
ಡಿಸಿಎಂ ಡಿ.ಕೆ.ಶಿವಕುಮಾರ್
ಮನರೇಗಾ ಉಳಿಸಲು ವಿಶೇಷ ಅಧಿವೇಶನ: ಬಿಜೆಪಿ ನಾಯಕರಿಗೆ ಬಹಿರಂಗ ಚರ್ಚೆಗೆ ಆಹ್ವಾನ
ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದ್ದರೆ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ನೀಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು.
ಶುಕ್ರವಾರ(ಜ.9) ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮತನಾಡಿದ ಅವರು, "ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಲ್ಹಾದ್ ಜೋಷಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ. ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಈ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತನಿಖೆ ಮಾಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯಾವುದೇ ನಾಯಕರು ಇಂತಹ ಆರೋಪ ಮಾಡಲು ಸಾಧ್ಯವಿಲ್ಲ, ಅವರು ನಿಜವಾಗಿಯೂ ಈ ರೀತಿ ಹೇಳಿದ್ದಾರಾ?” ಎಂದು ಪ್ರಶ್ನಿಸಿದರು.
"ಮನರೇಗಾ ಉಳಿಸಲು 2 ದಿನಗಳ ವಿಶೇಷ ಅಧಿವೇಶನ ಕರೆದು ಈ ವಿಚಾರವಾಗಿ ಸಂಪೂರ್ಣ ಚರ್ಚೆ ಮಾಡಲಾಗುವುದು. ಬಿಜೆಪಿಯವರು ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಅಭಿಯಾನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಬಗ್ಗೆ ಅವರು ಸಮರ್ಥನೆ ಮಾಡಿಕೊಳ್ಳಲಿ, ಈ ಕಾರ್ಯಕ್ರಮದಿಂದ ಏನೆಲ್ಲಾ ಕೆಟ್ಟ ಪರಿಣಾಮ ಬೀರಲಿದೆ ಎಂದು ನಾವು ಹೇಳುತ್ತೇವೆ” ಎಂದು ತಿಳಿಸಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇತ್ತೀಚಿಗೆ "ಡಿಸಿಎಂ ಆದ ತಕ್ಷಣ ಯಾರಿಗೂ ವಿಶೇಷ ಕೊಂಬು ಇರುವುದಿಲ್ಲ" ಎಂಬ ಟೀಕೆಗೆ ಉತ್ತರಿಸಿದ ಅವರು, ಜೆಡಿಎಸ್ ಶಾಸಕರುಗಳಿಗೆ ಮೊದಲು ಅಧಿವೇಶನದಲ್ಲಿ ಚರ್ಚೆ ಮಾಡಲು ಹೇಳಲಿ ಎಂದು ವ್ಯಂಗ್ಯವಾಡಿದರು.

