
ಕರ್ನಾಟಕ ಹೈಕೋರ್ಟ್
ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಮಧ್ಯಂತರ ತಡೆ: ಸಾರ್ವಜನಿಕರು ನಿರಾಳ
ನಗರದ ನಿವಾಸಿ ಜೆ. ಸುನೀಲ್ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ತುರ್ತು ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠವು ಕೈಗೆತ್ತಿಕೊಂಡಿತು.
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ನಿಗಮಗಳ ನೌಕರರು ಮಂಗಳವಾರದಿಂದ (ಆಗಸ್ಟ್ 5) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮುಷ್ಕರದಿಂದ ಸಾರ್ವಜನಿಕರಿಗೆ ಆಗುವ ತೀವ್ರ ತೊಂದರೆಯನ್ನು ಪರಿಗಣಿಸಿ, ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿದ್ದು ನಾಳೆ ಅಂದರೆ ಆಗಸ್ಟ್ 5ರಂದು ಪ್ರತಿಭಟನೆ ನಡೆಸದಂತೆ ಹೇಳಿದೆ.
ನಗರದ ನಿವಾಸಿ ಜೆ. ಸುನೀಲ್ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ತುರ್ತು ವಿಚಾರಣೆಯನ್ನು ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠವು ಕೈಗೆತ್ತಿಕೊಂಡಿತು. ಸಾರಿಗೆ ನೌಕರರು ಮುಷ್ಕರ ನಡೆಸಿದರೆ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಸಾಮಾನ್ಯ ಜನರ ದೈನಂದಿನ ಜೀವನಕ್ಕೆ ಕಷ್ಟವಾಗಲಿದೆ ಎಂದು ಅರ್ಜಿದಾರರ ಪರ ವಕೀಲರು ಪೀಠದ ಗಮನಕ್ಕೆ ತಂದರು. ವಿಷಯದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯ, ಮಧ್ಯಾಹ್ನವೇ ವಿಚಾರಣೆ ನಡೆಸಿ, ಮುಷ್ಕರಕ್ಕೆ ತಡೆ ನೀಡುವಂತೆ ಆದೇಶಿಸಿತು.
ಶಾಶ್ವತ ಪರಿಹಾರಕ್ಕೆ ಕ್ರಮ
ಸಾರಿಗೆ ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಅಲ್ಲದೆ, ಉದ್ದೇಶಿತ ಮುಷ್ಕರವನ್ನು ಕಾನೂನುಬಾಹಿರ ಎಂದು ಘೋಷಿಸಿ, ಮುಷ್ಕರದಲ್ಲಿ ಭಾಗವಹಿಸುವ ಸಂಘಟನೆಗಳು ಮತ್ತು ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲಾ ನಿಗಮಗಳು ತಮ್ಮ ಸೇವೆಯನ್ನು ಯಾವುದೇ ಅಡೆತಡೆಯಿಲ್ಲದೆ ನಿರ್ವಹಿಸುವಂತೆ ನಿರ್ದೇಶಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು. .