
Mysore MUDA Case | ಮೇಲ್ಮನವಿಗಳ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್; ಏಪ್ರಿಲ್ 28ಕ್ಕೆ ನಿಗದಿ
ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಒಟ್ಟಾಗಿ ಮುಂದೂಡುವಂತೆ ಕೋರಿದ ಹಿನ್ನೆಲೆಯಲ್ಲಿ ಏಪ್ರಿಲ್ 28ಕ್ಕೆ ಮುಂದೂಡಿ, ನ್ಯಾಯಾಲಯ ಅದೇಶಿಸಿದೆ.
ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಭೂಮಾಲೀಕ ಜೆ.ದೇವರಾಜು ಸಲ್ಲಿಸಿದ್ದ ಮೂರು ಮೇಲ್ಮನವಿಗಳ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 28ಕ್ಕೆ ಮುಂದೂಡಿದೆ.
ಸೆ.24ರಂದು ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ಹಾಗೂ ವಿವಾದಿತ ಪ್ರಕರಣದಲ್ಲಿ ತಮ್ಮನ್ನು ವೃಥಾ ಎಳೆದು ತರಲಾಗಿದೆ ಎಂದು ಆರೋಪಿಸಿ ಭೂಮಾಲೀಕ ಜೆ ದೇವರಾಜು ಪ್ರತ್ಯೇಕವಾಗಿ ಸಲ್ಲಿಸಿದ್ದ ಎರಡು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ ಐ ಅರುಣ್ ನೇತೃತ್ವದ ವಿಭಾಗೀಯ ಪೀಠವು ಪಕ್ಷಕಾರರ ಕೋರಿಕೆಯಂತೆ ಏಪ್ರಿಲ್ 28ಕ್ಕೆ ಮುಂದೂಡಿತು.
ಈ ಹಿಂದೆ ಮಾರ್ಚ್ 22ಕ್ಕೆ ಅರ್ಜಿಗಳ ವಿಚಾರಣೆ ನಿಗದಿಯಾಗಿದ್ದವು. ಸಿದ್ದರಾಮಯ್ಯ ಪರ ವಕೀಲರು “ಇವು ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿಗಳಾಗಿವೆ. ಹೈಕೋರ್ಟ್ ಶನಿವಾರ ಕಲಾಪ ನಡೆಸುವುದಿಲ್ಲ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಎಲ್ಲರೂ ಒಟ್ಟಾಗಿ ವಿಚಾರಣೆ ಮುಂದೂಡುವಂತೆ ಕೋರಿದ್ದೇವೆ. ಹೀಗಾಗಿ, ಅವುಗಳನ್ನು ಏಪ್ರಿಲ್ 28ಕ್ಕೆ ವಿಚಾರಣೆ ನಡೆಸಬೇಕು” ಎಂದರು. ಇದಕ್ಕೆ ಪೀಠವು ಸಮ್ಮತಿಸಿತು.
2024ರ ಸೆಪ್ಟೆಂಬರ್ 24ರಂದು ಹೈಕೋರ್ಟ್ನ ಏಕಸದಸ್ಯ ಪೀಠವು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಅಕ್ಟೋಬರ್ 24ರಂದು ಮೇಲ್ಮನವಿ ಸಲ್ಲಿಸಿದ್ದಾರೆ. ಆನಂತರ ಭೂ ಮಾಲೀಕ ದೇವರಾಜು ಅವರು ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎರಡು ಮೇಲ್ಮನವಿ ಸಲ್ಲಿಸಿದ್ದಾರೆ. ಐದು ತಿಂಗಳಿಂದ ಇಂದಿನವರೆಗೂ ಅರ್ಜಿಗಳು ವಿಚಾರಣೆಯನ್ನೇ ಕಂಡಿಲ್ಲ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠವು ಈಚೆಗೆ ವಜಾ ಮಾಡಿತ್ತು. ಜಾರಿ ನಿರ್ದೇಶನಾಲಯವು ಸಿಎಂ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಪಾರ್ವತಿ ಅವರಿಗೆ ವಿವಾದಿತ 14 ನಿವೇಶನಗಳ ಹಂಚಿಕೆ ಮಾಡಿದ ಸಂದರ್ಭದಲ್ಲಿ ಮುಡಾ ಆಯುಕ್ತರಾಗಿದ್ದ ಡಾ. ಡಿ ಬಿ ನಟೇಶ್ ವಿರುದ್ಧ ದಾಖಲಿಸಿದ್ದ ಇಸಿಐಆರ್ ಮತ್ತು ಸಮನ್ಸ್ಗಳನ್ನು ಹೈಕೋರ್ಟ್ನ ಮತ್ತೊಂದು ಏಕಸದಸ್ಯ ಪೀಠವು ವಜಾ ಮಾಡಿದೆ. ಈ ಆದೇಶವನ್ನು ಜಾರಿ ನಿರ್ದೇಶನಾಲಯವು ಪ್ರಶ್ನಿಸಿದ್ದು, ಆ ಮೇಲ್ಮನವಿಯೂ ಹೈಕೋರ್ಟ್ನಲ್ಲಿ ಬಾಕಿ ಇದೆ.
ಇದೆಲ್ಲದರ ಮಧ್ಯೆ, ಲೋಕಾಯುಕ್ತ ಪೊಲೀಸರು ಸಿಎಂ, ಅವರ ಪತ್ನಿ, ಭಾವ ಮೈದುನ ಸೇರಿ ಐವರ ವಿರುದ್ಧ ಯಾವುದೇ ದಾಖಲೆ ಇಲ್ಲ ಎಂದು ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಈಗ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಯಲ್ಲಿ ವ್ಯತ್ಯಾಸಗಳಿವೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೆಚ್ಚುವರಿ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಯೂ ವಿಚಾರಣಾ ಹಂತದಲ್ಲಿದೆ.