
ಜೆಡಿಎಸ್ ಪಕ್ಷ ಸಂಘಟನೆಗೆ 93ನೇ ವಯಸ್ಸಿನಲ್ಲೂ ಗುಡುಗಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ
ಬಿಬಿಎಂಪಿ ಗುಮಾಸ್ತನಿಗೆ ವೇತನ ನೀಡಲು ಸಾಧ್ಯವಾಗದ ಮಹಾನಾಯಕ ನಮ್ಮವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಪಕ್ಷ ಸಂಘಟನೆ ಮಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು 93ನೇ ವಯಸ್ಸಿನಲ್ಲೂ ಗುಡುಗಿದ್ದು, ಪಕ್ಷದ ಬಲವರ್ಧನೆಗಾಗಿ ಅವಿತರ ದುಡಿಯುವುದಾಗಿ ಘೋಷಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ನಡೆದ ಜೆಡಿಎಸ್ ನೋಂದಣಿ ಅಭಿಯಾನ ಭಾಗವಹಿಸಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಅಧಿಕಾರಿಗಳಿಗೆ ವೇತನ ನೀಡಲು ದುಡ್ಡಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುಮಾಸ್ತನಿಗೆ ವೇತನ ನೀಡಲು ಹಣ ಇಲ್ಲ ಮಹಾನಾಯಕ ಎಂದು ಗುಡುಗಿದ್ದಾರೆ.
ಸರ್ಕಾರಿ ನೌಕರರಿಗೆ ವೇತನ ನೀಡಲು ಹಣ ಇಲ್ಲದಿರುವ ಸರ್ಕಾರವು ಜೆಡಿಎಸ್ನ ಎಲ್ಲಾ ಶಾಸಕರ ವಿಷಯಕ್ಕೆ ಬರುತ್ತಾರೆ. ನಮ್ಮ ಪಕ್ಷವನ್ನು ಉಳಿಸಿಕೊಳ್ಳುವ ಶಕ್ತಿ ನಮ್ಮ ಕಾರ್ಯಕರ್ತರಿಗೆ ಇದೆ. ಜೆಡಿಎಸ್ ಪಕ್ಷವನ್ನು ನಿರ್ಮೂಲನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಮತ್ತೊಮ್ಮೆ ನಾವು ಬರುತ್ತೇವೆ. ಎಲ್ಲಿದೆ ಕಾಂಗ್ರೆಸ್ ಪಕ್ಷ. ಕೇವಲ ಮೂರು ರಾಜ್ಯದಲ್ಲಿ ಮಾತ್ರ ಇದೆ. ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದಲ್ಲಿ ಮಾತ್ರ ಇದೆ. ಮೂರು ರಾಜ್ಯದಲ್ಲಿ ಆಡಳಿತ ಇಟ್ಟುಕೊಂಡು ಕಾಂಗ್ರೆಸ್ಸಿಗರು ಮೆರೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಗ್ಯಾರಂಟಿ ಯೋಜನೆಗಾಗಿ ಎಲ್ಲಾ ಅನುದಾನ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇತರೆ ಅಭಿವೃದ್ಧಿ ಕೆಲಸಗಳಿಗೆ ಹಣ ಇಲ್ಲ. ಸುಮ್ಮನೆ ಅಭಿವೃದ್ಧಿಯ ಮಾತುಗಳನ್ನು ಆಡುತ್ತಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಂಚರತ್ನ, ಜಲಧಾರೆಯಂತಹ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಜೆಡಿಎಸ್ ಸಂಪೂರ್ಣವಾಗಿ ಅಧಿಕಾರಕ್ಕೆ ಬಂದಿದ್ದರೆ ಈ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತಿತ್ತು. ಆದರೆ, ಕಾಂಗ್ರೆಸ್ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದು, ವೇತನಕ್ಕೆ ಸಂಬಳ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಜಾರಿಗೊಳಿಸಲು ಮುಂದಾಗಿದ್ದೆ. ಆದರೆ, ಸರ್ಕಾರ ಪತನಗೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಮಹಿಳೆಯರಿಗೆ ಮೀಸಲಾತಿ ಅನುಷ್ಠಾನಗೊಳಿಸಿದರು. ಮುಂದಿನ 2028ರಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸ್ಪರ್ಧಿಸಲು ಅವಕಾಶ ಸಿಗಲಿದೆ ಎಂದಿದ್ದಾರೆ.