
ಕರ್ನಾಟಕ ಹೈಕೋರ್ಟ್ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ
2013ರ ಏಪ್ರಿಲ್ 17ರಂದು ದೆಹಲಿ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು, 2015ರ ಮಾರ್ಚ್ 18ರಂದು ಕಾಯಂಗೊಂಡಿದ್ದರು.
ಕರ್ನಾಟಕ ಹೈಕೋರ್ಟ್ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ನೇಮಕ ಮಾಡಲಾಗಿದೆ. ಮೇ 26ರಂದು ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಮಾಡಿದ ಶಿಫಾರಸ್ಸಿನ ಅನ್ವಯ ಈ ನೇಮಕ ನಡೆದಿದೆ. ದೆಹಲಿ ಹೈಕೋರ್ಟ್ನ ಕಾರ್ಯಾಚರಣಾ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಭು ಬಖ್ರು ಇದೀಗ ತಮ್ಮ ಅನುಭವವನ್ನು ಕರ್ನಾಟಕ ಹೈಕೋರ್ಟ್ಗೆ ಮೀಸಲಿಡಲಿದ್ದಾರೆ.
ಇದೇ ವೇಳೆ ದೇಶದ ಇನ್ನೂ ನಾಲ್ಕು ಪ್ರಮುಖ ಹೈಕೋರ್ಟ್ಗಳಿಗೂ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ. ಮಧ್ಯಪ್ರದೇಶ ಹೈಕೋರ್ಟ್ಗೆ ನ್ಯಾಯಮೂರ್ತಿ ಸಂಜೀವ್ ಸಚ್ದೇವ್, ಜಾರ್ಖಂಡ್ ಹೈಕೋರ್ಟ್ಗೆ ನ್ಯಾಯಮೂರ್ತಿ ತಾರ್ಲೋಕ್ ಸಿಂಗ್ ಚೌಹಾಣ್, ಗುವಾಹಟಿ ಹೈಕೋರ್ಟ್ಗೆ ನ್ಯಾಯಮೂರ್ತಿ ಅಶುತೋಷ್ ಕುಮಾರ್ ಮತ್ತು ಪಾಟ್ನಾ ಹೈಕೋರ್ಟ್ಗೆ ನ್ಯಾಯಮೂರ್ತಿ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ.
ನ್ಯಾ. ವಿಭು ಬಖ್ರು: ಕಿರು ಪರಿಚಯ
ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ವಿಭು ಬಖ್ರು ಅವರು 1966ರಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿ ಜನಿಸಿದರು. ಅವರ ಶಿಕ್ಷಣವು ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ನಡದಿದೆ.
ನ್ಯಾ. ಬಖ್ರು ಅವರು 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಆರ್ಥಿಕ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿದ್ದ ಅವರು, 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿಯೂ ಅರ್ಹತೆ ಪಡೆದರು. ನಂತರ 1990ರಲ್ಲಿ ಎಲ್ಎಲ್ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿಕೊಂಡರು.
ನ್ಯಾಯಾಂಗದಲ್ಲಿನ ಅನುಭವ
ವಕೀಲರಾಗಿದ್ದ ಅವಧಿಯಲ್ಲಿ ನ್ಯಾ. ಬಖ್ರು ಅವರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯಮಂಡಳಿಗಳಲ್ಲಿ ವಕೀಲಿಕೆ ಮಾಡಿದರು. 2011ರಲ್ಲಿ ಅವರು ಹಿರಿಯ ವಕೀಲರಾಗಿ ಪದೋನ್ನತಿ ಪಡೆದರು.
2013ರ ಏಪ್ರಿಲ್ 17ರಂದು ದೆಹಲಿ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು, 2015ರ ಮಾರ್ಚ್ 18ರಂದು ಕಾಯಂಗೊಂಡರು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಕೊಲಿಜಿಯಂ, ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ನ್ಯಾ. ಬಖ್ರು ಅವರ ಹೆಸರನ್ನು ಶಿಫಾರಸ್ಸು ಮಾಡಿತ್ತು. ಅವರ ವಾಣಿಜ್ಯ ಮತ್ತು ಸಾಂವಿಧಾನಿಕ ಕಾನೂನುಗಳ ಮೇಲಿನ ಪರಿಣತಿಯು ಕರ್ನಾಟಕ ಹೈಕೋರ್ಟ್ಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ.