
ಅಪಘಾತವಾದ ಸ್ಥಳದಲ್ಲಿ ಉರುಳಿ ಬಿದ್ದಿರುವ ಬಸ್
ಚನ್ನರಾಯಪಟ್ಟಣ ಬಳಿ ಭೀಕರ ಸರಣಿ ಅಪಘಾತ: ಬಸ್ ಪಲ್ಟಿ, ಬೈಕ್ ಸವಾರ ಸ್ಥಳದಲ್ಲೇ ಸಾವು
ಹಾಸನ ಕಡೆಯಿಂದ ಬೆಂಗಳೂರಿನತ್ತ ಅತಿವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಹೆದ್ದಾರಿಯಿಂದ ಪಕ್ಕದ ಸರ್ವಿಸ್ ರಸ್ತೆಗೆ ನುಗ್ಗಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರೊಂದು ಸಂಪೂರ್ಣ ನಜ್ಜುಗುಜ್ಜಾಗಿದೆ. ಖಾಸಗಿ ಬಸ್, ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಈ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಹಾಸನ ಕಡೆಯಿಂದ ಬೆಂಗಳೂರಿನತ್ತ ಅತಿವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಹೆದ್ದಾರಿಯಿಂದ ಪಕ್ಕದ ಸರ್ವಿಸ್ ರಸ್ತೆಗೆ ನುಗ್ಗಿದೆ. ಅದೇ ಸಮಯದಲ್ಲಿ ಸರ್ವಿಸ್ ರಸ್ತೆಯಲ್ಲಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದ ಸ್ಕೂಟರ್ ಸವಾರರಿಗೆ ಬಸ್ ರಭಸದಿಂದ ಗುದ್ದಿದೆ. ನಂತರ, ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.
ಸ್ಥಳದಲ್ಲೇ ಪ್ರಾಣಬಿಟ್ಟ ಸ್ಕೂಟರ್ ಸವಾರ
ಅಪಘಾತದಲ್ಲಿ ಮಸಕನಹಳ್ಳಿ ಗ್ರಾಮದ ನಿವಾಸಿ ಎಂ.ಸಿ. ದೇವರಾಜ್ (54) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ತಮ್ಮ ಕೆಲಸ ಮುಗಿಸಿ ಸ್ಕೂಟರ್ನಲ್ಲಿ ಊರಿಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್, ಅಪಘಾತದ ಸಮಯದಲ್ಲಿ ಬಸ್ನಲ್ಲಿ ಚಾಲಕ ಮತ್ತು ನಿರ್ವಾಹಕರನ್ನು ಹೊರತುಪಡಿಸಿ ಬೇರೆ ಯಾವುದೇ ಪ್ರಯಾಣಿಕರು ಇರಲಿಲ್ಲವಾದ್ದರಿಂದ, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ
ರಾತ್ರಿ ಸಮಯದಲ್ಲಿ ನಡೆದ ಈ ಅಪಘಾತದಿಂದಾಗಿ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನ ಕಡೆಗೆ ಸಾಗುವ ಮಾರ್ಗದಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಹಿರೀಸಾವೆ ಪೊಲೀಸ್ ಠಾಣೆಯ ಎಸ್ಐ ರೂಪಾ ಬಿರಾದಾರ್ ಮತ್ತು ಸಿಬ್ಬಂದಿ, ಕ್ರೇನ್ ಸಹಾಯದಿಂದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು. ಈ ಸಂಬಂಧ ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

