ಕೊಡಗಿನಲ್ಲಿ ಮಳೆ ಅಬ್ಬರ; ಹಾರಂಗಿ ಜಲಾಶಯದಿಂದ ನೀರು ಬಿಡುಗಡೆ; ಪ್ರವಾಹ ಎಚ್ಚರಿಕೆ
x

ಕೊಡಗಿನಲ್ಲಿ ಮಳೆ ಅಬ್ಬರ; ಹಾರಂಗಿ ಜಲಾಶಯದಿಂದ ನೀರು ಬಿಡುಗಡೆ; ಪ್ರವಾಹ ಎಚ್ಚರಿಕೆ

ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿರುವುದರಿಂದ, ಹಾರಂಗಿ ನದಿಯ ಒಳಹರಿವು ಇನ್ನಷ್ಟು ಹೆಚ್ಚಾಗಬಹುದು ಎಂದು ಕಾವೇರಿ ನೀರಾವರಿ ನಿಗಮವು ಮುನ್ನೆಚ್ಚರಿಕೆ ನೀಡಿದೆ.


ಮಡಿಕೇರಿ/ಬೆಂಗಳೂರು, ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ಇತ್ತ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಅತಿ ಭಾರಿ ಮಳೆಯಾಗುವ ಸಾಧ್ಯತೆಯ ಕುರಿತು ಎಚ್ಚರಿಕೆ ನೀಡಿದೆ.

ಕೊಡಗು ಜಿಲ್ಲೆಯ ಮಡಿಕೇರಿ ಸೇರಿದಂತೆ ಹಲವೆಡೆ ಶನಿವಾರ ಮಳೆ ಬಿರುಸುಗೊಂಡಿದೆ. ನಿರಂತರ ಮಳೆಯಿಂದಾಗಿ ಹಾರಂಗಿ ಜಲಾಶಯದ ಒಳಹರಿವು ಮಧ್ಯಾಹ್ನದ ವೇಳೆಗೆ ತೀವ್ರವಾಗಿ ಹೆಚ್ಚಳ ಕಂಡಿದೆ. ಪ್ರಸ್ತುತ ಒಳಹರಿವು 4 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದ್ದುನದಿಗೆ ಬಿಡಲಾಗುತ್ತಿರುವ ನೀರಿನ ಪ್ರಮಾಣವನ್ನೂ 4 ಸಾವಿರ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ.

ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿರುವುದರಿಂದ, ಹಾರಂಗಿ ನದಿಯ ಒಳಹರಿವು ಇನ್ನಷ್ಟು ಹೆಚ್ಚಾಗಬಹುದು ಎಂದು ಕಾವೇರಿ ನೀರಾವರಿ ನಿಗಮವು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ, ನದಿ ಪಾತ್ರದಲ್ಲಿರುವ ಗ್ರಾಮಗಳ ಜನತೆ ಮತ್ತು ದನಕರುಗಳ ಮಾಲೀಕರು ಎಚ್ಚರಿಕೆ ವಹಿಸುವಂತೆ, ನದಿ ತೀರಕ್ಕೆ ಇಳಿಯದಂತೆ ಮತ್ತು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಕರಾವಳಿಯಲ್ಲಿ ಅತಿ ಭಾರಿ ಮಳೆ, ರೆಡ್ ಅಲರ್ಟ್ ಘೋಷಣೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಭಾರತೀಯ ಹವಾಮಾನ ಇಲಾಖೆಯ (IMD) ವರದಿಯ ಪ್ರಕಾರ, ಈ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆ (Heavy to Very Heavy Rain) ನಿರೀಕ್ಷಿಸಲಾಗಿದೆ. ಕೆಲವು ಕಡೆಗಳಲ್ಲಿ ಅತ್ಯಂತ ಭಾರಿ ಮಳೆ (Extremely Heavy Rain – 20 ಸೆಂ.ಮೀ. ಗಿಂತ ಹೆಚ್ಚು) ಆಗುವ ಸಾಧ್ಯತೆಯೂ ಇದೆ.

ಪಶ್ಚಿಮ ಘಟ್ಟದ ಭಾಗದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲೂ ಮುಂದುವರಿದ ಭಾರಿ ಮಳೆ ದಾಖಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಅನೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡ ವರದಿಗಳಾಗಿವೆ. ನದಿಗಳು ತುಂಬಿ ಹರಿಯುತ್ತಿದ್ದು, ಕೆಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ರಸ್ತೆ ಸಂಚಾರಕ್ಕೂ ಅಡಚಣೆಯುಂಟಾಗಿದ್ದು, ಕೆಲವು ಕಡೆಗಳಲ್ಲಿ ಮರಗಳು ಧರೆಗುರುಳಿವೆ.

IMD ಜೂನ್ 17ರವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಜೂನ್ 17ರವರೆಗೆ ವ್ಯಾಪಕ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 14ರವರೆಗೆ "ಸಾಮಾನ್ಯ ಮಳೆ"ಯಾಗಲಿದ್ದು, ನಂತರದ ಮೂರು ದಿನಗಳಲ್ಲಿ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Read More
Next Story