ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹ
x

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ: ತುರ್ತು ಅಧಿವೇಶನ ಕರೆಯಲು ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹ

ಆರ್. ಅಶೋಕ ಅವರು ತಮ್ಮ ಪತ್ರದಲ್ಲಿ, ಈ ದುರಂತವು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ ಮತ್ತು ಕ್ರೀಡಾ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳನ್ನು ಎತ್ತಲಾಗಿದೆ.


ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, 75 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆಯ ಬಗ್ಗೆ ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ, ಈ ದುರಂತದ ಸಂಪೂರ್ಣ ತನಿಖೆ, ಗುಂಪು ನಿಯಂತ್ರಣ, ಸುರಕ್ಷತಾ ಕ್ರಮಗಳ ಬಲವರ್ಧನೆ, ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಕುರಿತು ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಚರ್ಚಿಸುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಅಶೋಕ ಅವರ ಪತ್ರದಲ್ಲಿ ಏನಿದೆ?

ಆರ್. ಅಶೋಕ ಅವರು ತಮ್ಮ ಪತ್ರದಲ್ಲಿ, ಈ ದುರಂತವು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ ಮತ್ತು ಕ್ರೀಡಾ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದ ಗಂಭೀರ ಪ್ರಶ್ನೆಗಳನ್ನು ಎತ್ತಲಾಗಿದೆ. ಆಡಳಿತದ ಲೋಪಗಳು, ಸರ್ಕಾರದ ನಂತರದ ಕ್ರಮಗಳು ಮತ್ತು ತಪ್ಪಿತಸ್ಥರನ್ನು ರಕ್ಷಿಸುವ ಪ್ರಯತ್ನಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಸತ್ಯವನ್ನು ಮರೆಮಾಚಲು ಮೂರು ರೀತಿಯ ತನಿಖೆಗಳನ್ನು ಘೋಷಿಸಲಾಗಿದೆ, ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಆರೋಪಗಳಿವೆ" ಎಂದು ದೂರಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ 2025 ರ ಗೆಲುವಿನ ಸಂಭ್ರಮಾಚರಣೆಗಾಗಿ ವಿಧಾನಸೌಧದಲ್ಲಿ ವಿಐಪಿಗಳಿಗೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನಸಾಮಾನ್ಯರಿಗೆ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕ್ರೀಡಾಂಗಣದ ಸಾಮರ್ಥ್ಯ 35,000 ಆಗಿದ್ದರೂ, 2-3 ಲಕ್ಷ ಜನರು ಜಮಾಯಿಸಿದ್ದರಿಂದ ಗುಂಪು ನಿಯಂತ್ರಣ ವಿಫಲವಾಗಿ ದುರಂತ ಸಂಭವಿಸಿತು. ಈ ಘಟನೆಯಲ್ಲಿ ಗುಂಪು ನಿಯಂತ್ರಣದಲ್ಲಿ ಗಂಭೀರ ಲೋಪಗಳು, ತುರ್ತು ವೈದ್ಯಕೀಯ ಸೌಲಭ್ಯಗಳ ಕೊರತೆ ಮತ್ತು ಉಚಿತ ಪಾಸ್‌ಗಳ ಘೋಷಣೆಯಿಂದ ಉಂಟಾದ ಗೊಂದಲವನ್ನು ಆರ್. ಅಶೋಕ ಎತ್ತಿ ತೋರಿಸಿದ್ದಾರೆ.

ಭವಿಷ್ಯದ ಕ್ರಮಗಳು ಮತ್ತು ಸರ್ಕಾರದ ಬದ್ಧತೆ

"ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ, ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ಪರಿಹಾರ ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಚರ್ಚಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಜನತೆಗೆ ಸತ್ಯವನ್ನು ತಿಳಿಸಬೇಕು" ಎಂದು ಅಶೋಕ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಈ ಅಧಿವೇಶನವು ಸರ್ಕಾರದ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಸುರಕ್ಷತಾ ಕ್ರಮಗಳನ್ನು ಬಲಪಡಿಸಲು ಸಹಾಯಕವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಪ್ರಸ್ತುತ ಕ್ರಮಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, 5 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಆರ್‌ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಮತ್ತು ಈವೆಂಟ್ ಆಯೋಜಕ ಡಿಎನ್‌ಎ ಎಂಟರ್‌ಟೈನ್ಮೆಂಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ರೂ. 25 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ.

ಎನ್‌ಎಚ್‌ಆರ್‌ಸಿಗೂ ಪತ್ರ

ಆರ್. ಅಶೋಕ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೂ (ಎನ್‌ಎಚ್‌ಆರ್‌ಸಿ) ಪತ್ರ ಬರೆದಿದ್ದು, ಈ ಘಟನೆಯನ್ನು "ಮಾನವ ಹಕ್ಕುಗಳ ಉಲ್ಲಂಘನೆ" ಎಂದು ಕರೆದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

Read More
Next Story