
Bangalore Stampede| ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ, ಹೋಮ್ ಮಿನಿಸ್ಟರ್ ವಿರುದ್ಧ ಪೊಲೀಸರಿಗೆ ದೂರು
ಕುಮಾರಸ್ವಾಮಿ ಜತೆ ಸೇರಿ ಬಿಜೆಪಿ ಬದಲಿಗೆ ಎನ್ಡಿಎ ಒಕ್ಕೂಟದ ಪತ್ರಿಕಾಗೋಷ್ಠಿಯಂತೆ ಮಾಡುವುದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ಮುಜುಗರ ಸೃಷ್ಟಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಲಾಗಿದೆ
ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬುಧವಾರ(ಜೂ.4) ರಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಜೆ ಕ್ರೀಡಾಂಗದ ಬಳಿ ಆರ್ಸಿಬಿ ವಿಜಯೋತ್ಸವ ಕಣ್ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಸೇರಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ 11 ಜನರು ಮೃತಪಟ್ಟು 56 ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡಿದ್ದರು. ಈ ದುರಂತಕ್ಕೆ ಸರ್ಕಾರವೇ ನೇರ ಕಾರಣವಾಗಿದ್ದು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ದೂರಿನಲ್ಲೇನಿದೆ ?
ಮಂಗಳವಾರ(ಜೂ.3) ದಂದು ನಡೆದ ಐಪಿಎಲ್ ಫೈನಲ್ ಪಂದ್ಯಾವಳಿಯಲ್ಲಿ ಆರ್ಸಿಬಿ ಗೆಲುವು ಸಾಧಿಸಿತ್ತು. ಬುಧವಾರ ತಂಡ ಬೆಂಗಳೂರಿಗೆ ಆಗಮಿಸಲಿದ್ದು ಲಕ್ಷಾಂತರ ಅಭಿಮಾನಿಗಳು ಕ್ರೀಡಾಪಟುಗಳನ್ನು ನೋಡಲು ಆಗಮಿಸುತ್ತಾರೆ ಎಂದು ಗುಪ್ತಚರದಳಕ್ಕೆ ತಿಳಿದಿತ್ತು. ಆದರೂ ಯಾವುದೇ ಪೂರ್ವ ತಯಾರಿ ಇಲ್ಲದೆ ಸಿಎಂ ಹಾಗೂ ಡಿಸಿಎಂ ಅಧಿಕಾರಿಗಳ ಮೇಲೆ ಒತ್ತಡ ತಂದು ಕಾರ್ಯಕ್ರಮ ಆಯೋಜಿಸಿದ್ದಾರೆ. ಸಮಾರಂಭದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿಯವರ ಅಧಿಕೃತ ʼಎಕ್ಸ್ʼ ಖಾತೆಯಿಂದ ಮುಕ್ತ ಆಹ್ವಾನ ಕೊಟ್ಟ ಪರಿಣಾಮ ವಿಧಾನಸೌಧ ಹಾಗೂ ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಸೇರಿದ್ದರಿಂದ ಈ ದುರಂತ ಸಂಭವಿಸಿದೆ.
ಸರ್ಕಾರದ ನಿರ್ಲಕ್ಷ್ಯ, ಕಾರ್ಯಕ್ರಮ ಆಯೋಜಿಸಲು ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದಿರುವುದು, ಸಾವು-ನೋವು ಸಂಭವಿಸಬಹುದು ಎಂಬ ಮಾಹಿತಿ ಇದ್ದರೂ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾರ್ಯಕ್ರಮ ಆಯೋಜನೆ ಮಾಡಿರುವ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
ಅಮಿತ್ ಶಾ ಸೂಚನೆ
ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದಂತೆ, ರಾಷ್ಟ್ರೀಯ ಬಿಜೆಪಿ ನಾಯಕರು ಕಣಕ್ಕಿಳಿದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಾರಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಸಿದ್ದರಾಮಯ್ಯ ಸರ್ಕಾರವನ್ನು ನೇರವಾಗಿ ತರಾಟೆಗೆ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಸರ್ಕಾರವನ್ನು ಟೀಕಿಸುವ ಜತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. "ಸಿಎಂ ಜತೆ ಜತೆ ಇಪ್ಪತ್ತನಾಲ್ಕು ಗಂಟೆ ʼಗೋವಿಂದ.. ಗೋವಿಂದ..ʼ ಎನ್ನುವ ವ್ಯಕ್ತಿ ಇದ್ದಾರೆ. ಕಮಿಷನರ್ ವಿಧಾನಸೌಧ ಮುಂದೆ ಆರ್ಸಿಬಿ ಸಮಾರಂಭಕ್ಕೆ ಅನುಮತಿ ನೀಡಲು ನಿರಾಕರಿಸಿದಾಗ ಸಿಎಂಗೆ ಒತ್ತಡ ಹಾಕಿ ಅನುಮತಿ ಕೊಡಿಸ್ತಾರೆ," ಎಂದು ಹೇಳಿಕೆ ನೀಡಿದ್ದರು.
ಅವರ ಟೀಕೆ, ಸಿಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಆಗಿರುವ ಎಸ್. ಗೋವಿಂದರಾಜು ಅವರ ಕುರಿತಂತೆ ಆಗಿತ್ತು. ಪತ್ರಿಕಾಗೋಷ್ಠಿ ಬಳಿಕ ಕೆಲವೇ ಹೊತ್ತಿನಲ್ಲಿ ಗೋವಿಂದ ರಾಜು ಅವರ ರಾಜಕೀಯ ಕಾರ್ಯದರ್ಶಿ ಸ್ಥಾನವನ್ನು ಹಿಂಪಡೆಯಲಾಗಿದೆ. ಈ ಮೂಲಕ ಅಮಿತ್ ಶಾ ಸೂಚನೆಯಂತೆ ನಡೆದ ಕುಮಾರಸ್ವಾಮಿ ಸಹಿತ ನಡೆದ ಜಂಟಿ ಪತ್ರಿಕಾಗೋಷ್ಠಿ ಪರಿಣಾಮ ಬೀರಿದೆ.
ಘಟನೆ ನಡೆದ ತಕ್ಷಣ ಪ್ರಮುಖವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬೊಟ್ಟು ಮಾಡಿ ಕುಮಾರಸ್ಬಾಮಿ ಅವರು ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಬೇಕೆಂದು ಬಿಜೆಪಿ ರಾಜ್ಯ ನಾಯಕರು ಸಿದ್ಧತೆ ನಡೆಸಿದ್ದರು. ಈಗ ಅಮಿತ್ ಶಾ ಅವರ ಸೂಚನೆಯಂತೆ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಲು ತೀರ್ಮಾನಿಸಿದ್ದಾರೆ ಎಂದು ನಾಯಕರೊಬ್ಬರು ʼದ ಫೆಡರಲ್ ಕರ್ನಾಟಕʼಕ್ಕೆ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ವಿರುದ್ಧ ಅಷ್ಟೇನೂ ಪ್ರಭಾವಯುತವಾಗಿ ದಾಳಿ ನಡೆಸುತ್ತಿಲ್ಲ. ನಾಯಕತ್ವ ಸಮಸ್ಯೆಯೂ ಇದೆ. ಹಾಗಾಗಿ ಕುಮಾರಸ್ವಾಮಿ ಜತೆ ಸೇರಿ ಬಿಜೆಪಿ ಬದಲಿಗೆ ಎನ್ಡಿಎ ಒಕ್ಕೂಟದ ಪತ್ರಿಕಾಗೋಷ್ಠಿಯಂತೆ ಮಾಡುವುದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ಮುಜುಗರ ಸೃಷ್ಟಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಲಾಗಿದೆ.
ಬಂಧನ
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮೂವರು ಹಾಗೂ ಆರ್ಸಿಬಿ ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಬಂಧಿತರು.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿಂತೆ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ, ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. 2 ಎಫ್ಐಆರ್ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಜತೆಗೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಐವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿದ್ದರು.
ಈಗ ಕಾಲ್ತುಳಿತಕ್ಕೆ ಕಾರಣರಾದ ಆರ್ಸಿಬಿ ಆಡಳಿತ ಮಂಡಳಿ, ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಹಾಗೂ ಕೆಎಸ್ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಹಲವರು ಎಸ್ಕೇಪ್
ಕೆಎಸ್ಸಿಎ ಪ್ರಮುಖರು ಗುರುವಾರ ರಾತ್ರೀಯೇ ತಪ್ಪಿಸಿಕೊಂಡಿದ್ದು, ಅವರ ಮನೆಗಳಿಗೆ ತೆರಳಿ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಕಪ್ ಗೆದ್ದುಕೊಂಡ ಹಿನ್ನಲೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ದಂಡೇ ಕ್ರೀಡಾಂಗಣಕ್ಕೆ ಹರಿದು ಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ನೆರೆದಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಯನ್ನೂ ಬೀಸಿದ್ದರು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೆದಿತ್ತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡಲೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ , ಮಣಿಪಾಲ್ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 7, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಟ್ಟು ಸೇರಿ 11 ಮಂದಿ ಪ್ರಾಣ ಕಳೆದುಕೊಂಡರು. ಮತ್ತು ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಪೊಲೀಸ್ ಆಯುಕ್ತರು ಅಮಾನತು
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೂಕ್ತ ಬಂದೋಬಸ್ತ್ ಕಲ್ಪಿಸದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಗೆ ಹೊಣೆಯಾಗಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಕೇಂದ್ರ ವಲಯ ಡಿಸಿಪಿ ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್ಪೆಕ್ಟರ್ ಗಿರೀಶ್ ಹಾಗೂ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲು ಸಿ.ಎಂ ಸಿದ್ದರಾಮಯ್ಯ ಗುರುವಾರ ತುರ್ತು ಪತ್ರಿಕಾಗೋಷ್ಟಿಯಲ್ಲಿ ಘೋಷಣೆ ಮಾಡಿದ್ದರು.
ನ್ಯಾಯಾಂಗ ತನಿಖೆಗೆ ಆದೇಶ
ಇನ್ನು ಕಾಲ್ತುಳಿತ ದುರಂತದ ಕುರಿತು ಸಿಐಡಿ ತನಿಖೆ ಜೊತೆಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೂ ಸರ್ಕಾರ ಆದೇಶಿಸಿದೆ. ಗುರುವಾರ ನಡೆದ ಸಚಿವ ಸಂಪುಟದಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಹೇಳಿಕೆ ನೀಡಿದ್ದರು.
Live Updates
- 6 Jun 2025 12:05 PM IST
ಪೊಲೀಸ್ ಅಧಿಕಾರಿಗಳ ಅಮಾನತು ನಾಟಕ, ಕುಮಾರಸ್ವಾಮಿ ಪರೋಕ್ಷ ಟೀಕೆ
ಆರ್ಸಿಬಿ ವಿಜಯೋತ್ಸವ ಸಮಾರಂಭದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಸರ್ಕಾರದ ಕ್ರಮದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಅಮಾನತುಗಳು ತಾತ್ಕಾಲಿಕವಾಗಿದ್ದು, ನಂತರ ಪರಿಸ್ಥಿತಿ ಸರಿಪಡಿಸುವ ಭರವಸೆಯನ್ನು ಸರ್ಕಾರ ನೀಡಿರಬಹುದು ಎಂದು ಅವರು ಪರೋಕ್ಷವಾಗಿ ಸೂಚಿಸಿದ್ದಾರೆ.
"ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ, ನಂತರ ಸ್ವಲ್ಪ ದಿನ ಸುಮ್ಮನಿರಿ, ಆಮೇಲೆ ಎಲ್ಲಾ ಸರಿಮಾಡುತ್ತೇವೆ ಅಂತಾ ಹೇಳಿರುತ್ತಾರೆ" ಎಂದಿರುವ ಕೇಂದ್ರ ಸಚಿವರು, ಸರ್ಕಾರದ ವಿರುದ್ಧದ ವಿರೋಧವನ್ನು ತಣ್ಣಗಾಗಿಸಲು ಮತ್ತು ಸಾರ್ವಜನಿಕ ಆಕ್ರೋಶ ಕಡಿಮೆ ಮಾಡಲು ಅಮಾನತು ನಾಟಕ ಮಾಡಲಾಗಿದೆ ಎಂದು ಹೇಳಿದರು. ಅಮಾನತುಗೊಂಡ ಅಧಿಕಾರಿಗಳನ್ನು ನಂತರ ಹುದ್ದೆಗೆ ಕರೆಸಬಹುದು ಅಥವಾ ಬೇರೆ ರೀತಿಯಲ್ಲಿ ಅವರಿಗೆ ಅನುಕೂಲ ಮಾಡಿಕೊಡಬಹುದು ಎಂದು ಕುಮಾರಸ್ವಾಮಿ ಅವರ ಹೇಳಿಕೆಯ ಒಳಹು.
- 6 Jun 2025 12:02 PM IST
ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣ: ಪೊಲೀಸ್ ಅಧಿಕಾರಿಗಳ ಅಮಾನತು 'ತಪ್ಪು ಮುಚ್ಚಿಹಾಕುವ ಯತ್ನ' - ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಆರ್ಸಿಬಿ ವಿಜಯೋತ್ಸವ ಸಮಾರಂಭದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಸರ್ಕಾರವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ಅವರು ಆರೋಪಿಸಿದ್ದಾರೆ.
"ಕಾಲ್ತುಳಿತ ದುರಂತಕ್ಕೆ ನೇರವಾಗಿ ಸರ್ಕಾರವೇ ಕಾರಣ. ಸರ್ಕಾರದ ತಪ್ಪುಗಳನ್ನು ಮುಚ್ಚಿಹಾಕಲು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪೊಲೀಸ್ ಕಮಿಷನರ್ ಬಿ. ದಯಾನಂದ ಅವರ ಕಾರ್ಯಕ್ಷಮತೆಯನ್ನು ಹೊಗಳಿದ ಕುಮಾರಸ್ವಾಮಿ, "ದಯಾನಂದ ಅವರು ಹೊಸ ವರ್ಷಾಚರಣೆ ವೇಳೆಯೂ ಪೊಲೀಸ್ ಕಮಿಷನರ್ ಆಗಿದ್ದರು. ಆ ಸಮಯದಲ್ಲಿ ಎಲ್ಲಿಯೂ ಸಣ್ಣ ಘಟನೆ ಕೂಡ ಆಗಿರಲಿಲ್ಲ" ಎಂದು ಸ್ಮರಿಸಿದ್ದಾರೆ.
ಅಮಾನತಾದ ಡಿಸಿಪಿ ಶೇಖರ್ ಅಪ್ಪಯ್ಯ ಅವರ ಕುರಿತು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರರನ್ನು ಉಲ್ಲೇಖಿಸಿ, "ಅಮಾನತಾದ ಡಿಸಿಪಿ ಶೇಖರ್. ಅಪ್ಪಯ್ಯ ಎಂಬುವರಿಂದ ಅಮಾನತಾಗಿದ್ದಾರೆ. ಸರ್ಕಾರದ ಉನ್ನತ ಮಟ್ಟದಲ್ಲಿರುವವರು ಪೊಲೀಸ್ ಇಲಾಖೆಯ ಅಪ್ಪಯ್ಯ ಎಂದು ಹೇಳುವವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
- 6 Jun 2025 11:59 AM IST
ಆರ್ಸಿಬಿ ದುರಂತ; ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ
ಆರ್ಸಿಬಿ ವಿಜಯೋತ್ಸವ ಸಮಾರಂಭದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
"ಪೊಲೀಸರು ಅನುಮತಿ ಇಲ್ಲದಿದ್ದರೂ ವಿಧಾನಸೌಧ ಮುಂದೆ ಯಾರು ಅನುಮತಿ ನೀಡಿದ್ದು? ಅನುಮತಿ ಇಲ್ಲದಿದ್ದರೂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಯಾಕೆ ಡಿಕೆಶಿ ಹೋದರು? ಅಲ್ಲಿ ಕಪ್ಗೆ ಮುತ್ತು ಕೊಟ್ಟು ಡಿಕೆಶಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದು ಯಾಕೆ" ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಈ ಘಟನೆಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 56 ಮಂದಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ, ಸರ್ಕಾರದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಬಿಜೆಪಿ ನಾಯಕರು ತೀವ್ರವಾಗಿ ಆರೋಪಿಸುತ್ತಿದ್ದಾರೆ.
ಈ ಘಟನೆಯು ರಾಜಕೀಯ ವಲಯದಲ್ಲಿ ತೀವ್ರ ಸ್ವರೂಪದ ಚರ್ಚೆಗೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ಮುಂದುವರಿಸಿವೆ.
- 6 Jun 2025 11:58 AM IST
ಸರ್ಕಾರವೇ ಅಪರಾಧಿ, ನ್ಯಾಯಂಗ ತನಿಖೆಯಾಗಲಿ: ಆರ್. ಆಶೋಕ್
ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಇಲ್ಲ. ಎಪ್ಐಆರ್ನಲ್ಲಿ ಸಂಭ್ರಮಾಚರಣೆಗೆ ಅನುಮತಿ ಇಲ್ಲದಿದ್ದರೂ ಕಾರ್ಯಕ್ರಮ ಮಾಡಿದ್ದಾರೆ ಎಂದು ಉಲ್ಲೇಖವಾಗಿದೆ. ಸಿಎಂ ಮನೆಗೆ ಪ್ರಾಂಚೈಸಿಯನ್ನು ಕರೆದುಕೊಂಡು ಹೋದವರು ಯಾರು ? ಪ್ರಾಂಚೈಸಿಯವರಿಗೆ ಯಾರು ಏನು ಮಾಡುತ್ತಾರೆ ನಾವು ಇದ್ದೇವೆ ಎಂದು ಸರ್ಕಾರ ಹೇಳಿದೆ. ಸರ್ಕಾರ ಕಾನೂನನ್ನು ಕೈಗೆ ತೆಗೆದುಕೊಂಡಿದೆ. ಪೊಲೀಸರು ಬೇಡ ಅಂದರು ಸರ್ಕಾರ ಕಾರ್ಯಕ್ರಮವನ್ನು ಮಾಡಿದೆ. ಸಿಎಂ, ಡಿಸಿಎಂ ಹಾಗು ಗೃಹ ಸಚಿವರು ಪೊಟೋ ಶೂಟ್ ನಲ್ಲಿದ್ದರು. ಸಿಎಂ ಮೊದಲ ಮಾಧ್ಯಮಗೋಷ್ಠಿಯಲ್ಲಿ ನಮ್ಮದೇನು ತಪ್ಪಿಲ್ಲ ಎಂದು ಹೇಳಿದ್ದರು. ಮೊದಲು ಡಿಸಿ ಅವರಿಂದ ತನಿಖೆಗೆ ಆದೇಶಿಸಿದ್ದರು. ಮಾರನೇ ದಿನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಹಾಗೂ ಸಿಐಡಿಯಿಂದ ತನಿಖೆ ಮಾಡಿಸುತ್ತೇವೆ ಎಂದಿದ್ದಾರೆ. ಇದನ್ನು ಮುಚ್ಚಿಹಾಕಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಸರ್ಕಾರನೇ ಅಪರಾಧಿ ಆಗಿರುವುದರಿಂದ ನ್ಯಾಯಾಂಗ ತನಿಖೆ ಆಗಬೇಕು ಆಗ್ರಹಿಸಿದರು.
- 6 Jun 2025 11:50 AM IST
ಕಾಲ್ತುಳಿತದ ದುರಂತಕ್ಕೆ ಸರ್ಕಾರ ನೇರ ಕಾರಣ: ಆರ್. ಅಶೋಕ್
ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸರ್ಕಾರವೇ ನೇರ ಹೊಣೆ. ಮಜಾವಾದಿ ಸಿದ್ದರಾಮಯ್ಯ, ಐಪಿಎಲ್ ಗೆದ್ದಿದ್ದು ಆರ್ಸಿಬಿ ತಂಡ, ಆದರೆ ಕಪ್ ತೆಗೆದುಕೊಂಡು ಸಂಭ್ರಮಿಸಿದ್ದು ಕೆಪಿಸಿಸಿ. ಸಿದ್ದರಾಮಯ್ಯ ಬ್ಯಾಟಿಂಗ್ ಡಿಕೆಶಿ ಬೌಲಿಂಗ್ ಮಾಡಿದರು ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರನ್ನು ರನ್ನೌಟ್ ಮಾಡಿಸಲು ಡಿಕೆಶಿ ರನ್ನೌಟ್ ಮಾಡಲು ಹೊರಟರು. ಆತುರ ಆತುರಾವಾಗಿ ಸರ್ಕಾರ ಕಾರ್ಯಕ್ರಮ ಮಾಡಿತು. ಕಾಂಗ್ರೆಸ್ ಸಮಾವೇಶವ ಮಾಡಲು ಮೂರು ದಿನಗಳ ಮೊದಲೇ ತಯಾರಿ ನೋಡಲು ಸಿಎಂ ಹಾಗು ಡಿಸಿಎಂ ಹೋಗಿದ್ದರು. ಆದರೆ ಆರ್ಸಿಬಿ ಸಂಭ್ರಮಾಚರಣೆ ತಯಾರಿಗೆ ಒಂದು ಗಂಟೆ ಸಮಯ ನೀಡಲಿಲ್ಲ. ಪೊಲೀಸರ ಪರವಾಗಿ ಜನ ಅಭಿಯಾನ ಶುರುಮಾಡಿದ್ದಾರೆ. ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ನವರು ಹೇಳಿದ್ದಾರೆ. ಹೌದು ನಾವು ನ್ಯಾಯ ಸಿಗುವವರೆಗೆ ರಾಜಕಾರಣ ಮಾಡುತ್ತೇವೆ ಎಂದು ವಿರೋಧಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.
- 6 Jun 2025 11:43 AM IST
ದುರಂತದ ಹೊಣೆ ಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಬಿ.ವೈ. ವಿಜಯೇಂದ್ರ
ಪೊಲೀಸರು ಅನುಮತಿ ಇಲ್ಲದಿದ್ದರೂ ವಿಧಾನಸೌಧದ ಮುಂದೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾರ್ಯಕ್ರಮ ಮಾಡಿದ್ದಾರೆ. ಅಲ್ಲಿ ಟ್ರೋಪಿಗೆ ಮುತ್ತು ಕೊಟ್ಟು ಡಿಕೆಶಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾಲ್ತುಳಿತದ ಪ್ರಕರಣದ ಆರೋಪಿ ನಂಬರ್ 1 ಸಿಎಂ ಸಿದ್ದರಾಮಯ್ಯ, ಆರೋಪಿ 2 ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆರೋಪಿಗಳನ್ನಾಗಿ ಮಾಡಬೇಕು. ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
- 6 Jun 2025 11:36 AM IST
ಪೊಲೀಸ್ ಅಧಿಕಾರಿಗಳನ್ನು ಹರಕೆಯ ಕುರಿ ಮಾಡಲಾಗಿದೆ: ಬಿ.ವೈ. ವಿಜಯೇಂದ್ರ ಆಕ್ರೋಶ
ಆರ್ಸಿಬಿ ವಿಜಯೋತ್ಸವದ ಕಾಲ್ತುಳಿದ ದುರಂತ ನಡೆದು ಎಪ್ಐಆರ್ ದಾಖಲಾದ ನಂತರ ಸಿಎಂ ಸಿದ್ದರಾಮಯ್ಯ ಜಾಗೃತರಾಗಿದ್ದಾರೆ. ರಾಜ್ಯ ಹೈಕೋರ್ಟ್ ಚಾಟಿ ಬೀಸಿದ ಬಳಿಕ ತರಾತುರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ತಮ್ಮ ಹುಳಕನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- 6 Jun 2025 10:48 AM IST
ಪೊಲೀಸ್ ಅಧಿಕಾರಿಗಳ ಅಮಾನತು, ಸರ್ಕಾರದ ವಿರುದ್ಧ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ
ಆರ್ಸಿಬಿ ಐಪಿಎಲ್ ವಿಜಯೋತ್ಸವದ ಸಮಾರಂಭದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬಳಿಕ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿರುವುದಕ್ಕೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಆರ್ಸಿಬಿ ವಿಜಯೋತ್ಸವ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, 56 ಮಂದಿ ಗಾಯಗೊಂಡಿದ್ದರು. ಈ ಘಟನೆಯ ಹೊಣೆ ಹೊತ್ತು ಸರ್ಕಾರವು ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಆದರೆ, ಈ ದುರಂತಕ್ಕೆ ಸರ್ಕಾರವೇ ನೇರವಾಗಿ ಹೊಣೆಗಾರ ಎಂದು ಆರೋಪಿಸಿದ್ದಾರೆ.