
ಕಾರವಾರ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ
ಇಡಿ ದಾಳಿಯ ಸಮಯದಲ್ಲಿ ಶಾಸಕ ಸತೀಶ್ ಸೈಲ್ ಮನೆಯಲ್ಲಿ ಇರಲಿಲ್ಲ. ಅಧಿವೇಶನದ ಕಾರಣ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಅವರ ಕುಟುಂಬ ಸದಸ್ಯರಿಂದ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾರವಾರದ ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಮನೆ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾರವಾರದ ಸದಾಶಿವಘಡದಲ್ಲಿರುವ ಸೈಲ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ದಾಳಿಯ ಸಮಯದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ. ಅಧಿವೇಶನದ ಕಾರಣ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 6 ರಿಂದ 7 ಇಡಿ ಅಧಿಕಾರಿಗಳು ಮತ್ತು ಇಬ್ಬರು ಅರೆ ಸೇನಾ ಸಿಬ್ಬಂದಿ ದಾಳಿಯ ತಂಡದಲ್ಲಿದ್ದರು ಎನ್ನಲಾಗಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಶಾಸಕ ಸತೀಶ್ ಸೈಲ್ ಅವರ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಸತೀಶ್ ಸೈಲ್ ಅವರು ದೋಷಿ ಎಂದು ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು. ಬಳಿಕ ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಸತೀಶ್ ಸೈಲ್ ಸೇರಿ ಎಲ್ಲ ಆರೋಪಿಗಳಿಗೂ ಜಾಮೀನು ನೀಡಿ ಆದೇಶ ಹೊರಡಿಸಿತ್ತು.
ಏನಿದು ಪ್ರಕರಣ?
ಅಕ್ರಮ ಗಣಿಗಾರಿಕೆಯ ಮೂಲಕ ವಿದೇಶಕ್ಕೆ ಸಾಗಿಸಲು ಕಾರವಾರದ ಬೇಲೆಕೇರಿ ಬಂದರಿಯಲ್ಲಿ 11,312 ಮೆಟ್ರಿಕ್ ಟನ್ ಅದಿರನ್ನು ಸಂಗ್ರಹಿಸಲಾಗಿತ್ತು. ಅನುಮತಿ ಇಲ್ಲದೇ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ಅವರು ಇದನ್ನು ವಿದೇಶಕ್ಕೆ ಸಾಗಣೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಪ್ರತ್ಯೇಕ 6 ಪ್ರಕರಣಗಳು ದಾಖಲಾಗಿದ್ದವು. ಈ ಕುರಿತು ಲೋಕಾಯುಕ್ತ ಮತ್ತು ಸಿಬಿಐ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದವು.