ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಸರ್ಕಾರಕ್ಕೆ ಕೋರ್ಟ್‌ ಛೀಮಾರಿ; ಬಸವರಾಜ್ ಬೊಮ್ಮಾಯಿ
x

ಬಸವರಾಜ್‌ ಬೊಮ್ಮಾಯಿ 

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ಸರ್ಕಾರಕ್ಕೆ ಕೋರ್ಟ್‌ ಛೀಮಾರಿ; ಬಸವರಾಜ್ ಬೊಮ್ಮಾಯಿ

ರಾಜ್ಯದ ಸಚಿವ ಸಂಪುಟವು ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೇ ಹೊರತು ಓಲೈಕೆ ರಾಜಕಾರಣ ಮಾಡಬಾರದು. ಇನ್ನಾದರೂ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.


ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣ ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿರುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ಗುರುವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕೋರ್ಟ್ ನ್ಯಾಯಪೀಠವು ಹುಬ್ಬಳ್ಳಿ ಗಲಭೆ ಪ್ರಕರಣದ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಕ್ರಿಮಿನಲ್ ಕೇಸ್ ಹಿಂಪಡೆದ ಕ್ರಮ ಸರಿಯಲ್ಲ ಎಂದು ಆದೇಶಿಸಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವುದು ಬೇಡ ಎಂದು ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೆವು. ಆದರೂ ರಾಜಕೀಯ ಒತ್ತಡ ಹಾಗೂ ಓಲೈಕೆ ರಾಜಕಾರಣಕ್ಕಾಗಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಪ್ರಕರಣ ವಾಪಸ್ ಪಡೆದಿತ್ತು. ಈಗ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ ಎಂದು ಹೇಳಿದ್ದಾರೆ.

ರಾಜ್ಯದ ಸಚಿವ ಸಂಪುಟವು ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೇ ಹೊರತು ಓಲೈಕೆ ರಾಜಕಾರಣ ಮಾಡಬಾರದು. ಇನ್ನಾದರೂ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಕೋರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಮಲ್ ಹಾಸನ್ ಕ್ಷಮೆ ಕೇಳಲಿ

ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆಗೆ ಅಪಮಾನ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕನ್ನಡ ಬಹಳ ಹಳೆಯ ಪ್ರಾಚೀನ ಭಾಷೆ. ಭಾಷೆಯ ಪ್ರಾಚೀನತೆ ಹಲವಾರು ವಿಧಾನದಲ್ಲಿ ಇರಲಿದೆ. ಕಮಲ್ ಹಾಸನ್ ದೊಡ್ಡ ಪರಿಣಿತ ಅಲ್ಲ. ಭಾಷೆಯ ಮೇಲೆ ಮಾತನಾಡುವಾಗ ಹಿಡಿತ ಇರಬೇಕು. ಅವರು ತಮ್ಮ ವ್ಯಕ್ತಿತ್ವ ಉಳಿಸಿಕೊಳ್ಳಬೇಕಾದರೆ ಕ್ಷಮಾಪಣೆ ಕೇಳಬೇಕು ಎಂದು ಹೇಳಿದ್ದಾರೆ.

Read More
Next Story