ದೇವೇಗೌಡರೇ ಇಳಿವಯಸ್ಸಿನಲ್ಲಿ ಶರಣಾಗತಿಯ ಸ್ಥಿತಿ ಏಕೆ?: ಸಿದ್ದರಾಮಯ್ಯ
x
ಸಿ.ಎಂ ಸಿದ್ದರಾಮಯ್ಯ - ಎಚ್‌.ಡಿ ದೇವೇಗೌಡ

ದೇವೇಗೌಡರೇ ಇಳಿವಯಸ್ಸಿನಲ್ಲಿ ಶರಣಾಗತಿಯ ಸ್ಥಿತಿ ಏಕೆ?: ಸಿದ್ದರಾಮಯ್ಯ

ದೇವೇಗೌಡ ಅವರ ʻರಾಜಕೀಯ ಸಂಧಾನʼದ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ನ ಮೂಲಕ ಪ್ರಶ್ನಿಸಿದ್ದು, ಈ ವಯಸ್ಸಿನಲ್ಲಿ ಶರಣಾಗತಿ ಸ್ಥಿತಿ ಏಕೆ ಬಂತು ಎಂದು ಪ್ರಶ್ನೆ ಮಾಡಿದ್ದಾರೆ.


ಮಾಜಿ ಪ್ರಧಾನಿ ದೇವೇಗೌಡ ಅವರ ʻರಾಜಕೀಯ ಸಂಧಾನʼದ ಬಗ್ಗೆ ಪ್ರಶ್ನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ʻದೇವೇಗೌಡ ಅವರೇ ಈ ಇಳಿವಯಸ್ಸಿನಲ್ಲಿ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು?ʼ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿ.ಎಂ ಸಿದ್ದರಾಮಯ್ಯ ಅವರು, ʻಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ ಈ ಇಳಿವಯಸ್ಸಿನಲ್ಲಿ ನಿಮಗೆ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು?ʼ ಎಂದು ಪ್ರಶ್ನಿಸಿದ್ದಾರೆ.

ʻನೀವು ದೇಶದ ಪ್ರಧಾನಿಯಾಗಿದ್ದಾಗ ಕನ್ನಡಿಗರು ಎದೆಯುಬ್ಬಿಸಿ ಖುಷಿಪಟ್ಟರು. ನೀವು ರಾಜ್ಯದ ನೆಲ-ಜಲ-ಭಾಷೆಯ ರಕ್ಷಣೆಗಾಗಿ ಕೇಂದ್ರ ಸರ್ಕಾರದ ವಿರುದ್ಧ ಆಯಾ ಕಾಲಗಳ ಪ್ರಧಾನಿಗಳ ವಿರುದ್ಧ ಹೋರಾಟಕ್ಕಿಳಿದಾಗಲೂ ಕನ್ನಡಿಗರು ನಿಮ್ಮನ್ನು ತಲೆಮೇಲೆ ಕೂರಿಸಿ ಕೊಂಡಾಡಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳು ತಮ್ಮ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎನ್ನುವ ಏಕೈಕ ಕಾರಣಕ್ಕಾಗಿ ಪ್ರಧಾನ ಮಂತ್ರಿ, ಈ ರಾಜ್ಯಗಳ ವಿರುದ್ಧ ಸೇಡು ತೀರಿಸಿಕೊಳ್ಳುವವರ ರೀತಿ ನಡೆದುಕೊಳ್ಳುತ್ತಿರುವಾಗ ನೀವು ಕೇಂದ್ರದ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರಬೇಕಿತ್ತು. ದುರ್ದೈವದ ಸಂಗತಿ ಎಂದರೆ, ಈಗ ನೀವು ಕೇವಲ ನಿಮ್ಮ ಪಕ್ಷ ಮತ್ತು ಕುಟುಂಬದ ರಾಜಕೀಯ ಉಳಿವಿಗಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಪ್ರಧಾನಮಂತ್ರಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಪರವಾಗಿ ನಮ್ಮ ವಿರುದ್ಧ ಕತ್ತಿ ಬೀಸುತ್ತಿದ್ದೀರಿʼ ಎಂದು ಹೇಳಿದ್ದಾರೆ.

ʻ100 ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯನ್ನು 6 ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎನ್ನುವ ನಿಮ್ಮ ಮಾತು ನನಗೆ ಆಚ್ಚರಿಯಷ್ಟೇ ಅಲ್ಲ ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ. ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು. ಎರಡೂ ಪದವಿಗಳು ಸಮಾನವಾದದ್ದು, ವಯಸ್ಸಿನ ಹಿರಿ-ಕಿರಿತನಗಳು ಪದವಿಗಳಿಗೆ ಅನ್ವಯವಾಗುವುದಿಲ್ಲ. ಅತಿ ಸಣ್ಣ ವಯಸ್ಸಿಗೆ ಪ್ರಧಾನಿಯಾದ ರಾಜೀವ್ ಗಾಂಧಿಯವರಿದ್ದಾಗಲೂ ಅವರಿಗಿಂತ ಹಿರಿಯರಾದ ಮುಖ್ಯಮಂತ್ರಿಗಳೂ ಇದ್ದರು. ಆಗಲೂ ಪರಸ್ಪರ ಟೀಕೆ-ಟಿಪ್ಪಣಿಗಳು ವಿನಿಮಯವಾಗುತ್ತಿದ್ದವು. ಇಲ್ಲಿಯ ವರೆಗೆ ಯಾರೂ ಸಹ ನಿಮ್ಮ ರೀತಿಯ ಉಪದ್ವಾಪ್ಯತನದ (ಅನಗತ್ಯ) ಪ್ರಶ್ನೆಗಳನ್ನು ಎತ್ತಿರಲಿಲ್ಲʼ ಎಂದು ಹೇಳಿದ್ದಾರೆ.

ʻನೀವು ಹಿಂದಿನ ಪ್ರಧಾನಿಗಳನ್ನು ಯಾವ ರೀತಿಯಲ್ಲಿ ಪ್ರಶ್ನಿಸಿದ್ದೀರಿ, ದೂರಿದ್ದೀರಿ, ಕೆಣಕಿದ್ದೀರಿ ಎನ್ನುವ ಪಟ್ಟಿಯನ್ನು ನಾನು ನಿಮಗೆ ಕೊಡಬಲ್ಲೆ. 2002ರ ಗುಜರಾತ್ ಗಲಭೆಯ ಬಗ್ಗೆ ಲೋಕಸಭೆಯಲ್ಲಿ ನಡುರಾತ್ರಿ ವರೆಗೆ ನಡೆದ ಚರ್ಚೆಯಲ್ಲಿ ನೀವು ಆಗಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ವಿರುದ್ಧ ಪ್ರಯೋಗ ಮಾಡಿರುವ ಟೀಕಾಸ್ತ್ರಗಳು ಸದನದ ದಾಖಲೆಯಲ್ಲಿರಬಹುದು. ಇದನ್ನು ಈಗಲೂ ನಾನು ತಪ್ಪೆಂದು ಹೇಳುವುದಿಲ್ಲ. ಇವೆಲ್ಲವೂ ಸಂಸದೀಯ ಪ್ರಜಾಪ್ರಭುತ್ವದ ನಡವಳಿಕೆಗಳ ಭಾಗವಾಗಿರುತ್ತದೆ. ಆಗ ನೀವು ಮುಖ್ಯಮಂತ್ರಿಯೂ ಆಗಿರಲಿಲ್ಲ, ನೀವು ಕೇವಲ ಒಂದು ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿದ್ದವರು. ಆಗ ಈ 100 ಕೋಟಿ, 6 ಕೋಟಿ ವ್ಯತ್ಯಾಸಗಳು ಬಾಧಿಸಿರಲಿಲ್ಲವೇ?ʼ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ʻಕೆಲವೇ ತಿಂಗಳ ಹಿಂದೆ ನರೇಂದ್ರ ಮೋದಿ ಅವರಿಗಿಂತ ಕನಿಷ್ಠ 10 ವರ್ಷ ಸಣ್ಣವರಾಗಿರುವ ಮತ್ತು ಕೇವಲ ಒಬ್ಬ ಶಾಸಕರಾಗಿರುವ ನಿಮ್ಮ ಮಗ ಎಚ್.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಯಾವ ಭಾಷೆ ಬಳಸಿ ತರಾಟೆಗೆ ತೆಗೆದುಕೊಂಡಿದ್ದರೆನ್ನುವುದನ್ನು ನಾಡಿನ ಜನ ಇನ್ನೂ ಮರೆತಿಲ್ಲ, ನಿಮ್ಮ ನೆನಪಲ್ಲಿಯೂ ಇರಬಹುದು. ಆಗ ಯಾಕೆ ನೀವು ನೂರು ಕೋಟಿ ಜನರನ್ನು ಪ್ರತಿನಿಧಿಸುವ ಪ್ರಧಾನಮಂತ್ರಿಯವರನ್ನು ಟೀಕಿಸಬಾರದು ಎಂದು ಮಗನಿಗೆ ಕಿವಿ ಹಿಂಡಿ ಬುದ್ಧಿ ಹೇಳಿರಲಿಲ್ಲ? ಇವೆಲ್ಲವೂ ಅನುಕೂಲಶಾಸ್ತ್ರ ಅಷ್ಟೆ ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆʼ ಎಂದು ಹೇಳಿದ್ದಾರೆ.

ʻರಾಜ್ಯಕ್ಕೆ ಅನ್ಯಾಯವಾದಾಗ ಅದನ್ನು ವಿರೋಧಿಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರನ್ನು ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಬಿಜೆಪಿ (BJP) ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂಬಹುದು. ಆದರೆ, ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

Read More
Next Story