
Bangalore Stampede: ದಯಾನಂದ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರ ಒಪ್ಪಿಗೆ
ಕರ್ತವ್ಯ ನಿರ್ಲಕ್ಷ್ಯತನ ಆರೋಪದ ಮೇರೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ವರದಿಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಕೇಂದ್ರವು ರಾಜ್ಯ ಸರ್ಕಾರದ ಕ್ರಮವನ್ನು ಅನುಮೋದಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ ರಾಜ್ಯ ಸರ್ಕಾರದ ಕ್ರಮಕ್ಕೆ ಕೇಂದ್ರ ಸರ್ಕಾರವು ಅಧಿಕೃತ ಮುದ್ರೆ ಹಾಕಿದೆ.
ದಯಾನಂದ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ವಿಕಾಸ ಕುಮಾರ್ ವಿಕಾಸ್ ಮತ್ತು ಶೇಖರ್ ಅವರ ಅಮಾನತಿಗೆ ಅನುಮೋದನೆ ನೀಡಿದೆ. ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟರು. ಕರ್ತವ್ಯ ನಿರ್ಲಕ್ಷ್ಯತದ ಆರೋಪದ ಮೇರೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ವರದಿಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಕೇಂದ್ರವು ರಾಜ್ಯ ಸರ್ಕಾರದ ಕ್ರಮವನ್ನು ಅನುಮೋದಿಸಿದೆ.
ಇದೇ ವೇಳೆ ಶಿಸ್ತು ಪ್ರಕ್ರಿಯೆಯನ್ನು ಮುಂದುವರಿಸುವ ಮೂಲಕ ಅಧಿಕಾರಿಗಳ ವಿರುದ್ಧ 30 ದಿನಗಳಲ್ಲಿ ಚಾರ್ಜ್ಶೀಟ್ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ. ಆರೋಪಪಟ್ಟಿ ಸಲ್ಲಿಕೆಯ ನಂತರ ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಕೇಂದ್ರ ತಿಳಿಸಿದೆ. ಇದು ಆಡಳಿತಾತಕ ಕ್ರಮಗಳಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಐಪಿಎಸ್ ಅಧಿಕಾರಿಗಳ ಶಿಸ್ತು ಕ್ರಮಗಳ ಕೈಗೊಂಡಿರುವುದು ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಕ್ರಮವಾಗಿದೆ.
ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಅಮಾನತು ಬಗ್ಗೆ ನಿಯಮಾನುಸಾರ ಕೇಂದ್ರ ಸರ್ಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಬೇಕು. ಅಧಿಕಾರಿಗಳ ಕೇಡರ್ ಹಾಗೂ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರ ಅಧಿಕಾರ ಹೊಂದಿದೆ. ಆದರೆ, ಅಮಾನತು ವಿಚಾರದಲ್ಲಿ ಕೇಂದ್ರ ಸರ್ಕಾರದೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ನಿಯಮವಿದೆ. ಐಪಿಎಸ್ ಅಥವಾ ಐಎಎಸ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದರ ಬಗ್ಗೆ ಒಂದು ದಿನದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮಾಹಿತಿ ನೀಡಬೇಕು. ನಂತರ 15 ದಿನಗಳಲ್ಲಿ ಆ ಅಧಿಕಾರಿಗಳ ಅಮಾನತಿಗೆ ಕಾರಣಗಳ ಕುರಿತು ಸಮಗ್ರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿ ರಾಜ್ಯ ಸರ್ಕಾರ ಮನವರಿಕೆ ಮಾಡಿಕೊಡಬೇಕು. ಈ ವರದಿ ಆಧರಿಸಿ 1 ತಿಂಗಳಲ್ಲಿ ಅಮಾನತು ಆದೇಶವನ್ನು ಒಪ್ಪಿಗೆ ಅಥವಾ ತಿರಸ್ಕಾರದ ಬಗ್ಗೆ ಕೇಂದ್ರ ನಿರ್ಣಯ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಕೇಂದ್ರ ಸರ್ಕಾರವು ಸಹ ಉತ್ತರ ನೀಡಿದೆ.
ಪ್ರಕರಣದ ಹಿನ್ನೆಲೆ
ಕಳೆದ ಜೂನ್ 4 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ 2025 ರ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಮೃತಪಟ್ಟು, 56 ಜನರು ಗಾಯಗೊಂಡಿದ್ದರು. ಇದರಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿತ್ತು.
ಚಿನ್ನಸ್ವಾಮಿ ಸ್ಟೇಡಿಯಂನ ಹೊರಗೆ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆಗೆ ಲಕ್ಷಾಂತರ ಜನರು ಜಮಾಯಿಸಿದ್ದರು. ಆದರೆ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಸಮಯದ ಸಿದ್ಧತೆ ಇಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿತ್ತು. ಅದಾಗ್ಯೂ, ಆರ್ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಮತ್ತು ಡಿಎನ್ಎ ಎಂಟರ್ಟೈನೆಂಟ್ ಸಂಸ್ಥೆಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜನಸಂದಣಿ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡದಿರುವುದು ಮತ್ತು ಸಾರ್ವಜನಿಕರಿಗೆ ಸುರಕ್ಷತಾ ಮಾಹಿತಿಯನ್ನು ಒದಗಿಸದಿರುವುದು ಈ ದುರಂತಕ್ಕೆ ಕಾರಣವಾಯಿತು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ತಿಳಿಸಿತ್ತು. ಈ ಕಾರಣಕ್ಕಾಗಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಎಚ್. ಟೆಕ್ಕನವರ್, ಕಬ್ಬನ್ ಪಾರ್ಕ್ನ ಎಸಿಪಿ ಸಿ. ಬಾಲಕೃಷ್ಣ ಮತ್ತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎ.ಕೆ. ಗಿರೀಶ್ ಅವರನ್ನು ಅಮಾನತುಗೊಳಿಸಿದೆ.