ಬರ ಪರಿಹಾರ | ಕೇಂದ್ರ ಸಚಿವರ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
x

ಬರ ಪರಿಹಾರ | ಕೇಂದ್ರ ಸಚಿವರ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು


ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇದೀಗ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್ ಈಗ ಚುನಾವಣೆ ಆಯೋಗದ ಮೆಟ್ಟಿಲೇರಿದೆ.

ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಅವರು ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕಾಂಗ್ರೆಸ್ ನಾಯಕ, ಮಾಜಿ ಸಂಸದ ಉಗ್ರಪ್ಪ ನೇತೃತ್ವದ ನಿಯೋಗ ಮಂಗಳವಾರ(ಏಪ್ರಿಲ್ 09) ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಆಯೋಗಕ್ಕೆ ಕಾಂಗ್ರೆಸ್ ದೂರು ಕೊಟ್ಟಿದೆ.

ದೂರಿನಲ್ಲೇನಿದೆ?

ಬರ ಪರಿಹಾರ ಕೊಡುವ ವಿಚಾರದಲ್ಲಿ ಚುನಾವಣಾ ಆಯೋಗದ ನೀತಿ ಸಂಹಿತೆ ಅಡ್ಡಿಯಾಗಿದೆ. ಬರ ಪರಿಹಾರ ನೀಡಲು ಹೈಪವರ್ ಕಮಿಟಿ ಸಭೆ ನಡೆಯಬೇಕು. ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಈ ಬಗ್ಗೆ ನಾವು ಪತ್ರ ಬರೆದಿದ್ದೇವೆ. ಆದರೆ ಚುನಾವಣಾ ಆಯೋಗ ಅನುಮತಿ ನೀಡಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಇದೆ. ಕಾನೂನಿನಲ್ಲಿ ಬರ ಪರಿಹಾರ ಕೊಡುವ ಅವಕಾಶ ಇದ್ದರೂ ಸಹ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ನೆಪ ಹೇಳುತ್ತಿದೆ. ಹೀಗಾಗಿ ಹೈಪವರ್ ಕಮಿಟಿ ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು. ಅಲ್ಲದೇ ತಕ್ಷಣವೇ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ದೂರಿನಲ್ಲಿ ಕಾಂಗ್ರೆಸ್‌ ಮನವಿ ಮಾಡಿದೆ.

ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ವಿಎಸ್ ಉಗ್ರಪ್ಪ, ʻʻಈಗಾಗಲೇ 223 ತಾಲ್ಲೂಕುಗಳು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ನೀತಿ ಸಂಹಿತೆ ಕಾರಣ ಬರ ಪರಿಹಾರ ಕೊಟ್ಟಿಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ರಾಜ್ಯದಲ್ಲಿ ತೀವ್ರವಾದ ಬರವಿದೆ. ಕೇಂದ್ರ ಸಮಿತಿ ಕಳೆದ ಅಕ್ಟೋಬರ್ ನಲ್ಲಿ ರಾಜ್ಯಕ್ಕೆ ಭೇಟಿ ನೀಡಿತ್ತು. ಇಲ್ಲಿಯವರೆಗೆ ಕೇಂದ್ರ ಹೇಳಿಕೆ ಬಿಟ್ರೆ ಪರಿಹಾರ ಕೊಟ್ಟಿಲ್ಲ. ಕಾನೂನುಬದ್ಧವಾಗಿ ಸಿಗಬೇಕಾದ ಪರಿಹಾರ ಕೊಟ್ಟಿಲ್ಲ. ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರ ದಾವೆ ಹೂಡಿದೆ. ಈಗಾಗಲೇ ಸುಪ್ರೀಂ ಕೋರ್ಟ್ ಕೂಡ ಕಪಾಳ ಮೋಕ್ಷ ಮಾಡುವ ಕೆಲಸ ಮಾಡಿದೆ. ಇನ್ನು ಬರಪರಿಹಾರ, ಕುಡಿಯುವ ನೀರು, ಮೇವಿಗೆ ಯಾವುದೇ ನಿರ್ಬಂಧ ಇಲ್ಲʼʼ ಎಂದು ಚುನಾವಣೆ ಆಯೋಗ ಸ್ಪಷ್ಟನೆ ನೀಡಿರುವುದಾಗಿ ಅವರು ತಿಳಿಸಿದರು.

Read More
Next Story