನಿಸಲು, ಜತೆಗೆ ಆಸ್ತಿ ಮೌಲ್ಯ ಹೆಚ್ಚಳಕ್ಕೂ ನೆರವಾಗುತ್ತದೆ. ಬೆಂಗಳೂರಿನ ಒಂದು ದಿಕ್ಕಿನಲ್ಲಿ ಆಂಧ್ರ ಪ್ರದೇಶ, ಮತ್ತೊಂದು ದಿಕ್ಕಿನಲ್ಲಿ ತಮಿಳುನಾಡು ರಾಜ್ಯದ ಗಡಿ ಬರುತ್ತದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿ ವಿಸ್ತರಣೆಗೆ ನಮಗೆ ಉಳಿದಿರುವುದು ತುಮಕೂರು ಹಾಗೂ ಈ ಭಾಗ ಮಾತ್ರ," ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಮ್ಮ ನಿಲುವಿಗೆ ಸಮರ್ಥನೆ ನೀಡಿದ್ದರು.

ಬಿಜೆಪಿ ಮುಖಂಡ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಅವರು ರಿಯಲ್‌ ಎಸ್ಟೇಟ್‌ಗಾಗಿ ಹೆಸರು ಬದಲಿಸುವುದು ಸರಿಯಲ್ಲ. "ಯರಾದದರೂ ಮೌಲ್ಯ ಕಟ್ಟುತ್ತಾರೆಂದರೆ ಅಪ್ಪ-ಅಮ್ಮನ ಹೆಸರು ಬದಲಾಯಿಸಲು ಸಾಧ್ಯವೆ?" ಎಂದು ಖಾರವಾಗಿ ಪ್ರಶ್ನಿಸಿದ್ದರು.

ಆದರೆ, 2024 ಜುಲೈ ತಿಂಗಳಲ್ಲಿ ಹೆಸರು ಬದಲಾವಣೆ ಸಂಬಂಧ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಗೆ ಅಧಿಕೃತ ಚಾಲನೆ ದೊರೆತಿತ್ತು. ಸಂಪುಟ ಸಭೆಯಲ್ಲೂ ಹಸಿರು ನಿಶಾನೆ ದೊರಕಿತ್ತು.

"ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು. ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದು ಅಗತ್ಯ," ಎಂದು ಡಿ.ಕೆ. ಶಿವಕುಮಾರ್‌ ವಾದಿಸಿದ್ದರು.

ಎಚ್‌.ಡಿ. ಕುಮಾರಸ್ವಾಮಿ ಟಾರ್ಗೆಟ್‌?

ಡಿಕೆ ಶಿವಕುಮಾರ್‌ ಅವರ ಈ ಹೆಸರು ಬದಲಾವಣೆಯ ಹಿಂದಿನ ಟಾರ್ಗೆಟ್ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಮಾತು. ರಾಮನಗರ ಜಿಲ್ಲೆ ಈ ಹಿಂದೆ ಬೆಂಗಳೂರು ಗ್ರಾಮಾಂತರಕ್ಕೆ ಸೇರಿತ್ತು. ಆದರೆ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ 2007 ರಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಇದ್ದ ರಾಮನಗರವನ್ನು ಪ್ರತ್ಯೇಕ ಜಿಲ್ಲೆಯಾಗಿ ರಚನೆ ಮಾಡಿದ್ದರು.

ರಾಮನಗರ ಜಿಲ್ಲೆ ಘೋಷಣೆಗೂ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ. ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು.

1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು. ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.

ಹೊಸ ಜಿಲ್ಲೆಯ ರಚನೆಯಾದಾಗ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ತಾಲ್ಲೂಕುಗಳಿದ್ದವು. ಇದೀಗ ಹಾರೋಹಳ್ಳಿ ತಾಲ್ಲೂಕು ರಚನೆಯಾಗಿದೆ. ಆದರೆ ಇದೀಗ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡುವ ಮೂಲಕ ಹೊಸತೊಂದು ರಾಜಕೀಯ ದಾಳವನ್ನು ಡಿಕೆ ಶಿವಕುಮಾರ್ ಉರುಳಿಸಿದ್ದರು.

ಆದರೆ, ಈಗ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ನಿರ್ಧಾರವನ್ನು ಬದಿಗೆ ತಳ್ಳಿದೆ. ಇದರ ಹಿಂದೆ ಮಾಜಿ ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್‌ ಅವರ ಬದ್ಧ ರಾಜಕೀಯ ವೈರಿ ಎಚ್‌.ಡಿ. ಕುಮಾರಸ್ವಾಮಿ ಅವರಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಸರು ಬದಲಾವಣೆಗೆ ಕಾನೂನು ಹೇಳುವುದೇನು?

ರಾಜ್ಯಗಳು ಹಾಗೂ ನಗರಗಳ ಹೆಸರು ಬದಲಾವಣೆ ಮಾಡಬೇಕಾದರೆ ಕೇಂದ್ರ ಸರ್ಕಾರದ ಅನುಮೋದನೆ ಅಗತ್ಯ. ರಾಜ್ಯಗಳು ತಮ್ಮಲ್ಲಿರುವ ನಗರ ಅಥವಾ ಸ್ಥಳಗಳ ಹೆಸರು ಬದಲಾಯಿಸಲು ನಿರ್ಧರಿಸಿದರೆ ಮೊದಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳುಹಿಸಿಕೊಡಬೇಕು. ಇದಕ್ಕೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಬೇಕಿದೆ.

ಕೇಂದ್ರದ ಅನುಮೋದನೆ ಬಳಿಕ ಇಂಗ್ಲಿಷ್ ಹಾಗೂ ಸ್ಥಳೀಯ ಭಾಷೆಗಳಲ್ಲಿ ಹೊಸ ಹೆಸರಿನ ಕುರಿತು ಅಧಿಸೂಚನೆ ಹೊರಡಿಸಲಾಗುವುದು. ಬಳಿಕ ಸರ್ಕಾರಿ ದಾಖಲೆಗಳು, ಕಡತಗಳಲ್ಲಿ ಹೊಸ ಹೆಸರು ಸೇರಿಸಲಾಗುತ್ತದೆ.

ಈಗಾಗಲೇ ಕೇಂದ್ರ ಸರ್ಕಾರದ ಮುಂದೆ ಕೇರಳದ ಹೆಸರನ್ನು ಕೇರಳಂ ಎಂದು ಬದಲಿಸುವ ಪ್ರಸ್ತಾವವೂ ಇದೆ. ಅದೇ ರೀತಿ ಗಾಜಿಯಾಬಾದ್ಈ, ಅಕ್ಟರ್‌ಪುರ್‌(ಅಕರ್‌ಪುರ), ಬಾಗೇಪಲ್ಲಿ(ಭಾಗ್ಯನಗರ), ರಾಮನಗರ(ಬೆಂಗಳೂರು ದಕ್ಷಿಣ ಜಿಲ್ಲೆ), ಮುಂಬಯಿ ಸೆಂಟ್ರಲ್ ಸ್ಟೇಷನ್(ನಾನಾ ಜಗನ್ನಾಥ ಶಂಕರ್ ಸೇರ್), ಮರೀನ್ ಲೈನ್(ಮುಂಬಾದೇವಿ), ಟ್ರ್ಯಾಗನ್ ಪುಟ್( ಕಮಲಾಂ), ಕರೀಮ್‌ನಗರ(ಯೆಲಗಂಡುಲಾ) ಹೆಸರು ಬದಲಾಯಿಸುವ ಪ್ರಸ್ತಾವಗಳು ಕೇಂದ್ರ ಸರ್ಕಾರದ ಮುಂದಿವೆ.

Read More
Next Story