
ಸರ್ಕಾರಿ ಆಡಳಿತದಲ್ಲಿ ಕನ್ನಡ ಕಡ್ಡಾಯ: ಪೂರ್ಣ ಜಾರಿಗೆ ಕಟ್ಟುನಿಟ್ಟಿನ ಆದೇಶ, ಉಲ್ಲಂಘಿಸಿದರೆ ಶಿಸ್ತು ಕ್ರಮ ಖಚಿತ!
ಈ ನಿಯಮಗಳನ್ನು ಉಲ್ಲಂಘಿಸುವ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಾದ್ಯಂತ ಸರ್ಕಾರಿ ಆಡಳಿತದಲ್ಲಿ ಕನ್ನಡ ಭಾಷೆಯ ಸಂಪೂರ್ಣ ಬಳಕೆಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಎಲ್ಲಾ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಅನುದಾನಿತ ಸಂಘ-ಸಂಸ್ಥೆಗಳು ಸೇರಿದಂತೆ ಆಡಳಿತದ ಪ್ರತಿಯೊಂದು ಹಂತದಲ್ಲೂ ಕನ್ನಡವನ್ನು ಅಳವಡಿಸಿಕೊಳ್ಳುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ.
ಈ ನಿಯಮಗಳನ್ನು ಉಲ್ಲಂಘಿಸುವ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಭಾಷಾ ನೀತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದ್ದು, ಈ ಸುತ್ತೋಲೆಯು ಹಲವಾರು ನಿರ್ದಿಷ್ಟ ಅಂಶಗಳನ್ನು ಒಳಗೊಂಡಿದೆ. ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿಗಳು ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳೊಂದಿಗಿನ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಪತ್ರ ವ್ಯವಹಾರಗಳು ಸಂಪೂರ್ಣವಾಗಿ ಕನ್ನಡದಲ್ಲಿಯೇ ಇರಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಸಾರ್ವಜನಿಕ ಸಂಪರ್ಕದಿಂದ ಆಂತರಿಕ ವ್ಯವಹಾರದವರೆಗೂ ಕನ್ನಡವೇ
ಸಾರ್ವಜನಿಕವಾಗಿ, ಎಲ್ಲಾ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ನಿರ್ದೇಶಿಸಲಾಗಿದೆ. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ ಹಾಗೂ ಗಮನ ಸೆಳೆಯುವ ಸೂಚನೆಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ಆಡಳಿತಾತ್ಮಕವಾಗಿ, ನೇಮಕಾತಿ, ವರ್ಗಾವಣೆ, ರಜೆ ಮಂಜೂರಾತಿ ಸೇರಿದಂತೆ ಸರ್ಕಾರದ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಹೊರಡಿಸಬೇಕು.
ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆಗಳು ಮತ್ತು ದಾಖಲೆ ಪುಸ್ತಕಗಳನ್ನು ಕನ್ನಡದಲ್ಲಿಯೇ ಭರ್ತಿ ಮಾಡಬೇಕು. ಕಡತಗಳ ಮೇಲಿನ ಟಿಪ್ಪಣಿಗಳು ಮತ್ತು ಆಂತರಿಕ ಪತ್ರ ವ್ಯವಹಾರಗಳು ಸಹ ಕನ್ನಡದಲ್ಲಿಯೇ ಇರಬೇಕು ಎಂದು ಸುತ್ತೋಲೆ ತಿಳಿಸಿದೆ.
ಅಧಿಕಾರಿಗಳು ಮತ್ತು ನೌಕರರ ಪರಮ ಕರ್ತವ್ಯ
"ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಮತ್ತು ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲಾ ಅಧಿಕಾರಿಗಳು ಮತ್ತು ನೌಕರರ ಪರಮ ಕರ್ತವ್ಯವಾಗಿದೆ" ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಮಹತ್ವದ ನಿರ್ಧಾರವು ರಾಜ್ಯ ಸರ್ಕಾರದ ಆಡಳಿತದಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಇನ್ನಷ್ಟು ಬಲಪಡಿಸಲು ಮತ್ತು ಅದರ ವ್ಯಾಪ್ತಿಯನ್ನು ವಿಸ್ತರಿಸಲು ಒಂದು ಪ್ರಮುಖ ಹೆಜ್ಜೆಯಾಗಿದೆ.