ನಂದಿಬೆಟ್ಟದಲ್ಲಿ ಸಚಿವ ಸಂಪುಟ ರದ್ದತಿಗೆ ಸರ್ಕಾರ ಸಮರ್ಥನೆ
x

ನಂದಿಬೆಟ್ಟದಲ್ಲಿ ಸಚಿವ ಸಂಪುಟ ರದ್ದತಿಗೆ ಸರ್ಕಾರ ಸಮರ್ಥನೆ

ಜುಲೈ ತಿಂಗಳಲ್ಲಿ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಉದ್ದೇಶಿಸಿದೆ. ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರದ ಕಾರಣ ಸಭೆ ರದ್ದು ಮಾಡಲಾಗಿದೆ ಎಂದು ಹೇಳಿದೆ.


ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ದಿಢೀರ್ ರದ್ದಾಗಿದ್ದು, ಜಿಲ್ಲೆಯ ನಿರೀಕ್ಷೆಗಳು ಹುಸಿಯಾಗಿವೆ. ಶಾಸಕರು ಹೆಚ್ಚಿನ ಅನುದಾನಕ್ಕಾಗಿ ಪಟ್ಟು ಹಿಡಿದಿದ್ದು, ರೈತ ಹೋರಾಟಗಾರರ ಪ್ರತಿಭಟನೆಯ ಮುನ್ಸೂಚನೆಯಿಂದ ಸರ್ಕಾರವು ಸಭೆಯನ್ನು ಸ್ಥಳಾಂತರಿಸಲಾಗಿದೆ. ಇದರಿಂದಾಗಿ ಸಿದ್ಧತೆಗಳಿಗೆ ವ್ಯಯಿಸಿದ ಕೋಟ್ಯಂತರ ರೂ. ವ್ಯರ್ಥವಾಗಿದ್ದು, ಜನರ ಆಶಯಗಳಿಗೆ ತಣ್ಣೀರೆರಚಿದಂತಾಗಿದೆ.

ಆದರೆ, ಸರ್ಕಾರವು ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಿರುವುದನ್ನು ಸಮರ್ಥಿಸಿಕೊಂಡಿದ್ದು, ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಲಾಗಿದೆ ಎಂದು ಹೇಳಿದೆ.

ಜುಲೈ ತಿಂಗಳಲ್ಲಿ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅನೌಪಚಾರಿಕವಾಗಿ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌, ಕಾರಣಾಂತರಗಳಿಂದಾಗಿ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು ಮಾಡಲಾಗಿದೆ. ಅಲ್ಲಿನ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲಾಖೆಗಳು ಪ್ರಸ್ತಾವನೆ ಸಿದ್ದಪಡಿಸದಿರುವುದು ಮತ್ತು ತಾಂತ್ರಿಕ ಕಾರಣದಿಂದಾಗಿ ರದ್ದುಪಡಿಸಲಾಯಿತು ಎಂದು ಹೇಳಿದರು.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯು ಜುಲೈ 16 ಅಥವಾ 17ರಂದು ನಿಗದಿಯಾಗಬಹುದು. ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಮುಂದೂಡಲಾಯಿತು ಎಂದು ಸ್ಪಷ್ಟನೆ ನೀಡಿದರು.

Read More
Next Story