Democracy Day celebrated across the state on September 15 with the slogan My vote is my right
x

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ. ಮಹದೇವಪ್ಪ

ʼನನ್ನ ಮತ ನನ್ನ ಹಕ್ಕುʼ : ಸೆ.15ಕ್ಕೆ ರಾಜ್ಯಾದ್ಯಂತ ಪ್ರಜಾಪ್ರಭುತ್ವ ದಿನ ಆಚರಣೆ

ಕರ್ನಾಟಕವು ಸೃಜನಶೀಲ, ಪ್ರಶಂಸನೀಯ ಕ್ರಮಗಳ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿಯ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವ ಹೆಚ್‌.ಸಿ. ಮಹದೇವಪ್ಪ ತಿಳಿಸಿದರು.


Click the Play button to hear this message in audio format

"ನನ್ನ ಮತ, ನನ್ನ ಹಕ್ಕು" ಎಂಬ ಘೋಷವಾಕ್ಯದೊಂದಿಗೆ, ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರವು ಸಜ್ಜಾಗಿದೆ. ಈ ದಿನಾಚರಣೆಯು ಸಂವಿಧಾನ, ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವ ಗುರಿಯನ್ನು ಹೊಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ ಶ್ರೀಸಾಮಾನ್ಯನ ಧ್ವನಿಯು ಎಷ್ಟು ಮುಖ್ಯ ಎಂಬುದನ್ನು ಈ ಕಾರ್ಯಕ್ರಮವು ಪ್ರತಿಬಿಂಬಿಸಲಿದೆ. ಎಲ್ಲರನ್ನೂ ಒಳಗೊಳ್ಳುವ, ಹೊಣೆಗಾರಿಕೆಯುತ ಹಾಗೂ ಪಾರದರ್ಶಕ ಆಡಳಿತವನ್ನು ಉತ್ತೇಜಿಸುವುದು ಈ ವಿಶೇಷ ದಿನದ ಉದ್ದೇಶವಾಗಿದೆ. 2007ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಘೋಷಿಸಿದ ಈ ದಿನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ನೀಡಿದ ಜಾಗತಿಕ ಕರೆಯಾಗಿದೆ," ಎಂದರು.

ಸಾರ್ವಜನಿಕರ ಪಾಲ್ಗೊಳ್ಳುವಿಕೆ, ಮಾನವ ಹಕ್ಕುಗಳಿಗೆ ಗೌರವ ಮತ್ತು ಆಡಳಿತವನ್ನು ಬಲಪಡಿಸುವ ಗುರಿಯನ್ನು ಈ ಆಚರಣೆ ಹೊಂದಿದೆ. ಕರ್ನಾಟಕವು ತನ್ನ ಸೃಜನಶೀಲ ಮತ್ತು ಪ್ರಶಂಸನೀಯ ಕ್ರಮಗಳ ಮೂಲಕ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಮುಂಚೂಣಿಯಲ್ಲಿದೆ ಎಂದು ಸಚಿವರು ಹೆಮ್ಮೆ ವ್ಯಕ್ತಪಡಿಸಿದರು.

ವಿಶೇಷ ಸಾಧನೆ

2023ರಲ್ಲಿ ರಾಜ್ಯ ಸರ್ಕಾರವು ಆಯೋಜಿಸಿದ್ದ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ, ಭಾರತದ 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 84 ದೇಶಗಳ 507 ಜಿಲ್ಲೆಗಳಿಂದ 2.31 ಕೋಟಿ ಜನರು ಭಾಗವಹಿಸಿದ್ದರು. ಈ ವಿಶಿಷ್ಟ ಆಚರಣೆಯು ಲಂಡನ್‌ನ 'ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್'ನಲ್ಲಿ ಮಾನ್ಯತೆ ಪಡೆದಿತ್ತು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ, ದೇಶವ್ಯಾಪಿಯಾಗಿ ಸಾವಿರಾರು ಮಕ್ಕಳು ಮತ್ತು ನಾಗರಿಕರು ಪಾಲ್ಗೊಂಡಿದ್ದರು ಎಂದು ಅವರು ಮಾಹಿತಿ ನೀಡಿದರು.

2,500 ಕಿ.ಮೀ. ಮಾನವ ಸರಪಳಿ ರಚನೆ

2024ರ ಸೆಪ್ಟೆಂಬರ್ 15 ರಂದು, ಬೀದರ್‌ನಿಂದ ಚಾಮರಾಜನಗರದವರೆಗೆ 2,500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಚಿಸುವ ಮೂಲಕ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ಇದು ಸ್ವಾತಂತ್ರ್ಯ, ಸಮಾನತೆ ಮತ್ತು ಬಾಂಧವ್ಯವನ್ನು ಪ್ರತಿಬಿಂಬಿಸಿತು. ಇದೇ ಸಂದರ್ಭದಲ್ಲಿ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ 10 ಲಕ್ಷ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಗೂ ನಾಗರಿಕರು ಸಕ್ರಿಯವಾಗಿ ಮತ್ತು ಸ್ವಯಂಪ್ರೇರಿತರಾಗಿ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮತದಾನದ ಬಗ್ಗೆ ಜಾಗೃತಿ

2025ರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ರಾಜ್ಯ ಸರ್ಕಾರವು “ನನ್ನ ಮತ, ನನ್ನ ಹಕ್ಕು” ಎಂಬ ವಿಷಯದೊಂದಿಗೆ ಆಚರಿಸುತ್ತಿದೆ. ಈ ವಿಷಯವು ಪ್ರತಿಯೊಬ್ಬ ಮತದಾರನ ಪಾತ್ರವನ್ನು ಒತ್ತಿ ಹೇಳುತ್ತದೆ. "ಮತದಾನವು ಕೇವಲ ಹಕ್ಕಲ್ಲ, ಅದೊಂದು ಹೊಣೆಗಾರಿಕೆಯೂ ಆಗಿದೆ" ಎಂಬ ಸಂದೇಶವನ್ನು ಈ ಮೂಲಕ ಪಸರಿಸಲಾಗುತ್ತಿದೆ. ಅಲ್ಲದೆ, ಯುವಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು, ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದು ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಚಿವರು ವಿವರಿಸಿದರು.

ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿಗೆ ಬೈಕ್ ಜಾಥಾ

ನಾಗರಿಕರ ಜವಾಬ್ದಾರಿ ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಜಿಲ್ಲಾಡಳಿತಗಳ ನೇತೃತ್ವದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸೈಕಲ್ ಜಾಥಾವನ್ನು ಆಯೋಜಿಸಲಾಗಿದೆ. ಇದರ ಜೊತೆಗೆ, ಪ್ರಜಾಪ್ರಭುತ್ವ ಮತ್ತು ಏಕತೆಯ ಸಂದೇಶಗಳನ್ನು ಹೊತ್ತ ಬೈಕ್ ಸವಾರರು, ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿನವರೆಗೆ ಬೈಕ್ ಜಾಥಾ ನಡೆಸಲಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಈ ಜಾಥಾ ನಡೆಯಲಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿ ಜಾಥಾಗೆ ಸಂಬಂಧಿಸಿದಂತೆ ಸಮನ್ವಯ ಸಾಧಿಸಲಿದೆ.

ಹಲವು ಸ್ಪರ್ಧೆಗಳು, ಲಕ್ಷಾಂತರ ರೂಪಾಯಿ ಬಹುಮಾನ

ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಸೃಜನಶೀಲ ಅಭಿವ್ಯಕ್ತಿಯನ್ನು ಉತ್ತೇಜಿಸುವ ಸಲುವಾಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನೇತೃತ್ವದಲ್ಲಿ ಹಾಗೂ ಲಿಡ್ಕರ್ ಪ್ರಾಯೋಜಕತ್ವದಲ್ಲಿ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ದೈನಂದಿನ ಜೀವನದಲ್ಲಿ ಪ್ರಜಾಪ್ರಭುತ್ವದ ಪಾತ್ರವನ್ನು ಚಿತ್ರಗಳ ಮೂಲಕ ಪ್ರದರ್ಶಿಸಲು, ಉನ್ನತ ಶಿಕ್ಷಣ ಇಲಾಖೆಯು ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿದೆ. ಕರ್ನಾಟಕ ವಸತಿ ಶಿಕ್ಷಣ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, "ನನ್ನ ಮತ ನನ್ನ ಹಕ್ಕು," "ಸಂವಿಧಾನದ ಪೀಠಿಕೆ," ಮತ್ತು "ಮಹಾತ್ಮ ಗಾಂಧೀಜಿಯವರ ದೃಷ್ಟಿಯಲ್ಲಿ ಗಾಂಧಿ ಭಾರತ" ಎಂಬ ವಿಷಯಗಳ ಮೇಲೆ ಸ್ಪರ್ಧೆ ನಡೆಯಲಿದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ 1 ಲಕ್ಷ ರೂ., ದ್ವಿತೀಯ ಬಹುಮಾನವಾಗಿ 50 ಸಾವಿರ ರೂ., ಮತ್ತು ತೃತೀಯ ಬಹುಮಾನವಾಗಿ 25 ಸಾವಿರ ರೂ. ಗಳನ್ನು ಘೋಷಿಸಲಾಗಿದೆ.

ದೈನಂದಿನ ಜೀವನದಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ಶಾಲೆಗಳು, ಕಾಲೇಜುಗಳು, ಸರ್ಕಾರಿ ಕಚೇರಿಗಳು ಮತ್ತು ಸಮುದಾಯ ಕೇಂದ್ರಗಳಲ್ಲಿ ಸಾರ್ವಜನಿಕವಾಗಿ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರಾಜ್ಯಾದ್ಯಂತ ಈ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮಾಜ ಕಲ್ಯಾಣ ಇಲಾಖೆಯು ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲಿದೆ ಎಂದು ಸಚಿವರು ತಿಳಿಸಿದರು.

Read More
Next Story