Hubballi womans undressing case: Home Minister Parameshwara considers CID investigation
x

ಗೃಹ ಸಚಿವ ಡಾ.ಜಿ. ಪರಮೇಶ್ವರ್‌

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ್ ಚಿಂತನೆ

ಬಳ್ಳಾರಿ ಘಟನೆ ನಡೆದ ಕೂಡಲೇ ನಾನು ಹೋಗಿ ಪೊಲೀಸರಿಗೆ ಏನೇನೋ ಸೂಚನೆಗಳನ್ನು ಕೊಟ್ಟಿದ್ದರೆ, ಅವರ ಪರವಾಗಿ ಸೂಚನೆ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದವು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದರು.


Click the Play button to hear this message in audio format

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಗೃಹ ಕಚೇರಿಯಲ್ಲಿ ಶುಕ್ರವಾರ(ಜ.9) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯನ್ನು ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆನಂತರ ಸರ್ಕಾರ, ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಲ್ಲವನ್ನು ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ಮಹಿಳೆ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ. ಪೊಲೀಸರು ಕೂಡಲೇ ಕ್ರಮ ವಹಿಸಿದ್ದಾರೆ. ಪೊಲೀಸರು ವಿವಸ್ತ್ರಗೊಳಿಸಿಲ್ಲ, ಆಕೆಯೇ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. ಇನ್ನೂ ಕೂಡ ವಿವರವಾಗಿ ತನಿಖೆ ಮಾಡಬೇಕು ಎಂದು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸ್ಪಷ್ಟವಾಗಿ ಗೊತ್ತಾಗಬೇಕಾದರೆ ತನಿಖೆಯಾಗಬೇಕು ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಜವಾಬ್ದಾರಿಯುತ ಸಚಿವರು ಮತ್ತು ಉಪ ಮುಖ್ಯಮಂತ್ರಿಗಳು. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳುವ ಪ್ರಕಾರ ಹೆಚ್ಚಿನ ಅಧಿಕಾರ ಇಲ್ಲ ಎಂಬುದು ಸಂವಿಧಾನಾತ್ಮಕವಾಗಿ ಸರಿ ಇರಬಹುದು. ಆದರೆ, ಸರ್ಕಾರದ ಪ್ರತಿನಿಧಿಯಾಗಿ ಡಿ.ಕೆ.ಶಿವಕುಮಾರ್ ಬಳ್ಳಾರಿಗೆ ಹೋಗಿರುವುದನ್ನು ತಪ್ಪು ಎಂದು ಹೇಳುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಎಂದು ಪ್ರಮಾಣ ವಚನ ಕೊಟ್ಟಿದ್ದಾರೆ. ನಾನು ಹೋಗುವುದಕ್ಕೆ ಆಗಿರಲಿಲ್ಲ. ಆ ಜವಾಬ್ದಾರಿಯಿಂದ ಅವರು ಹೋಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

ನಾನು ಗೃಹ ಇಲಾಖೆಯ ಸಚಿವ. ಘಟನೆ ನಡೆದ ಕೂಡಲೇ ನಾನು ಬಳ್ಳಾರಿಗೆ ಹೋಗಿದ್ದರೆ, ಪೊಲೀಸರಿಗೆ ಏನೇನೋ ಸೂಚನೆಗಳನ್ನು ಕೊಟ್ಟಿದ್ದರೆ, ಅವರ ಪರವಾಗಿ ಸೂಚನೆ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದವು. ನಾವು ಭೇಟಿ ನೀಡುವಾಗ ಯೋಚನೆ ಮಾಡಿ, ತನಿಖೆಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣದಿಂದ ವಿಳಂಬ ಮಾಡುತ್ತೇವೆ. ಅದೇ ಕಾರಣದಿಂದ ಇದುವರೆಗೂ ಬಳ್ಳಾರಿಗೆ ಹೋಗಿಲ್ಲ ಎಂದರು.

ಡಿ.ಕೆ. ಶಿವಕುಮಾರ್‌ ಹಸ್ತಕ್ಷೇಪ ಮಾಡಿಲ್ಲ

ಉಪಮುಖ್ಯಮಂತ್ರಿಯಾಗಿ, ಸಚಿವರಾಗಿ, ಸರ್ಕಾರದ ಪ್ರತಿನಿಧಿಯಾಗಿ ಡಿ.ಕೆ.ಶಿವಕುಮಾರ್ ಅವರು ಹೋಗಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಮೃತ ಕುಟುಂಬಸ್ಥರನ್ನು ಭೇಟಿ ಮಾಡಿ, ಸಾಂತ್ವಾನ ಹೇಳಿದ್ದಾರೆ. ಇದು ತಪ್ಪು ಎನ್ನುವುದಾದರೆ ಏನು ಹೇಳಬೇಕು. ಸರ್ಕಾರದ ಪ್ರತಿನಿಧಿಯಾಗಿ ಭೇಟಿ ನೀಡಲು ಯಾರ ಅನುಮತಿ ಬೇಕು. ನಿಜವಾದ ಹಸ್ತಕ್ಷೇಪ ಮಾಡಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ಕೊಟ್ಟು, ಅದರ ತೀರ್ಮಾನದ ಮೇಲೆ ಬೇರೆ ರೀತಿಯ ಪರಿಣಾಮಗಳಾಗಿದ್ದರೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಯವರ ಹೇಳಿಕೆಯನ್ನು ಒಪ್ಪೋಣ. ಆದರೆ, ಜವಾಬ್ದಾರಿಯುತ ಸರ್ಕಾರದ ಪ್ರತಿನಿಧಿ ಭೇಟಿ ನೀಡಿರುವುದನ್ನು ಬೇರೆ ರೀತಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದರು.

ಅಧಿಕಾರಿಗಳ ವರ್ಗಾವಣೆ ಸಿಎಂ ಪರಮಾಧಿಕಾರ

ಇದುವರೆಗೂ ನಮ್ಮ ತೀರ್ಮಾನಗಳಲ್ಲಿ ಯಾರು ಕೂಡ ಇಲ್ಲಿವರೆಗೆ ಹಸ್ತಕ್ಷೇಪ ಮಾಡಿಲ್ಲ. ಮುಖ್ಯಮಂತ್ರಿಗಳು ಮತ್ತು ನಾನು ಒಟ್ಟಾಗಿ ಚರ್ಚಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ. ಹುಬ್ಬಳ್ಳಿ ಪ್ರಕರಣವನ್ನು ಸಿಐಡಿಗೆ ವಹಿಸುತ್ತೇನೆ ಎಂದು ನಾನು ನೇರವಾಗಿ ಹೇಳಬಹುದಿತ್ತು. ಆದರೆ, ಸಿಎಂ ಗಮನಕ್ಕೆ ತರದೇ ಇಂತಹ ತೀರ್ಮಾನಗಳನ್ನು ಮಾಡಲಾಗುತ್ತದೆಯೇ? ಬಳ್ಳಾರಿ ವಲಯ ಐಜಿಪಿಯಾಗಿ ಪಿ.ಎಸ್‌. ಹರ್ಷ ಅವರ ವರ್ಗಾವಣೆ ಮಾಡುವ ವಿಚಾರ ನನಗೆ ಗೊತ್ತಿಲ್ಲ ಎಂದು ನಾನು ಹೇಳಿಲ್ಲ. ನನಗೆ ಗೊತ್ತಿದೆ, ವರ್ಗಾವಣೆಯನ್ನು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯವರು ಮಾಡುತ್ತಾರೆ. ಆ ಅರ್ಥದಲ್ಲಿ ಹೇಳಿದ್ದೇನೆ. ಕಡತಕ್ಕೆ ಸಹಿ ಹಾಕಿ, ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವವರು ಮುಖ್ಯಮಂತ್ರಿಗಳು ಎಂದು ಸ್ಪಷ್ಟಪಡಿಸಿದರು.

ನರೇಗಾ ತಿದ್ದಪಡಿ; ರಾಜ್ಯಾದ್ಯಂತ ಪ್ರತಿಭಟನೆ

ನರೇಗಾ ಯೋಜನೆಗೆ ತಿದ್ದುಪಡಿ ತಂದಿರುವುದರಿಂದ ಫಲಾನುಭವಿಗಳಿಗೆ ಆಗುವ ತೊಂದರೆಗಳ ಬಗ್ಗೆ ತಿಳಿಸಲು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಹೆಸರು ಬದಲಾವಣೆ ಮಾಡಿರುವುದು ಮಹಾತ್ಮ ಗಾಂಧೀಜಿಯವರಿಗೆ‌ ಮಾಡಿರುವ ಅಪಮಾನ ಒಂದು ಭಾಗವಾದರೆ, ಪ್ರತಿ ಹಳ್ಳಿಗಳಲ್ಲಿ ಉದ್ಯೋಗ ನೀಡಲಾಗುವುದಿಲ್ಲ. ಹಣದ ತೀರ್ಮಾನ ದೆಹಲಿಯಲ್ಲಿ ಅಗಬೇಕು ಎಂಬ ವಿಚಾರವನ್ನು ಜನರ ಮುಂದೆ ಇಡುತ್ತೇವೆ ಎಂದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ನಮ್ಮೂರಿನ ರಸ್ತೆ, ಚರಂಡಿ ಮಾಡಲು ದೆಹಲಿಯಲ್ಲಿ ಕುಳಿತು ತೀರ್ಮಾನ ಆಗುವುದು ಬೇಡ ಎಂದು 1973ರಲ್ಲಿ ತಿದ್ದುಪಡಿ ಮೂಲಕ ಅಧಿಕಾರ ವಿಕೇಂದ್ರಿಕರಣ ಮಾಡಿ ಪಂಚಾಯಿತಿಗಳಿಗೆ ಅಧಿಕಾರಿ ನೀಡಿದರು. ಅದನ್ನು ಬದಲಾಯಿಸುವುದಾದರೆ, ಅಧಿಕಾರ ವಿಕೇಂದ್ರಿಕರಣದ ಬಗ್ಗೆ ಏಕೆ ಮಾತನಾಡಬೇಕು ಎಂದು ತಿಳಿಸಿದರು.

Read More
Next Story