ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೊಟ್ಟೆ ವಿತರಣೆಗೆ ಚಿಂತನೆ: ಪೌರಾಡಳಿತ ಸಚಿವ ರಹೀಂ ಖಾನ್‌
x

ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೊಟ್ಟೆ ವಿತರಣೆಗೆ ಚಿಂತನೆ: ಪೌರಾಡಳಿತ ಸಚಿವ ರಹೀಂ ಖಾನ್‌

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಳೆದ ಎರಡು ವರ್ಷಗಳಲ್ಲಿ 186 ಹೊಸ ಇಂದಿರಾ ಕ್ಯಾಂಟೀನ್‌ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.


ರಾಜ್ಯದ ಜನರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶ ಹೊಂದಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೊಟ್ಟೆ ವಿತರಣೆಗೆ ಸಂಬಂಧಿಸಿದ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್‌ ಅವರು ತಿಳಿಸಿದ್ದಾರೆ. ಬುಧವಾರ (ಜೂನ್ 4, 2025) ದಾವಣಗೆರೆಯಲ್ಲಿ ಇಂದಿರಾ ಕ್ಯಾಂಟೀನ್‌ಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಮಹತ್ವದ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

"ಬಡವರಿಗೆ ಪೋಷಕಾಂಶಯುಕ್ತ ಮಾಂಸಾಹಾರ ಹಾಗೂ ಮೊಟ್ಟೆ ನೀಡಬೇಕು ಎಂದು ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಮೊಟ್ಟೆ ಪೂರೈಕೆ ಪ್ರಸ್ತಾವ ಸರ್ಕಾರದ ಮುಂದೆ ಇದೆ. ಇದನ್ನು ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಲು ಚಿಂತನೆ ನಡೆಯುತ್ತಿದೆ," ಎಂದು ಸಚಿವ ರಹೀಂ ಖಾನ್‌ ಹೇಳಿದ್ದಾರೆ. ಈ ಕ್ರಮದಿಂದ ರಾಜ್ಯದ ಲಕ್ಷಾಂತರ ಬಡಜನತೆ ಹೆಚ್ಚು ಪೋಷಕಾಂಶಯುಕ್ತ ಆಹಾರವನ್ನು ಕಡಿಮೆ ಬೆಲೆಯಲ್ಲಿ ಪಡೆಯುವ ಅವಕಾಶ ಇದೆ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದು ಸಚಿವ ಖಾನ್ ಬಣ್ಣಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಳೆದ ಎರಡು ವರ್ಷಗಳಲ್ಲಿ 186 ಹೊಸ ಇಂದಿರಾ ಕ್ಯಾಂಟೀನ್‌ಗಳಿಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ 100ಕ್ಕೂ ಹೆಚ್ಚು ಕ್ಯಾಂಟೀನ್‌ಗಳು ಕಾರ್ಯಾರಂಭ ಮಾಡಿವೆ ಮತ್ತು ಉಳಿದವುಗಳು ಶೀಘ್ರದಲ್ಲೇ ಆರಂಭವಾಗಲಿವೆ. ಇದರಿಂದ ರಾಜ್ಯದ ಬಡವರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ನಗರ ಅಶಕಸ್ತರಿಗೆ ಕಡಿಮೆ ಬೆಲೆಯಲ್ಲಿ ಪೋಷಕಾಂಶಯುಕ್ತ ಆಹಾರ ಸಿಗಲಿದೆ ಎಂದು ಸಚಿವರು ವಿವರಿಸಿದರು.

ಇತ್ತೀಚೆಗೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳ ಜಾಲವನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಹೊಸ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುತ್ತಿದೆ. ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳು ಜಂಟಿಯಾಗಿ ಹಣಕಾಸು ಹೊಣೆ ಹೊತ್ತಿವೆ. ಹೊಸ ಮೆನು, ಗುಣಮಟ್ಟ, ಸ್ವಚ್ಛತೆ ಮತ್ತು ಪೌಷ್ಟಿಕತೆಯತ್ತ ಹೆಚ್ಚಿನ ಗಮನ ನೀಡಲಾಗುತ್ತಿದೆ. ಮೊಟ್ಟೆ ವಿತರಣೆ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ ಒತ್ತಡವನ್ನು ಗಮನದಲ್ಲಿಟ್ಟುಕೊಂಡು, ಈ ಸೇವೆಯನ್ನು ಪ್ರಾರಂಭಿಸುವ ಬಗ್ಗೆ ಸಕ್ರಿಯವಾಗಿ ಚರ್ಚೆ ನಡೆಯುತ್ತಿದೆ.

Read More
Next Story