
ಧಾರವಾಡ: ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ; ಅನುಮತಿ ನಿರಾಕರಣೆ, ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
"ನ್ಯಾಯಯುತವಾಗಿ ಉದ್ಯೋಗಕ್ಕಾಗಿ ಆಗ್ರಹಿಸಿದರೆ, ಪೊಲೀಸರು ಬಲವಂತವಾಗಿ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದಾರೆ," ಎಂದು ವೇದಿಕೆಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಗರದ ಶ್ರೀನಗರ ವೃತ್ತದಲ್ಲಿ 'ಜನ ಸಾಮಾನ್ಯರ ವೇದಿಕೆ' ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಪೊಲೀಸರು ತಡೆ ಹಾಕಿದ್ದಾರೆ. ಅನುಮತಿ ಪಡೆಯದ ಹಿನ್ನೆಲೆಯಲ್ಲಿ, ಪ್ರತಿಭಟನೆ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ಉದ್ಯೋಗ ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಒತ್ತಾಯಿಸಿ ನೂರಾರು ಯುವಕರು ಮತ್ತು ವೇದಿಕೆಯ ಸದಸ್ಯರು ಇಂದು ಬೆಳಿಗ್ಗೆ ಶ್ರೀನಗರ ವೃತ್ತದಲ್ಲಿ ಜಮಾಯಿಸಿದ್ದರು. ಆದರೆ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದರು. ಇದಕ್ಕೆ ಒಪ್ಪದಿದ್ದಾಗ, ಎರಡು ಬಸ್ಗಳಲ್ಲಿ ಪ್ರತಿಭಟನಾಕಾರರನ್ನು ತುಂಬಿಕೊಂಡು ಅಲ್ಲಿಂದ ಕರೆದೊಯ್ಯಲಾಯಿತು. "ನ್ಯಾಯಯುತವಾಗಿ ಉದ್ಯೋಗಕ್ಕಾಗಿ ಆಗ್ರಹಿಸಿದರೆ, ಪೊಲೀಸರು ಬಲವಂತವಾಗಿ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದಾರೆ," ಎಂದು ವೇದಿಕೆಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಕಮಿಷನರ್ ಸ್ಪಷ್ಟನೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, "ಪ್ರತಿಭಟನೆ ನಡೆಸಲು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ," ಎಂದು ಸ್ಪಷ್ಟಪಡಿಸಿದ್ದಾರೆ. ಅನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು ಮತ್ತು ಪ್ರತಿಭಟನೆ ನಡೆಸುವುದು ನಿಯಮಬಾಹಿರ ಎಂದು ಅವರು ತಿಳಿಸಿದ್ದಾರೆ.

