Mysore MUDA case | ಲೋಕಾಯುಕ್ತ, ಇಡಿ ಆದ ಬಳಿಕ ಸಿಬಿಐ? ಸಿದ್ದರಾಮಯ್ಯ ವಿರುದ್ಧ ತನಿಖೆ; ಇಂದು ಹೈಕೋರ್ಟ್‌ ನಿರ್ಧಾರ ಪ್ರಕಟ
x

Mysore MUDA case | ಲೋಕಾಯುಕ್ತ, ಇಡಿ ಆದ ಬಳಿಕ ಸಿಬಿಐ? ಸಿದ್ದರಾಮಯ್ಯ ವಿರುದ್ಧ ತನಿಖೆ; ಇಂದು ಹೈಕೋರ್ಟ್‌ ನಿರ್ಧಾರ ಪ್ರಕಟ

ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಅರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಹೈಕೋರ್ಟ್‌ನ ಧಾರವಾಡ ಪೀಠ ಗುರುವಾರ (ಇಂದು) ಪ್ರಕಟಿಸಿಲಿದೆ.


ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯ (ಇಡಿ)ದಿಂದ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು (ಗುರುವಾರ) ಕಾನೂನಾತ್ಮಕವಾಗಿ ಪ್ರಮುಖ ದಿನ. ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಅರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಹೈಕೋರ್ಟ್‌ನ ಧಾರವಾಡ ಪೀಠ ಪ್ರಕಟಿಸಿಲಿದೆ.

ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿದ್ದ ಅರ್ಜಿಯ ಕುರಿತು ಜ.27ರಂದು ವಿಚಾರಣೆ ನಡೆಸಿದ ಹೈಕೋರ್ಟ್‌ ಧಾರವಾಡ ಪೀಠ, ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಲೋಕಾಯುಕ್ತ ಪೊಲೀಸರು ಈವರೆಗಿನ ತನಿಖೆ ವರದಿ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿ ಸಿಬಿಐ ತನಿಖೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೈಕೋರ್ಟ್‌ ಹೇಳಿತ್ತು. ಗುರುವಾರ ಬೆಳಿಗ್ಗೆ 10.30 ಕ್ಕೆ ನಿರ್ಧಾರ ಪ್ರಕಟವಾಗಲಿದೆ.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಅಕ್ರಮ ನಡೆದಿದೆ; ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಕಾನೂನು ಉಲ್ಲಂಘಿಸಿ ತಮ್ಮ ಪತ್ನಿಗೆ ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್‌ ಮೊರೆಹೋಗಿರುವ ದೂರುದಾರರಲ್ಲಿ ಒಬ್ಬರಾಗಿರುವ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಎರಡೂ ಕಡೆಯ ವಕೀಲರ ವಾದ ಆಲಿಸಿ, ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಅಲ್ಲದೆ, ಪ್ರಕರಣದ ಕುರಿತು ಈಗಾಗಲೇ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ತಮ್ಮ ಅಂತಿಮ ವರದಿಯನ್ನು ಸಲ್ಲಿಸಲು ಕೂಡ ನ್ಯಾಯಾಲಯ ಕಾಲಾವಕಾಶ ನೀಡಿದ್ದು, ಸಿಬಿಐ ತನಿಖೆ ಕುರಿತು ಅರ್ಜಿಯ ಮೇಲಿನ ಆದೇಶ ಪ್ರಕಟಿಸುವವರೆಗೆ ಲೋಕಾಯುಕ್ತ ಅಂತಿಮ ವರದಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹಾಗಾಗಿ ಜ.27ರಂದು ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಮಧ್ಯಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದರು.

ದೂರುದಾರ ಸ್ನೇಹಮಯಿ ಕೃಷ್ಣ ಪರ ವಾದವೇನು?

ಯಾವುದೇ ಪ್ರಕರಣದ ಶಂಕಿತ ಆರೋಪಿಯೇ ತನ್ನ ವಿರುದ್ಧ ತನಿಖೆ ನಡೆಸಬೇಕಾದ ತನಿಖಾ ತಂಡವನ್ನು ಆಯ್ಕೆ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪುಗಳಿವೆ. ಸ್ಥಳೀಯ ಪೊಲೀಸರಿಂದ ತನಿಖೆ ನಡೆದರೆ ನ್ಯಾಯ ದೊರೆಯುವುದು ಸಾಧ್ಯವಿಲ್ಲ. ಆ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರ ಪರ ಹಿರಿಯ ವಕೀಲ ಮಣೀಂದರ್ ಸಿಂಗ್ ವಾದಿಸಿದ್ದರು.

ತಮ್ಮ ವಾದಕ್ಕೆ ಪೂರಕವಾಗಿ ಅವರು, ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ವಿಷಯದಲ್ಲಿ ಈ ಹಿಂದಿನ ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ವಯ ಸ್ವತಂತ್ರ ತನಿಖೆ ಅನಿವಾರ್ಯ. ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಧೀನದಲ್ಲಿದ್ದಾರೆ. ಹಗರಣದಲ್ಲಿ ರಾಜಕೀಯ ಮುಖಂಡರ ಹೆಸರು ಇರುವುದರಿಂದ ಸ್ಥಳೀಯ ಪೊಲೀಸರಿಂದ ದಕ್ಷ ತನಿಖೆ ಸಾಧ್ಯವಿಲ್ಲ. ರಾಜಕೀಯ ಒತ್ತಡದಿಂದ ತನಿಖೆ ಹಳಿ ತಪ್ಪಬಹುದು ಎಂದು ಹೇಳಿದ್ದರು.

ಪಂಜರದೊಳಗಿನ ಗಿಣಿ ಸಿಬಿಐ: ಕಪಿಲ್ ಸಿಬಲ್

ಸಿಬಿಐ ಪಂಜರದೊಳಗಿನ ಗಿಣಿ ಎಂದೂ ಕೂಡ ‘ಸುಪ್ರೀಂ’ ಹೇಳಿದೆ. ಹೀಗಾಗಿ ಸಿಬಿಐ ಕೂಡ ಆ ಅಭಿಪ್ರಾಯವನ್ನು ಹೋಗಲಾಡಿಸಬೇಕಿದೆ. ಹೀಗಾಗಿ ಲೋಕಾಯುಕ್ತ ಪೊಲೀಸರನ್ನು ಸಂಶಯಿಸಬಾರದೆಂದು ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್ ಸಿಬಲ್ ಹೇಳಿದ್ದರು.

ಸರ್ಕಾರ ಸಿಬಿಐ ತನಿಖೆಗೆ ಸಾಮಾನ್ಯ ಅನುಮತಿ ಹಿಂಪಡೆದಿದೆ. ಸಿಬಿಐ ಸ್ವತಂತ್ರವಾಗಿಲ್ಲದಿರುವುದೇ ಸರ್ಕಾರದ ಈ ಕ್ರಮಕ್ಕೆ ಕಾರಣವಾಗಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಹಿಡಿತದಲ್ಲಿದ್ದಾರೆ ಎಂದು ಅವರು ಹೇಳಿದ್ದರು. ಹಾಗೆ ಹೇಳುವುದಾದರೆ, ಸಿಬಿಐ ಕೂಡಾ ಕೇಂದ್ರ ಸರ್ಕಾರದ ಹಿಡಿತದಲ್ಲಿದೆ. ಹೀಗಾಗಿ ಸಿಬಿಐಯನ್ನು ಕೂಡ ಸ್ವತಂತ್ರ ತನಿಖಾ ಸಂಸ್ಥೆ ಎನ್ನಲಾಗುವುದಿಲ್ಲ. ಲೋಕಾಯುಕ್ತ ಸಂಸ್ಥೆ ಕಳಂಕಿತ ಎನ್ನಲಾಗುವುದಿಲ್ಲ. ಲೋಕಾಯುಕ್ತ ಸಂಸ್ಥೆಯ ನಿಗಾ ಇರುವುದರಿಂದ ತನಿಖೆ ಸ್ವತಂತ್ರವಾಗಿರಲಿದೆ ಎಂದು ಸಮರ್ಥಿಸಿದರು.

ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ ವಾದ

ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಸಿಬಿಐ ತನಿಖೆಗೆ ಅರ್ಹವಾಗಲು ಇದು ಅಪರೂಪದ ಪ್ರಕರಣವಲ್ಲ. ಲೋಕಾಯುಕ್ತ ತನಿಖೆಯಲ್ಲಿ ಮಧ್ಯಪ್ರವೇಶಿಸಿ ಸಿಬಿಐಗೆ ಹಸ್ತಾಂತರ ಮಾಡುವುದು ಸರಿಯಲ್ಲ. ದೂರುದಾರರಿಗೆ ರಾಜ್ಯಪಾಲರ ಅನುಮತಿ ಬೇಕಿತ್ತು ಪಡೆದರು. ಮೊದಲಿಗೆ ಲೋಕಾಯುಕ್ತ ಪೊಲೀಸರ ತನಿಖೆಗೆ ಕೋರಿದರು. ಆ ತನಿಖೆ ಆಗುವ ಮೊದಲೇ ಈಗ ಸಿಬಿಐ ತನಿಖೆಗೆ ಕೇಳುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಭೂಮಾಲೀಕರ ಪರ ವಕೀಲರ ವಾದವೇನು?

ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ವಾದ ಮಂಡಿಸಿದ್ದರು. ದೂರುದಾರರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಬೇಕೆಂದು ಈ ಹಿಂದೆ ಕೋರಿದ್ದರು. ಈಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಇದೀಗ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ಸೂಕ್ತವಲ್ಲ ಎಂದು ವಾದಿಸಿದರು. ಅಲ್ಲದೆ, ದೇವರಾಜು ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ. ಹೀಗಾಗಿ ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲವೆಂದು ಹೇಳಿದ್ದರು. ದೇವರಾಜು ಹೆಸರಿಗೆ ಇತರೆ ಮಾಲೀಕರು ಹಕ್ಕು ಬಿಡುಗಡೆ ಮಾಡಿದ್ದಾರೆ. ಈ ಅಂಶವನ್ನು ಮುಚ್ಚಿಟ್ಟು ದೂರು ದಾಖಲಿಸಿದ್ದಾರೆ ಎಂಬ ಅಂಶವನ್ನೂ ದುಷ್ಯಂತ್ ದವೆ ಹೈಕೋರ್ಟ್ ಗಮನಕ್ಕೆ ತಂದಿದ್ದರು.

Read More
Next Story