Heavy Rain|ಭಾರೀ ಮಳೆಯಿಂದ ಕರ್ನಾಟಕ ತತ್ತರ: ನಾಲ್ವರ ದುರ್ಮರಣ, ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
x
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. 

Heavy Rain|ಭಾರೀ ಮಳೆಯಿಂದ ಕರ್ನಾಟಕ ತತ್ತರ: ನಾಲ್ವರ ದುರ್ಮರಣ, ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಮಳೆಗೆ ನೆನೆದ ಗೋಡೆ ಕುಸಿದು, ಕೆಲವೆಡೆ ಸಿಡಿಲಿನಿಂದ ಜನರು ಮೃತಪಟ್ಟಿದ್ದಾರೆ.


ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಸೋಮವಾರ ಒಂದೇ ದಿನ ನಾಲ್ಕು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಮಳೆಯಿಂದಾಗಿ ಉಂಟಾದ ಅನಾಹುತಗಳ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮೈಸೂರು ಜಿಲ್ಲೆಗಳ ಅಂಗನವಾಡಿಗಳಿಗೆ ಮಂಗಳವಾರ (ಮೇ 27) ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಬುಧವಾರವೂ ರಜೆ ಮುಂದುವರಿಯಲಿದೆ.

ಅಪಘಾತದಲ್ಲಿ ಇಬ್ಬರ ಸಾವು

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ಬೆಂಗಳೂರು ಮೂಲದ ಅಭಿಷೇಕ್ (27) ಮತ್ತು ಶರತ್ (28) ಅವರು ಚಲಾಯಿಸುತ್ತಿದ್ದ ಎರ್ಟಿಗಾ ಕಾರು ಮಳೆಯಿಂದಾಗಿ ರಸ್ತೆ ಸರಿಯಾಗಿ ಕಾಣದೆ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಬ್ಬಿಣದ ಡಿವೈಡರ್​ಗೆ ಗುದ್ದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇವರು ಈ ಅಪಘಾತದಲ್ಲಿ ಅಸುನೀಗಿದ್ದಾರೆ. ಕಾರಿನಲ್ಲಿದ್ದ ಧನಂಜಯ ಮತ್ತು ಸಂದೀಪ್ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯುತ್​ ಸ್ಪರ್ಶ ಬಾಲಕ ಸಾವು

ತುಮಕೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ 13 ವರ್ಷದ ಅಚುತ್‌ ಕುಮಾರ್ ಎಂಬ ಬಾಲಕ ಮೃತಪಟ್ಟಿದ್ದಾನೆ. ಸೋಮವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದಾಗ ವಿದ್ಯುತ್ ಕಂಬದಿಂದ ಮನೆಗೆ ಸಂಪರ್ಕ ಕಲ್ಪಿಸಿದ್ದ ತಂತಿ ಸ್ಕಿನ್ ಔಟ್ ಆಗಿ ಮನೆಯ ಆರ್​ಸಿಸಿ ಶೀಟ್‌ಗೆ ತಗುಲಿ, ಅಲ್ಲಿಂದ ಮೆಟ್ಟಿಲಿನ ಗ್ರಿಲ್‌ಗೂ ವಿದ್ಯುತ್ ಪ್ರಸರಿಸಿದೆ. ಇದನ್ನು ಅರಿಯದೆ ಗ್ರಿಲ್ ಮುಟ್ಟಿದ ಅಚುತ್‌ ಕುಮಾರ್ ಶಾಕ್ ಹೊಡೆದು ಸಾವನ್ನಪ್ಪಿದ್ದಾನೆ.

ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ

ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಎರಡೂ ದಿನಗಳೂ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಇರಲಿದೆ. ಮೈಸೂರು ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮಂಗಳವಾರ (ಮೇ 27) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇ 26 ಮತ್ತು 27 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಘಟಕಗಳಿಗೂ ರಜೆ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ, ಪ್ರವಾಹ ಭೀತಿ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ನದಿ-ತೊರೆಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದೆ. ಇದು ಪ್ರವಾಹ ಪರಿಸ್ಥಿತಿಗೆ ಕಾರಣವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 29 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳು ಉಲ್ಬಣಗೊಳ್ಳುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆಯ ಎಚ್ಚರಿಕೆಗಳು

ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಕರ್ನಾಟಕ, ಕೊಡಗು, ಶಿವಮೊಗ್ಗ, ಹಾಸನ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಮತ್ತು ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸಾರ್ವಜನಿಕರು ಮಳೆಯ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಮತ್ತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.

Read More
Next Story